Siddaramaiah: ಪ್ರಾಸಿಕ್ಯೂಷನ್ಗೆ ಅನುಮತಿ, ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ!
ಬೆಂಗಳೂರು, ಆಗಸ್ಟ್ 18: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಒಂದು ಕಡೆ ಕಾನೂನು ಹೋರಾಟವನ್ನು ನಡೆಸಲಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ವಿಚಾರಣೆಗೆ ಅನುಮತಿ ನೀಡಿ ಆದೇಶಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರು, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಂಪುಟದ ಸಚಿವರು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯನ್ನು ಸಿದ್ದರಾಮಯ್ಯ ನಡೆಸಿದ್ದರು. ಈಗ ಆಗಸ್ಟ್ 22ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಹೋರಾಟ?: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಕ್ರಮ, ಇದು ಬಿಜೆಪಿ-ಜೆಡಿಎಸ್ ಮೈತ್ರಿಕೂಟ, ಕೇಂದ್ರ ಸರ್ಕಾರದ ಸೇಡಿನ ರಾಜಕೀಯ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ರಾಜಭವನವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ.
ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಆದ್ದರಿಂದ ಈ ಕುರಿತು ಶಾಸಕರ ಜೊತೆ ಚರ್ಚಿಸಲು ಸಿದ್ದರಾಮಯ್ಯ ಆಗಸ್ಟ್ 22ರ ಬುಧವಾರ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಹೈಕಮಾಂಡ್ ನಾಯಕರು ಸಹ ಸಭೆಗೆ ಆಗಮಿಸಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.
ಶನಿವಾರ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ, "ನ್ಯಾಯ-ಸತ್ಯದ ಪರವಾಗಿ ನಿಂತು ಪ್ರಜಾಪ್ರಭುತ್ವದ ಉಳಿವಿನ ಹೋರಾಟಕ್ಕೆ ಗಟ್ಟಿಯಾಗಿ ನಿಂತಿರುವ ಕ್ಯಾಬಿನೆಟ್, ಸಂಸದರು, ರಾಜ್ಯಸಭಾ ಸದಸ್ಯರುಗಳು, ಶಾಸಕರುಗಳು, ಇಡಿ ಪಕ್ಷ, ಹೈ ಕಮಾಂಡ್ ಮತ್ತು ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು" ಎಂದು ಹೇಳಿದ್ದರು.
"ರಾಜ್ಯಪಾಲರು ರಾಷ್ಟ್ರಪತಿ, ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕೇ ಹೊರತು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ರಾಜ್ಯಪಾಲರ ಈ ಧೋರಣೆಯನ್ನು ಸಚಿವ ಸಂಪುಟ ತೀವ್ರವಾಗಿ ಖಂಡಿಸಿದೆ. ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸುತ್ತಿದೆ. ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಧಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ, ಪ್ರಜಾತಂತ್ರಕ್ಕೆ ಧಕ್ಕೆ ಎಂದು ಸಚಿವ ಸಂಪುಟ ನಿರ್ಣಯಿಸಿದೆ" ಎಂದು ತಿಳಿಸಿದ್ದರು.
"ಎಲ್ಲಾ ರಾಜ್ಯ ಸರ್ಕಾರಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಸೆಪ್ಟೆಂಬರ್ 3, 2021ಕ್ಕೆ ಕೇಂದ್ರ ಸರ್ಕಾರವೇ ಕಳುಹಿಸಿರುವ ಸುತ್ತೋಲೆ ಪ್ರಕಾರವೇ ರಾಜ್ಯಪಾಲರು ಪ್ರೊಸಿಜರ್ ಅನುಸರಿಸಿಲ್ಲ. ಸುತ್ತೋಲೆಯಲ್ಲಿರುವ ನಿರ್ದೇಶನಗಳನ್ನೇ ರಾಜ್ಯಪಾಲರು ಪಾಲಿಸಿಲ್ಲ. ಆದ್ದರಿಂದ ರಾಜ್ಯಪಾಲರ ನಿರ್ಣಯ ಕಾನೂನುಬಾಹಿರ. ಈ ಕಾನೂನುಬಾಹಿರ ತೀರ್ಮಾನದ ವಿರುದ್ಧ ಕಾನೂನು ಹೋರಾಟ ನಡೆಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ. ಚುನಾಯಿತ ಸರ್ಕಾರವನ್ನು ಕಿತ್ತಾಕುವ ಕೇಂದ್ರ ಸರ್ಕಾರದ ದುರುದ್ದೇಶದ ಪ್ರಯತ್ನಕ್ಕೆ ನಾವು ತಡೆಯೊಡ್ಡಬೇಕು ಎಂದು ನಿರ್ಣಯಿಸಿದ್ದೇವೆ" ಎಂದು ಘೋಷಿಸಿದ್ದರು.












Click it and Unblock the Notifications