ಈ ಜಿಲ್ಲೆಗೆ 3200 ಕೋಟಿ ರೂ. ಮೊತ್ತದ ನೀರಾವರಿ ಯೋಜನೆ: ಬಿಗ್ ಅಪ್ಡೇಟ್ ಕೊಟ್ಟ ಡಿ.ಕೆ. ಶಿವಕುಮಾರ್
ವಿಜಯಪುರ, ಜುಲೈ 14: ವಿಜಯಪುರ ಹಾಗೂ ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ.3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇಂಡಿ ತಾಲೂಕಿನಲ್ಲಿ ಸೋಮವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ನಿಮ್ಮ ಶಾಸಕರು ನನಗೆ ಏನೂ ಬೇಡ, ನಮ್ಮ ಭಾಗದ ರೈತರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ಹೀಗಾಗಿ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ, ತಿಡಗುಂದಿ ಶಾಖಾ ಕಾಲುವೆ ಹಾಗೂ ಇಂಡಿ ತಾಲೂಕಿನ 90 ಕೆರೆಗಳನ್ನು ಭರ್ತಿಗೊಳಿಸುವ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ಮಾಡಲಾಗಿದೆ. ವಿವಿಧ ಇಲಾಖೆಗಳಿಂದ ಒಟ್ಟಾರೆ 4,555 ಕೋಟಿ ಮೊತ್ತದ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ಹಮ್ಮಿಕೊಂಡಿದ್ದೇವೆಎಂದರು.

ಸರ್ಕಾರದಲ್ಲಿ ಹಣವಿಲ್ಲ, ಎಲ್ಲಾ ಹಣ ಗ್ಯಾರಂಟಿ ಯೋಜನೆಗಳಿಗೆ ಹೋಗಿವೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಇಂದು ಸಾರಿಗೆ ಇಲಾಖೆ ಮೂಲಕ ಜಾರಿಗೆ ತಂದ ಶಕ್ತಿ ಯೋಜನೆಯಲ್ಲಿ ಇಂದಿನವರೆಗೆ ಒಟ್ಟು 500 ಕೋಟಿ ಟ್ರಿಪ್ ಗಳನ್ನು ಪೂರೈಸಿದೆ. ಇಂದು ಮುಖ್ಯಮಂತ್ರಿಗಳು ಪ್ರಯಾಣಿಕರಿಗೆ 500ನೇ ಟಿಕೆಟ್ ನೀಡಿ ಈ ಕ್ಷಣವನ್ನು ಸಂಭ್ರಮಿಸಲಾಗಿದೆ. ಈ ಯೋಜನೆಗೆ ಇದುವರೆಗೂ 12,669 ಕೋಟಿ ವೆಚ್ಚ ಮಾಡಲಾಗಿದೆ. ಇದು ನಮ್ಮ ಗ್ಯಾರಂಟಿ ಯೋಜನೆ. ಆದರೆ ಕ್ಷೇತ್ರದಲ್ಲಿ ಇಂದು 4,555 ಕೋಟಿ ಮೊತ್ತದ ಯೋಜನೆಗೆ ಶಂಕುಸ್ಥಾಪನೆ ಮಾಡಿರುವುದು ಅಭಿವೃದ್ಧಿಯ ಯೋಜನೆ ಎಂದು ತಿಳಿಸಿದರು.
ಬಿಜೆಪಿ ಟೀಕೆಗಳು ಸಾಯುತ್ತವೆ, ನಮ್ಮ ಯೋಜನೆಗಳು ಶಾಶ್ವತವಾಗಿ ಉಳಿಯುತ್ತವೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ನಂಬಿಕೆ ಬಹಳ ಮುಖ್ಯವಾದುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾರಿಗೆ ಇಲಾಖೆಯಲ್ಲಿ 5,700 ಹುದ್ದೆ, ಪರಿಶಿಷ್ಟರಿಗೆ ವಿಶೇಷ ಯೋಜನೆ ನೀಡಿ 2 ಕೋಟಿ ಮೊತ್ತದವರೆಗೂ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತಿ ವರ್ಷ 5 ಸಾವಿರ ಕೋಟಿ ನೀಡುವುದಾಗಿ ಮಾತು ಕೊಟ್ಟಿತ್ತು. ಅದರಂತೆ ನಾವು ನೀಡುತ್ತಿದ್ದೇವೆ. ಆಮೂಲಕ ಈ ಭಾಗದ ಸುಮಾರು 42 ಕ್ಷೇತ್ರಗಳಿಗೆ ಸರಾಸರಿಯಲ್ಲಿ 100 ಕೋಟಿ ಅನುದಾನ ಸಿಗಲಿದೆ. ಈ ಭಾಗದಲ್ಲಿ ಅನೇಕ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.
ಬೀದರ್ ಜಿಲ್ಲೆಯಲ್ಲಿ 2025 ಕೋಟಿ ವೆಚ್ಚದ ಯೋಜನೆಗೆ ಶಂಕುಸ್ಥಾಪನೆ, ಪಿರಿಯಾಪಟ್ಟಣದಲ್ಲಿ 500 ಕೋಟಿ ಯೋಜನೆ ಆರಂಭಿಸಲಾಗಿದೆ. ಮಹದೇವಪ್ಪ ಅವರು ಇದೇ ತಿಂಗಳು 20-21ರಂದು 3,647 ಕೋಟಿ ಮೊತ್ತದ ಕಾಮಗಾರಿ ಆರಂಭಿಸಲಿದ್ದಾರೆ. ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆಯಲ್ಲಿ ಕ್ರಾಂತಿಕಾರಕ ಯೋಜನೆ ತರುತ್ತಿದ್ದಾರೆ. ಹೆಚ್.ಕೆ. ಪಾಟೀಲ್ ಅವರ ಪ್ರವಾಸೋದ್ಯಮ ಸಚಿವರಾಗಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಅನೇಕ ಪ್ರವಾಸಿ ತಾಣ ಅಭಿವೃದ್ಧಿಗೆ ಮುಂದಾಗಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮುಂದಿನ ಐದು ವರ್ಷಗಳಲ್ಲಿ 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಇದೆಲ್ಲವು ಅಭಿವೃದ್ಧಿಯಲ್ಲವೇ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಕೇಳಲು ಬಯಸುತ್ತೇನೆ ಎಂದರು.
ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ದೊಡ್ಡ ಮಾದರಿಯಾಗಿವೆ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ನಮ್ಮ ರಾಜ್ಯದ ಮಾದರಿ ಅನುಸರಿಸಲಾಗುತ್ತಿದೆ. ಜನರ ಆದಾಯ ಪಾತಾಳಕ್ಕೆ ಕುಸಿದು, ಬೆಲೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಬಡವರನ್ನು ರಕ್ಷಿಸಲು ನಿಮ್ಮ ಬದುಕಿನಲ್ಲಿ ಬದಲಾವಣೆ ತರಬೇಕು ಎಂದು ನಾವು ಈ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ನಮ್ಮ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಸರಾಸರಿ 5 ಸಾವಿರ ರೂಪಾಯಿ ಉಳಿತಾಯವಾಗಲಿದೆ. ಇಂತಹ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಹೊರತಾಗಿ ಬೇರೆ ಯಾರೂ ನೀಡಲು ಸಾಧ್ಯವಿಲ್ಲ ಎಂದರು.












Click it and Unblock the Notifications