ಮಾರ್ಚ್ 16-18 ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೋದಿ ಬೃಹತ್ ಸಮಾವೇಶ : ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು, ಮಾರ್ಚ್ 13: ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಭರ್ಜರಿಯಾಗಿ ತಯಾರಿ ನಡೆಸಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯ ಕಸರತ್ತು ಮುಂದುವರೆದಿದ್ದು, ಹಲವು ರಾಜ್ಯಗಳತ್ತ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಕೈಗೊಂಡಿದ್ದಾರೆ.
ಈ ಕುರಿತು ಶಾಸಕ ಸುನೀಲ್ ಕುಮಾರ್ ಮಾತನಾಡಿ, 16ರಂದು ಮಧ್ಯಾಹ್ನ 2 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಲಬುರ್ಗಿಗೆ ಭೇಟಿ ಕೊಡಲಿದ್ದಾರೆ. ಅಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ. 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಗೌರವಾನ್ವಿತ ಪ್ರಧಾನಮಂತ್ರಿಯವರು ಮಾತನಾಡುತ್ತಾರೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಪ್ರವಾಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 16ರಂದು ಕಲಬುರ್ಗಿ ಎನ್ವಿ ಆಟದ ಮೈದಾನದಲ್ಲಿ ಸಭೆ ನಡೆಯಲಿದೆ. 18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೌರವಾನ್ವಿತ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಗಣ್ಯರನೇಕರು ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಡಲಿದ್ದಾರೆ ಎಂದು ಹೇಳಿದರು.
ಶೀಘ್ರವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಚುನಾವಣೆ ಗೆಲುವಿಗೆ ಎಲ್ಲ ಪೂರ್ವಸಿದ್ಧತೆಗಳನ್ನು ಕರ್ನಾಟಕ ಬಿಜೆಪಿ ಮಾಡುತ್ತಿದೆ ಎಂದ ಸುನೀಲ್ ಕುಮಾರ್ ಅವರು, ಇವತ್ತು ರಾತ್ರಿ ಅಥವಾ ನಾಳೆ ಕರ್ನಾಟಕದ ಮೊದಲ ಹಂತದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆ ದೃಷ್ಟಿಯಿಂದ 28 ಲೋಕಸಭಾ ಕ್ಷೇತ್ರಗಳನ್ನು 8 ಕ್ಲಸ್ಟರ್ಗಳನ್ನಾಗಿ ನಾವು ವಿಂಗಡಿಸಿದ್ದೇವೆ. ಸ್ಥಳೀಯ ರಾಜಕೀಯ ಮತ್ತು ಭೌಗೋಳಿಕ ಹಿನ್ನೆಲೆಯನ್ನು ಕಣ್ಮುಂದೆ ಇಟ್ಟುಕೊಂಡು ಆ 8 ಕ್ಲಸ್ಟರ್ಗಳಲ್ಲಿ ಬೇರೆ ಬೇರೆ ರೀತಿಯ ಕಾರ್ಯಕ್ರಮ ಮತ್ತು ತಂತ್ರಗಾರಿಕೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಆ 8 ಕ್ಲಸ್ಟರ್ಗಳಿಗೆ ರಾಷ್ಟ್ರೀಯ ನಾಯಕರ ಪ್ರವಾಸಗಳು ಮುಕ್ತಾಯವಾಗಿವೆ. ಮೈಸೂರಿಗೆ ಅಮಿತ್ ಶಾ, ಕಲಬುರ್ಗಿಗೆ ಶಿವರಾಜ್ ಸಿಂಗ್ ಚೌಹಾಣ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬೆಳಗಾವಿಗೆ, ದೇವೇಂದ್ರ ಫಡ್ನವೀಸ್ ಅವರು ಮಂಗಳೂರಿಗೆ ಬಂದಿದ್ದರು. 8 ಕ್ಲಸ್ಟರ್ಗಳಲ್ಲೂ ಪ್ರವಾಸ ಮುಗಿದಿದೆ ಎಂದು ವಿವರ ನೀಡಿದರು.
ಕಾರ್ಯಕರ್ತರ ಸಮಾವೇಶ, ಹಿತೈಷಿಗಳ ಸಂಪರ್ಕವನ್ನು ಮಾಡಿದ್ದು, 8 ಕ್ಲಸ್ಟರ್ಗಳಲ್ಲಿ ಚುನಾವಣಾ ಸಿದ್ಧತೆಗಳನ್ನು ಮಾಡಿದ್ದಾರೆ. ಎರಡನೇ ಹಂತದಲ್ಲಿ ದೊಡ್ಡ ದೊಡ್ಡ ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಮೊದಲ ಹಂತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ 2 ದಿನಗಳ ಪ್ರವಾಸ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.












Click it and Unblock the Notifications