ಕೋವಿಡ್-19 ಚಿಕಿತ್ಸೆ: ಬೆಂಗಳೂರಿಗರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ!
ಬೆಂಗಳೂರು, ಜೂ. 30: ಬೆಂಗಳೂರಿನಲ್ಲಿ ತೀವ್ರವಾಗಿ ಹೆಚ್ಚಾಗುತ್ತಿರುವ ಕೊರೊನಾ ವೈರಸ್ ಸೋಂಕಿತರಿಗ ಚಿಕಿತ್ಸೆ ಒದಗಿಸಲು ಸರ್ಕಾರ ತಡವಾಗಿಯಾದರೂ, ಮತ್ತಷ್ಟು ತಯಾರಿ ಮಾಡಿಕೊಳ್ಳುವತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಒಪ್ಪಿಕೊಂಡಿವೆ. ಈ ಸಂಬಂಧ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರ ನೇತೃತ್ವದಲ್ಲಿ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳ ಮುಖ್ಯಸ್ಥರ ಜೊತೆ ಸಭೆ ನಡೆಯಿತು.
Recommended Video
ಸೋಂಕಿತರ ಚಿಕಿತ್ಸಗೆ 4,500 ಸಾವಿರ ಬೆಡ್ಗಳನ್ನು ಮೀಸಲಿರಿಸಲು ಖಾಸಗಿ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯಸ್ಥರು ಒಪ್ಪಿಕೊಂಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಸಭೆಯ ಬಳಿಕ ಹೇಳಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಎರಡು ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ಕೊಟ್ಟಿದ್ದಾರೆ.

ವೈದ್ಯಕೀಯ ಮಹಾವಿದ್ಯಾಲಯಗಳು
ಸದ್ಯ ಬೆಂಗಳೂರಿನ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2200 ಹಾಸಿಗೆಗಳನ್ನು ಅಧಿಸೂಚಿಸಲಾಗಿದೆ. ಆದರೆ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಗಮನಿಸಿ, ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಸರ್ಕಾರ 4500 ಹಾಸಿಗೆಗಳನ್ನು ಪಡೆದುಕೊಳ್ಳಲು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳನ್ನು ಬಿಟ್ಟು, ಉಳಿದೆಲ್ಲ ವೈದ್ಯಕೀಯ ಕಾಲೇಜುಗಳು ಕೋವಿಡ್ ಪರೀಕ್ಷೆಗೆ ಪ್ರಯೋಗಾಲಯ ಸ್ಥಾಪನೆ ಮಾಡಿಕೊಂಡಿವೆ. ಈಗ ಉಳಿದ ಕಾಲೇಜುಗಳು ಲ್ಯಾಬ್ ಮಾಡಿಕೊಳ್ಳಲಿವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಒಟ್ಟು 6500 ಹಾಸಿಗೆಗಳು
ಸರ್ಕಾರಿ ಕಾಲೇಜುಗಳಲ್ಲಿ 2000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4500 ಸೇರಿದಂತೆ ಸುಮಾರು 6500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುವಂತೆ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಮನವಿ ಮಾಡಿದರು.
ಆಗ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್ ಚಿಕಿತ್ಸೆಗೆ ಸಹಕರಿಸುವ ಭರವಸೆಯನ್ನು ನೀಡಿದರು. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ವಿಮಾ ಸೌಲಭ್ಯ
ಕೋವಿಡ್ ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ಕೊಟ್ಟಿದ್ದಾರೆ.
ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿ ಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್ ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಸಮನ್ವಯ ಸಮಿತಿ ರಚನೆ
ಖಾಸಗಿಯವರೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು. ಇದಲ್ಲದೆ ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮ ವಹಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಇದಲ್ಲದೆ ಕೋವಿಡ್ ಕೇರ್ ಸೆಂಟರ್ಗಳಿಗೆ ಅಗತ್ಯ ಸಿಬ್ಬಂದಿ ಒದಗಿಸುವಂತೆ ಸೂಚಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications