ಏಪ್ರಿಲ್ 3ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆ
ನವದೆಹಲಿ / ಬೆಂಗಳೂರು, ಮಾ 28: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 3ರಂದು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮೇ 2014ಕ್ಕೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜಧಾನಿ ದೆಹಲಿಯ ಹೊರಗೆ ನಡೆಯುತ್ತಿರುವ ಮೊದಲ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಾಗಲಿದೆ.

ಕರ್ನಾಟಕ ದೇಶದಲ್ಲಿನ ಕಾಂಗ್ರೆಸ್ ಅಧಿಕಾರದಲ್ಲಿರುವ ಪ್ರಮುಖ ರಾಜ್ಯವಾಗಿದ್ದು, ಬೆಂಗಳೂರಿನಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸುವ ಮೂಲಕ ರಾಜಕೀಯ ಸಂದೇಶ ರವಾನಿಸುವ ಉದ್ದೇಶ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರದ್ದು ಎನ್ನಲಾಗುತ್ತಿದೆ.
ಏಪ್ರಿಲ್ ಎರಡರಿಂದ ಮೂರು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನ ಲಲಿತ್ ಅಶೋಕ್ ಹೋಟೇಲ್ ನಲ್ಲಿ ನಡೆಯಲಿದೆ.
ಶುಕ್ರವಾರ ಏಪ್ರಿಲ್ 3ರಂದು ಸಂಜೆ 5ಗಂಟೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ರಾಜ್ಯ ಬಿಜೆಪಿ ಘಟಕ ಆಯೋಜಿಸಿದೆ. ಪ್ರಧಾನಿ ಮೋದಿ ಈ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷರು, ಉಪಾಧ್ಯಕ್ಷರು, ಎಂಟು ರಾಜ್ಯಗಳ ಮುಖ್ಯಮಂತ್ರಿಗಳು, ಎರಡು ರಾಜ್ಯದ ಉಪಮುಖ್ಯಮಂತ್ರಿಗಳು ಸೇರಿದಂತೆ ಪಕ್ಷದ ಅಂದಾಜು 320 ಪ್ರತಿನಿಧಿಗಳು ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ಮೋದಿ ಏಪ್ರಿಲ್ ಎರಡನೇ ತಾರೀಕು ಬೆಳಗ್ಗೆ ನಗರಕ್ಕೆ ಆಗಮಿಸಲಿದ್ದು, ಎರಡು ದಿನ ರಾಜಭವನದಲ್ಲಿ ತಂಗಲಿದ್ದು, ಏಪ್ರಿಲ್ 4ರಂದು ದೆಹಲಿಗೆ ತೆರಳಲಿದ್ದಾರೆಂದು ತಿಳಿದು ಬಂದಿದೆ.












Click it and Unblock the Notifications