ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜೀನಾಮೆಗೆ ಆಗ್ರಹ: ಕಾರಣವೇನು?
ಬೆಂಗಳೂರು, ಅಕ್ಟೋಬರ್ 10: ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಬಿಜೆಪಿಗರೇ ಮೊದಲು ವಿಜಯೇಂದ್ರ ಅವರಿಂದ ರಾಜಿನಾಮೆ ಕೊಡಿಸಿ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಭಾಗಿಯಾಗಿರುವ ವಿರೋಧ ಪಕ್ಷದ ನಾಯಕರಿಗೆ ರಾಜಿನಾಮೆ ಕೇಳಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಚುನಾವಣಾ ಆಯೋಗಕ್ಕೆ ವಿಜಯೇಂದ್ರ ಅವರು ಸಲ್ಲಿಸಿರುವ ಅಫಿಡವಿಟ್ ಅಲ್ಲಿ ಅವರ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. 16.09. 2022 ರಂದು ಲೋಕಾಯುಕ್ತದಿಂದ ಇವರ ಮೇಲೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಸೆಕ್ಷನ್ 7 A, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ ದೂರು ದಾಖಲಿಸಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇವರಿಗೆ ಸಮನ್ಸ್ ಜಾರಿಯಾಗಿದೆ.

ಮೇಲ್ಮನೆಯ ವಿರೋಧ ಪಕ್ಷದ ನಾಯಕರು ಸಹ ಸಿಎ ಸೈಟ್ ವಿಚಾರದಲ್ಲಿ ಅಕ್ರಮ ಎಸಗಿದ್ದಾರೆ. ಇವರ ರಾಜಿನಾಮೆ ಕೇಳಿ. ಆನಂತರ ನಮ್ಮ ಸಿಎಂ ಬಗ್ಗೆ ಮಾತನಾಡಿ. ಬಿಜೆಪಿಗರೇ ಮೂರು ಕಡೆ ಸಭೆ ನಡೆಸಿ ವಿಜಯೇಂದ್ರ ಅವರ ನಾಯಕತ್ವವನ್ನು ಪ್ರಶ್ನೆ ಮಾಡಿದ್ದಾರೆ. ಇವರ ನಾಯಕತ್ವವನ್ನು ಯಾರೂ ಸಹ ಒಪ್ಪಿಕೊಂಡಿಲ್ಲ. ಈಶ್ವರಪ್ಪ ಅವರು ನಿಮ್ಮ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷದವರೇ ನಿಮಗೆ ಮರ್ಯಾದೆ ಕೊಡುತ್ತಾರೆ.
ಬಿಜೆಪಿಯ ನೀತಿ ಪಾಠ ನೋಡಿದರೆ ನರಿಗಳು ನ್ಯಾಯ ಹೇಳಿದಂತೆ ಭಾಸವಾಗುತ್ತದೆ. ಕರ್ನಾಟಕ ಅತ್ಯಂತ ಭ್ರಷ್ಟ ರಾಜ್ಯ ಎಂದು ರಾಷ್ಟ್ರ ಮಟ್ಟದಲ್ಲಿ ಹರಾಜು ಹಾಕಿದ್ದು ಇದೇ ಬಿಜೆಪಿಯವರು. 2010ರಲ್ಲಿ ಔಟ್ ಲುಕ್ ಪತ್ರಿಕೆಯಲ ರಕ್ಷಾಪುಟದಲ್ಲಿ ಯಡಿಯೂರ್ಪ ಅವರ ಫೋಟೊ ಹಾಕಿ ಕರ್ನಾಟಕದ ಮರ್ಯಾದೆ ಹರಾಜು ಹಾಕಲಾಗಿತ್ತು. ಭ್ರಷ್ಟ ಇತಿಹಾಸ ಹೊಂದಿರುವ ಬಿಜೆಪಿಯವರು ನಮಗೆ ನೀತಿ ಪಾಠ ಹೇಳುತ್ತಿದ್ದಾರೆ. ಕರ್ನಾಟಕ ಮರ್ಯಾದೆ ತೆಗೆದವರು ಈಗ ನೈತಿಕತೆಯ ಪಾಠ ಮಾಡುತ್ತಿದ್ದಾರೆ.
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಬಿಟ್ಟರೆ ನಾನೇ ಶಕ್ತಿಯುತ ಎಂದು ಅಮಿತ್ ಶಾ ಅವರು ಬಿಂಬಿಸಿಕೊಳ್ಳುತ್ತಾರೆ. ಕಳೆದ 10 ವರ್ಷಗಳಲ್ಲಿ ಸುಮಾರು 5,297 ಅಕ್ರಮ ಹಣ ವರ್ಗಾವಣೆ ಕೇಸನ್ನು ಇಡಿ ಸಂಸ್ಥೆ ದಾಖಲಿಸಿದೆ. ಇದರಲ್ಲಿ 40 ಕೇಸ್ ಗಳು ಮಾತ್ರ ರುಜುವಾತಾಗಿದೆ. ಇದರಲ್ಲಿ ಶೇ 97 ರಷ್ಟು ಪ್ರಕರಣಗಳು ವಿರೋಧ ಪಕ್ಷಗಳ ವಿರುದ್ದ ದಾಖಲಿಸಲಾಗಿದೆ. ಇದು ರಾಜಕೀಯ ಪ್ರೇರಿತವಲ್ಲವೇ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರ ಮೇಲೆ ದೂರು ನೀಡಿದ ಟಿ.ಜೆ.ಅಬ್ರಹಾಂ ಅವರೇ ವಿಜಯೇಂದ್ರ ಅವರೇ ನೀಡಿರುವುದು ಆದರೆ ಇದುವರೆಗೂ ಕ್ರಮವಿಲ್ಲ. ಆದರೆ ಸಿದ್ದರಾಮಯ್ಯ ಅವರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೇಂದ್ರ ಬಿಜೆಪಿ ಸರ್ಕಾರದಿಂದ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ವಿಜಯೇಂದ್ರ ಅವರ ಮೇಲಿನ ಪ್ರಕರಣ ಇಡಿ ಕಣ್ಣಿಗೆ ಬಿದ್ದಿಲ್ಲವೇ? ಅವರೇ ಸ್ವತಃ ಒಪ್ಪಿಕೊಂಡಿರುವಾಗ ಏಕೆ ಕ್ರಮ ತೆಗೆದುಕೊಳ್ಳಲು ತಡವಾಗುತ್ತಿದೆ.
ಕಲ್ಕತ್ತಾ ಕಂಪೆನಿಯಿಂದ ಸುಮಾರು 12 ಕೋಟಿಗೂ ಹೆಚ್ಚು ಹಣ ವಿಜಯೇಂದ್ರ ಅವರಿಗೆ ಸಂದಾಯವಾಗಿದೆ. ಎಚ್ ಡಿ ಎಫ್ ಸಿ ಬ್ಯಾಂಕಿನಲ್ಲಿ ಇರುವ ಖಾತೆ ಸಂಖ್ಯೆ 50100016772791 ಯಾರದ್ದು ವಿಜಯೇಂದ್ರ ಅವರೇ? ರಾಜಗರನಾ ಸೇಲ್ಸ್ ಪ್ರೈ, ಲಿ, ನೌಟಂಕ್ ಪ್ರೈ, ಲಿ, ಗಣ ನಾಯಕ ಕಮಾಡಿಟಿ ಟ್ರೇಡ್, ಜಗದಾಂಭ, ರೆಮ್ಯಾಕ್ ಡಿಸ್ಟ್ರಿಬ್ಯೂಟರ್ ಕಂಪೆನಿ, ಸಕಂಬಾರಿ, ಸ್ಟಾಟ್ರಜಿಕ್ ವಿನ್ ಫ್ರಾ, ವಿಎಸ್ ಎಸ್ ಎಸ್ಟೇಟ್ ಕಂಪೆನಿಗಳು ಸೇರಿದಂತೆ ಅನೇಕ ಕಂಪೆನಿಗಳಿಗೂ ನಿಮಗೂ ಏನೂ ಸಂಬಂಧ. ಇದರಲ್ಲಿ ನಿಮ್ಮ ಕುಟುಂಬದ ಸದಸ್ಯರುಗಳೇ ಇದ್ದಾರೆ.
ವಿಜಯೇಂದ್ರ ಅವರ ಮೇಲೆ ಏಕೆ ಇಡಿ ಏಕೆ ಕ್ರಮ ತಗೆದುಕೊಳ್ಳುತ್ತಿಲ್ಲ. ಏಕೆಂದರೆ ಇದರ ವಿಸ್ತಾರ ಹೆಚ್ಚಿರಬಹುದು. ಯತ್ನಾಳ್ ಅವರು ಹೇಳಿದಂತೆ ಮಾರಿಷಸ್ ಸೇರಿದಂತೆ ಬೇರೆ ಕಡೆಗೂ ವಿಸ್ತಾರವಾಗಿರಬಹುದು. ಅಥವಾ ಮುಚ್ಚಿ ಹಾಕಲು ಪ್ರಯತ್ನ ಪಡುತ್ತಿರಬಹುದು. ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಕೆಳಗೆ ಇಳಿಯಲು ಇದೇ ಪ್ರಕರಣ ಕಾರಣ ಎಂದು ಹೇಳಿದ್ದಾರೆ.












Click it and Unblock the Notifications