ಕೊರೊನಾ ನೆಪದಲ್ಲಿ ತಪ್ಪು ಮುಚ್ಚಿಕೊಳ್ಳಲು ಮೋದಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಟೀಕೆ
ಬೆಂಗಳೂರು, ಸೆಪ್ಟೆಂಬರ್ 3: ಸರಕು ಮತ್ತು ಸೇವಾ ತೆರಿಗೆಯಲ್ಲಿನ ರಾಜ್ಯವಾರು ಪಾಲುಗಳು ಮತ್ತು ಪರಿಹಾರವನ್ನು ಒದಗಿಸದೆ ಭಾರತೀಯ ರಿಸರ್ವ್ ಬ್ಯಾಂಕ್ನಿಂದ ಸಾಲ ಪಡೆದುಕೊಳ್ಳಬೇಕೆಂದು ಎರಡು ಆಯ್ಕೆಗಳನ್ನು ಕೇಂದ್ರ ಸರ್ಕಾರ ನೀಡಿರುವುದು ಪ್ರತಿಪಕ್ಷಗಳು ಮತ್ತು ಬಿಜೆಪಿಯೇತರ ರಾಜ್ಯಗಳನ್ನು ಕೆರಳಿಸಿದೆ. ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಸರ್ಕಾರ ಈಗಾಗಲೇ ಎರಡು ಆಯ್ಕೆಗಳಲ್ಲಿ ಒಂದನ್ನು ಆಯ್ದುಕೊಳ್ಳಲು ಮುಂದಾಗಿದೆ. ಇದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿವೆ.
Recommended Video
ಜಿಎಸ್ಟಿ ಸಂಬಂಧ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ, ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.
ಜಿಎಸ್ಟಿಯಲ್ಲಿನ ರಾಜ್ಯದ ಪಾಲು & ಪರಿಹಾರ ಪಾವತಿಸುವ ಬದಲಿಗೆ ಆರ್ಬಿಐನಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ನೀಡಿರುವ ಸಲಹೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು. ಜಿಎಸ್ಟಿ ವಸೂಲಿಯಲ್ಲಿ ಉಂಟಾಗುವ ನಷ್ಟವನ್ನು 2020ರವರೆಗೆ ಕಟ್ಟಿಕೊಡುವ ಬದ್ಧತೆಯನ್ನು ಕೇಂದ್ರ 2017ರ ಜಿಎಸ್ಟಿ ಕಾಯ್ದೆಯಲ್ಲಿ ವ್ಯಕ್ತಪಡಿಸಿದೆ. ಅದರಂತೆ ನಡೆದುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
ವ್ಯಾಟ್ ಜಾರಿಯಲ್ಲಿದ್ದಾಗ ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು ಸಿಗುತ್ತಿತ್ತು. ಯುಪಿಎ ಸರ್ಕಾರ ರೂಪಿಸಿದ್ದ ಉತ್ತಮ ಜಿಎಸ್ಟಿ ಕಾಯ್ದೆಯನ್ನು ನರೇಂದ್ರ ಮೋದಿ ಅವರ ಸರ್ಕಾರ ಅವೈಜ್ಞಾನಿಕವಾಗಿ ಬದಲಾವಣೆ ಮಾಡಿ ಜಾರಿಗೆ ತಂದಿದೆ. ಇದರಿಂದ ಆರ್ಥಿಕ ವ್ಯವಸ್ಥೆಗೆ ಹಾನಿಯಾಗಲಿದೆ ಎಂದು ಕಾಂಗ್ರೆಸ್ ಮೊದಲಿನಿಂದಲೂ ಹೇಳುತ್ತಾ ಬಂದಿದೆ ಎಂದು ಪ್ರಿಯಾಂಕ್ ತಿಳಿಸಿದ್ದಾರೆ. ಮುಂದೆ ಓದಿ...

ತಪ್ಪು ಮುಚ್ಚಿಕೊಳ್ಳುವ ಪ್ರಯತ್ನ
ಪ್ರತಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳದ ಸರ್ವಾಧಿಕಾರಿ ಧೋರಣೆಯ ಕೇಂದ್ರ ಸರ್ಕಾರ, ತಾನು ಮಾಡಿದ ತಪ್ಪಿಗೆ ದೇಶದ ಜನ ದಂಡ ಕಟ್ಟಬೇಕೆಂದು ಬಯಸುತ್ತಿರುವುದು ಅಸಹನೀಯ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಆರ್ಥಿಕ ಕುಸಿತ ಶುರುವಾಗಿದ್ದು, ಈಗ ಕೊರೊನಾದ ನೆಪ ಇಟ್ಟುಕೊಂಡು ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ.

ಬಿಎಸ್ವೈ ತಿರಸ್ಕರಿಸಲಿ
ಭಾವನಾತ್ಮಕ ವಿಷಯಗಳನ್ನ ಕೇಂದ್ರಿಕರಿಸಿ ದ್ವೇಷ ರಾಜಕೀಯದಿಂದ ಅಭಿವೃದ್ಧಿಯನ್ನು ಹಳ್ಳ ಹಿಡಿಸಿದ ಬಿಜೆಪಿ, ತಾನು ಮಾಡಿದ ತಪ್ಪಿಗೆ ಜನ ದಂಡ ಕಟ್ಟಬೇಕೆಂದು ಬಯಸುತ್ತಿರುವುದು ಹಿಟ್ಲರ್ ಧೋರಣೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಕ್ಷದ ಮುಲಾಜಿಗೆ ಒಳಗಾಗದೆ, ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸಚಿವರ ಸಲಹೆಯನ್ನು ಸರಾಸಗಟಾಗಿ ತಿರಸ್ಕರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ಕನ್ನಡಿಗರಿಗೆ ಈ ಶಿಕ್ಷೆಯೇ?
ಕೇಂದ್ರ ಹಣಕಾಸು ಸಚಿವೆ ಸಲಹೆ ಒಪ್ಪಿಕೊಂಡು ಸಾಲ ಪಡೆದಿದ್ದೇ ಆದರೆ ಅದರ ಬಡ್ಡಿ ಹೊರೆಯನ್ನು ರಾಜ್ಯದ ಜನರು ಹೊರಬೇಕಾಗುತ್ತದೆ. ನಮ್ಮ ತೆರಿಗೆಯನ್ನು ಕೊಟ್ಟು, ಅದರ ಹಿಡಗಂಟಿನ ಮೇಲೆ ಸಾಲ ಪಡೆದು, ಅದಕ್ಕೆ ಮತ್ತೆ ನಾವೇ ಬಡ್ಡಿ ಕಟ್ಟುವುದು ಎಂತಹ ಶಿಕ್ಷೆ. 25 ಜನ ಸಂಸದರನ್ನು ಆರಿಸಿ ಕಳುಹಿಸಿದ್ದಕ್ಕಾಗಿ ಕನ್ನಡಿಗರಿಗೆ ಈ ಶಿಕ್ಷೆಯೇ? ಎಂದು ಪ್ರಶ್ನಿಸಿದ್ದಾರೆ.

ಜಿಎಸ್ಟಿ+ಆರ್ಬಿಐ ಸಾಲ+ಬಿಜೆಪಿ ಬಡ್ಡಿ
ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಬೊಕ್ಕಸಕ್ಕೆ ಸಾಲದ ಹೊರೆ ಹೊರಿಸಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಅತಿವೃಷ್ಠಿ, ಅನಾವೃಷ್ಠಿಗಳಿಗೆ ಪರಿಹಾರ ಜೊತೆ ತೆರಿಗೆ ಪಾಲನ್ನೂ ನಿರಾಕರಿಸಿರುವ ಬಿಜೆಪಿಯ ಈ ನಡೆಯಿಂದಾಗಿ, ಕನ್ನಡಿಗರಿಗೆ ಮೋದಿ ಅವರ ಜಿಎಸ್ಟಿ ಜೊತೆಗೆ ಆರ್ಬಿಐ ಸಾಲ + ಬಿಜೆಪಿ ಬಡ್ಡಿಯನ್ನೂ ಪಾವತಿಸುವ ಕರ್ಮ ಎದುರಾಗಿದೆ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.












Click it and Unblock the Notifications