ಸುಪ್ರೀಂ ತೀರ್ಪಿನ ವಿರುದ್ಧ ಪ್ರತಿಭಟನೆ ಲಘುವಾಗಿ ಪರಿಗಣಿಸಲಾಗದು-ಹೈಕೋರ್ಟ್
ಬೆಂಗಳೂರು. ನ.2: ಅಯೋಧ್ಯೆ-ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸಿದ್ದನ್ನು ಲಘುವಾಗಿ ಪರಿಗಣಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಅಲ್ಲದೆ, ಅಂತಹ ಪ್ರತಿಭಟನೆಗಳು ನಡೆದರೆ ಅದು ಧರ್ಮದ ಆಧಾರದ ಮೇಲೆ ಎರಡು ಗುಂಪುಗಳ ನಡುವೆ ದ್ವೇಷ ಬಿತ್ತುವ ಪ್ರಯತ್ನ ಎಂದು ಕಟುಶಬ್ದಗಳಲ್ಲಿ ಹೇಳಿದೆ.
ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟಿಸಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಆರೋಪಿ ಸಫ್ವಾನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಸೌಹಾರ್ದತೆಗೆ ಧಕ್ಕೆ: ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ "ಅರ್ಜಿದಾರ ಪ್ರಕರಣದ ಇತರ ಆರೋಪಿಗಳಾಗಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (ಸಿಎಫ್ಐ) ಸದಸ್ಯರೊಂದಿಗೆ ಬ್ಯಾನರ್ ಹಿಡಿದು ವಿವಿಯ ಕ್ಯಾಂಪಸ್ಗೆ ತೆರಳಿ, ಅಯೋಧ್ಯೆ-ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇದು ಧರ್ಮದ ಆಧಾರದ ಮೇಲೆ ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆಯೇ ಹೊರತು, ಬೇರೇನೂ ಅಲ್ಲ" ಎಂದಿದೆ.

ಜತೆಗೆ ಅಂತಹ ಪ್ರತಿಭಟನೆಗಳು ಮಂಗಳೂರು ಭಾಗದಲ್ಲಿ ಸೌಹಾರ್ದತೆಗೆ ಧಕ್ಕೆ ತರುವಂತಹ ಕೃತ್ಯವಾಗಿದ್ದು, ಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರ ಕೃತ್ಯಕ್ಕೆ ಪುರಾವೆಗಳೂ ಲಭ್ಯವಿದ್ದು, ಇದು ಐಪಿಸಿ ಸೆಕ್ಷನ್ 153-ಎ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ, ಆದರೆ ನಿಯಮ ಪಾಲಿಸದ ಕಾರಣಕ್ಕೆ ಪ್ರಕರಣ ರದ್ದುಗೊಳಿಸಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ.
ಪೂರ್ವಾನುಮತಿ ಪಡೆದಿಲ್ಲ: ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 196ರ ಪ್ರಕಾರ ಐಪಿಸಿ ಸೆಕ್ಷನ್153ಎ ಅಡಿಯಲ್ಲಿನ ಅಪರಾಧಗಳಿಗೆ ಸಂಬಂಧ ಕಾಗ್ನಿಜೆನ್ಸ್ ತೆಗೆದುಕೊಳ್ಳಲು ಸರ್ಕಾರದ ಪೂರ್ವಾನುಮತಿ ಅಗತ್ಯವಾಗಿದೆ. ಆದರೆ, ಅರ್ಜಿದಾರನ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಸರ್ಕಾರ ಪೂರ್ವಾನುಮತಿ ನೀಡಿರುವ ಬಗ್ಗೆ ಯಾವುದೇ ದಾಖಲೆಗಳು ಲಭ್ಯವಿಲ್ಲ. ಹೀಗಿದ್ದರೂ, ಮ್ಯಾಜಿಸ್ಪ್ರೇಟ್ ಪ್ರಕರಣದ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದಾರೆ. ಆದ್ದರಿಂದ, ಅರ್ಜಿದಾರನ ವಿರುದ್ಧದ ಪ್ರಕರಣ ರದ್ದುಪಡಿಸಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ: ಅಯೋಧ್ಯಾ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ 2019ರಲ್ಲಿಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ವಿರೋಧಿಸಿ ಮಂಗಳೂರಿನಲ್ಲಿ ಪಿಎಫ್ಐ ಹಾಗೂ ಸಿಎಫ್ಐ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆ ಗುಂಪಿನಲ್ಲಿ ಸೇರಿಕೊಂಡು ಸಿಎಫ್ಐ ಬ್ಯಾನರ್ ಹಿಡಿದು ಘೋಷಣೆ ಕೂಗಿದ ಆರೋಪ ಅರ್ಜಿದಾರನ ಮೇಲಿದೆ. ಈ ಸಂಬಂಧ ಕೊಣಾಜೆ ಪೊಲೀಸರು ಅರ್ಜಿದಾರನೂ ಸೇರಿ ಪ್ರತಿಭಟನಾ ನಿರತ ಗುಂಪಿನ ಸದಸ್ಯರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರಕರಣದಲ್ಲಿ ಅರ್ಜಿದಾರ ಸಫ್ವಾನ್ 11ನೇ ಆರೋಪಿಯಾಗಿದ್ದ.
ಅರ್ಜಿದಾರ ಸಫ್ವಾನ್ ವಿರುದ್ಧ ಐಪಿಸಿ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು), 149 (ಅಕ್ರಮ ಕೂಟ ರಚಿಸಿಕೊಂಡು ಅಪರಾಧವೆಸಗುವುದು) ಹಾಗೂ ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪ ಕಾಯ್ದೆಯ ಸೆಕ್ಷನ್ 3ರ ಅಡಿ ಪ್ರಕರಣ ದಾಖಲಿಸಲಾಗಿದೆ.












Click it and Unblock the Notifications