ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ರಾಜ್ಯಾದಂತ್ಯ ಪ್ರತಿಭಟನೆ!
ಶಿವಮೊಗ್ಗ ಜೂನ್ 28: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ಹರೀಶ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಹಣ ವರ್ಗಾವಣೆ ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಗರಣದ ಬಗ್ಗೆ ಸಾಕ್ಷಿಗಳಿದ್ದು ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರತಿಭಟನೆಯಲ್ಲಿ ಭಾಗಿಯಾದ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು.

ಪ್ರಕರಣದ ಸೂಕ್ತ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತ ಬಾಯ್ತಪ್ಪಿ ಬಿಜೆಪಿ ಗೆ ಧಿಕ್ಕಾರ ಕೂಗಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಒತ್ತಾಯ ಮಾಡಿದರು. ಶಿವಮೊಗ್ಗದಲ್ಲಿ ಮಾತ್ರವಲ್ಲದೆ ರಾಜ್ಯದ ಹಲವೆಡೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.
ಚಿಕ್ಕಮಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ:-
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಭ್ರಷ್ಟಾಚಾರ ಖಂಡಿಸಿ ಚಿಕ್ಕಮಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದರು.
ಪಾಂಚಜನ್ಯ ಕಚೇರಿಯಿಂದ ಪ್ರತಿಭಟನೆಗೆ ಮುಂದಾದ ಬಿಜೆಪಿ ಕಾರ್ಯಕರ್ತರ ಮೆರವಣಿಗೆ ಆಜಾದ್ ಪಾರ್ಕ್ ಬರುತ್ತಿದ್ದಂತೆ ಪೊಲೀಸರು ಅಡ್ಡಗಟ್ಟಿದರು. ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತೆ ಕೆಲ ಕಾರ್ಯಕರ್ತರನ್ನ ಬಂಧಿಸಿ ಕರೆದೊಯ್ದರು.
ಪಾಂಚಜನ್ಯದಿಂದ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ತಡೆದು ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ:-
ಇನ್ನೂ ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಇದೇ ವಿಚಾಋವಾಗಿ ಪ್ರತಿಭಟನೆ ಮಾಡಿದರು. ಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯ ಮಾಡಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಪರಿಸ್ಥಿತಿ ತಿಳಿಯಾಗಿದೆ. ಇದೇ ವಿಚಾರವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ಮಾಡಲಾಗುತ್ತಿದೆ.
ಚಂದ್ರಶೇಖರನ್ ಆತ್ಮಹತ್ಯೆ ಡೆತ್ ನೋಟ್
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್ಟಿಡಿಸಿಎಲ್) ಅಧೀಕ್ಷಕ ಚಂದ್ರಶೇಖರನ್ ಅವರ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇರ್ಶಕ ಜೆ ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಂ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ. ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ. ಡೆತ್ ನೋಟ್ನಲ್ಲಿ ಮೂವರು ಅಧಿಕಾರಿಗಳಾದ ಜೆಜಿ ಪದ್ಮನಾಭ, ಪರಶುರಾಮ್ ಮತ್ತು ಶುಚಿಸ್ಮಿತ ಅವರ ಹೆಸರನ್ನು ನಮೂದಿಸಲಾಗಿದೆ. ಹೀಗಾಗಿ, ಘಟನೆ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದಲ್ಲಿ ಪಕ್ಷದಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ಕೂಡ ನೀಡಲಾಗಿದೆ. ಈಗಿನ ಸರ್ಕಾರದಲ್ಲಿ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಬಿಜೆಪಿ ಆರೋಪಿಸಿದೆ.












Click it and Unblock the Notifications