ಮತ್ತೆ ಚರ್ಚೆಗೆ ಬಂದ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ವಿಚಾರ!
ಬೆಂಗಳೂರು, ಜ. 1: ನಾಳೆ ಮಧ್ಯಾಹ್ನ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಸಿದ್ದಗಂಗಾ ಮಠದಲ್ಲಿ ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನದ ಬಳಿಕ ಅಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ಪ್ರಧಾನಿ ಮೋದಿ ಮಾಡಲಿದ್ದಾರೆ.
ಎರಡು ದಿನಗಳ ರಾಜ್ಯಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ 01.20 ಗಂಟೆಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ತುಮಕೂರಿಗೆ ಹೆಲಿಕ್ಯಾಪ್ಟರ್ನಲ್ಲಿ ತೆರಳಲಿದ್ದಾರೆ.
ನಂತರ ಮಧ್ಯಾಹ್ನ 2.15ಗಂಟೆಗೆ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ್ ಸ್ವಾಮೀಜಿ ಅವರಿಗೆ ಸಂಬಂಧಿಸಿದ ವಸ್ತುಸಂಗ್ರಹಾಲಯ ನಿರ್ಮಾಣ ಕಟ್ಟಡ ಶಂಕು ಸ್ಥಾಪನೆಯನ್ನುಪ್ರಧಾನಿ ಮೋದಿ ಮಾಡಲಿದ್ದಾರೆ. ಮಠದ ಖಾಸಗಿ ಕಾರ್ಯಕ್ರಮದಲ್ಲಿ ಆಯ್ದ ಗಣ್ಯರಿಗೆ ಮಾತ್ರ ಅವಕಾಶವಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸಿದ್ದಗಂಗಾ ಮಠಕ್ಕೆ ಭೇಟಿ ಕೊಡುತ್ತಿರುವುದರಿಂದ ಶ್ರೀ ಶಿವಕುಮಾರಸ್ವಾಮೀಜಿಗಳಿಗೆ 'ಭಾರತರತ್ನ' ಪ್ರಶಸ್ತಿ ಕುರಿತು ಮತ್ತೆ ಚರ್ಚೆ ಆರಂಭವಾಗಿದೆ.
ಸಿದ್ದಗಂಗಾ ಮಠದ ಕಾರ್ಯಕ್ರಮದ ಬಳಿಕ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ದೇಶದ ಆರು ಕೋಟಿ ರೈತ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಚಾಲನೆ ಕೊಡಲಿದ್ದಾರೆ. ಜೊತೆಗೆ ಮೀನು ಸಾಕಾಣಿಕೆದಾರರಿಗೆ ಸೌಲಭ್ಯಗಳ ವಿತರಣೆ ಸಮಾರಂಭಕ್ಕೆ ಚಾಲನೆ ಕೊಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ರಾಜ್ಯಗಳ 28 ಪ್ರಗತಿಪರ ರೈತರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ತುಮಕೂರಿನಲ್ಲಿ ಕಾರ್ಯಕ್ರಮಗಳ ಬಳಿಕ ಬೆಂಗಳೂರಿಗೆ ಆಗಮಿಸಿ ಸಂಜೆ 7.05ಕ್ಕೆ ಸುರಂಜನರಾವ್ ರಸ್ತೆಯ ಏರೊನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ಸ್(A.D.E) ಅಡಿಟೋರಿಯಂನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (D.R.D.O.)ಯ ಯುವ ವಿಜ್ಙಾನಿಗಳಿಗಾಗಿ ಸಂಶೋಧನಾ ಕೇಂದ್ರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಸ್ತವ್ಯ ಮಾಡಲಿದ್ದಾರೆ.
ನಾಡಿದ್ದು ಜ.3ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕಿ)ದಲ್ಲಿನ ಡಾ. ಬಾಬು ರಾಜೇಂದ್ರಪ್ರಸಾದ್ ಸಭಾಂಗಣದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ನ 107ನೇ ಸಮಾವೇಶಕ್ಕೆ ಚಾಲನೆ ಕೊಡಲಿದ್ದಾರೆ. ಸಮಾವೇಶ ಜ. 3 ರಿಂದ ಜ. 7ರವರೆಗೆ ನಡೆಯಲಿದೆ. ಬಳಿಕ ಮಧ್ಯಾಹ್ನ ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೆರಳಲಿದ್ದಾರೆ.












Click it and Unblock the Notifications