ಸ್ಮಶಾನ ಭೂಮಿ; ನಾಲ್ವರು ಡಿಸಿಗಳ ಖುದ್ದು ಹಾಜರಿಗೆ ಹೈಕೋರ್ಟ್ ಆದೇಶ
ನಾಲ್ವರು ಜಿಲ್ಲಾಧಿಕಾರಿಗಳು ಮಾರ್ಚ್ 17ರಂದು ಖುದ್ದು ಹಾಜರಾಗಬೇಕು ಎಂದು ಕರ್ನಾಟಕ ಹೈಕೋರ್ಟ್ ಹುಕುಂ ಹೊರಡಿಸಿದೆ.
ಬೆಂಗಳೂರು, ಮಾರ್ಚ್ 10; ಗ್ರಾಮಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿರುವ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಾರ್ಚ್ 17ರಂದು ಖುದ್ದು ಹಾಜರಾಗಬೇಕು ಎಂದು ಕರ್ನಾಟಕ ಹೈಕೋರ್ಟ್ ಹುಕುಂ ಹೊರಡಿಸಿದೆ. ಅಲ್ಲದೆ, ಅಧಿಕಾರಿಗಳ ನಡೆಯನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಪೀಠ, ಕೋರ್ಟ್ಗೆ ಅಧಿಕಾರಿಗಳೇ ಸುಳ್ಳು ಹೇಳಿದರೆ ಅವರನ್ನು ನಂಬುವುದು ಹೇಗೆ? ಇದು ನಿಜಕ್ಕೂ ದುರದೃಷ್ಟಕರ ಎಂದು ಹೇಳಿದೆ.
ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಿದ್ದ ಆದೇಶ ಜಾರಿಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ವಾಸಿ ಮಹಮ್ಮದ್ ಇಕ್ಬಾಲ್ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.

ಅಲ್ಲದೇ, ತಪ್ಪು ಮಾಹಿತಿ ನೀಡುವ ಮೂಲಕ ಕೋರ್ಟ್ಗೆ ವಂಚನೆ ಮಾಡಲಾಗಿದೆ. ತಪ್ಪು ಮಾಹಿತಿ ನೀಡಿದವರಲ್ಲಿ ನಾಲ್ವರು ಜಿಲ್ಲಾಧಿಕಾರಿಗಳನ್ನು ಮನೆಗೆ ಕಳುಹಿಸಿದರೆ ವ್ಯವಸ್ಥೆ ಸರಿಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ನ್ಯಾಯಾಲಯದ ಆದೇಶಕ್ಕೆ ಅಧಿಕಾರಿಗಳು ಯಾವುದೇ ರೀತಿಯಲ್ಲಿಯೂ ಬೆಲೆ ಕೊಡುತ್ತಿಲ್ಲ. ಹಾಗಾಗಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಡಿಸಿ ಮುಂದಿನ ಕ್ರಮ ಜರುಗಿಸುವುದು ಬಿಟ್ಟರೆ ಬೇರೆ ದಾರಿ ಕೋರ್ಟ್ ಮುಂದೆ ಇಲ್ಲ ಎಂದು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡರು.
2023ರ ಜ.10ರಂದು ಅರ್ಜಿ ವಿಚಾರಣೆಗೆ ಬಂದಿದ್ದಾಗ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವರದಿ ಸಲ್ಲಿಸಿದ, ರಾಜ್ಯದ ಒಟ್ಟು 29,616 ಗ್ರಾಮಗಳ ಪೈಕಿ ಈವರೆಗೆ 27,903 ಗ್ರಾಮಗಳಿಗೆ ಸ್ಮಶಾನಕ್ಕೆ ಜಮೀನು ಒದಗಿಸಲಾಗಿದೆ. 319 ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಒದಗಿಸಬೇಕಾಗಿದೆ. 56 ಗ್ರಾಮಗಳಲ್ಲಿ ಆಗಿರುವ ಸ್ಮಶಾನ ಜಾಗದ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. ಒಟ್ಟು 1394 ಗ್ರಾಮಗಳು ಬೇಚರಾಕ್ ( ಜನ ವಸತಿ ಇಲ್ಲದ) ಗ್ರಾಮಗಳಾಗಿವೆ ಎಂದು ಮಾಹಿತಿ ನೀಡಿತ್ತು.

ಆದರೆ, ಹೈಕೋರ್ಟ್ ಸೂಚನೆ ಮೇರೆಗೆ ಈ ಮಾಹಿತಿಯ ವಾಸ್ತವಾಂಶ ಪರಿಶೀಲಿಸಿದ್ದ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರವು, ಸರ್ಕಾರ ತಪ್ಪು ಮಾಹಿತಿ ನೀಡಿದೆ. ಇನ್ನೂ 2041 ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಕೊಟ್ಟಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದಿತು. ಇದೇ ವೇಳೆ ಸರ್ಕಾರದ ಪರ ವಕೀಲರು , ಜಿಲ್ಲಾಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಒಪ್ಪಿಕೊಂಡರು. ಇದರಿಂದ ಅಸಮಾಧಾನ ಗೊಂಡ ನ್ಯಾಯಪೀಠ ಮುಂದಿನ ವಿಚಾರಣೆ ವೇಳೆ ತಪ್ಪು ಮಾಹಿತಿ ನೀಡಿರುವ ಅಧಿಕಾರಿಗಳು ಖುದ್ದು ಹಾಜರಿರಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿತು.
ಇದೇ ವೇಳೆ ಸರ್ಕಾರಿ ವಕೀಲರು ಸಹ, ಪ್ರಕರಣದಲ್ಲಿ ಸರ್ಕಾರದಿಂದ ತಪ್ಪಾಗಿದೆ. ಕೆಲ ಜಿಲ್ಲಾಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ಇದರಿಂದ ಕೋಪಗೊಂಡ ನ್ಯಾಯಮೂರ್ತಿ, ರಾಜ್ಯದಲ್ಲಿ ಸ್ಮಶಾನಕ್ಕೆ ಭೂಮಿ ಹೊಂದಿರದ ಗ್ರಾಮಗಳಿಗೆ ಆರು ತಿಂಗಳ ಒಳಗೆ ಅಗತ್ಯ ಜಾಗ ಒದಗಿಸಬೇಕು. ರಾಜ್ಯದ ಎಲ್ಲಾ ಗ್ರಾಮಗಳಲ್ಲೂ ಸ್ಮಶಾನಕ್ಕೆ ಜಾಗ ಇರುವುದನ್ನು ಸರ್ಕಾರ ಖಾತರಿ ಪಡಿಸಬೇಕು. ಒಟ್ಟು 1077 ಎಕರೆ ಸ್ಮಶಾನ ಜಾಗ ಒತ್ತುವರಿಯಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು 2019ರ ಆ.20ರಂದು ಹೈಕೋರ್ಟ್ ಆದೇಶಿಸಿತ್ತು. ದುರದೃಷ್ಟಕರ ಸಂಗತಿ ಎಂದರೆ ಹೈಕೋರ್ಟ್ ಆದೇಶ ಪ್ರಕಟಗೊಂಡು ಮೂರೂವರೆ ವರ್ಷ ಕಳೆದಿದ್ದರೂ, ಸ್ಮಶಾನಕ್ಕೆ ಜಾಗ ಒದಗಿಸಲು ಈಗಲೂ ಸರ್ಕಾರ ಒದ್ದಾಡುತ್ತಿದೆ ಎಂದು ಕುಟುಕಿತು.
ಅಲ್ಲದೆ, ಇನ್ನೂ 2041 ಗ್ರಾಮಗಳಲ್ಲಿ ಸ್ಮಶಾನ ಜಾಗ ಒದಗಿಸಿಲ್ಲ. ಆ ಮೂಲಕ ಜನರಿಗೆ ಸಂವಿಧಾನದತ್ತವಾದ ದೊರೆಯಬೇಕಿರುವ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ಯಾವುದೇ ಉದ್ದೇಶವಿಲ್ಲ. ಹೈಕೋರ್ಟ್ ಆದೇಶಕ್ಕೆ ಅಧಿಕಾರಿಗಳು ಅಗೌರವ ತೋರುತ್ತಿದ್ದಾರೆ. ಇದರಿಂದ ಪ್ರಕರಣದ ಆರೋಪಿಗಳಾದ ಸರ್ಕಾರಿ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ನಿಗದಿಪಡಿಸುವುದು ಬಿಟ್ಟು ಅನ್ಯ ಮಾರ್ಗವಿಲ್ಲ. ಆದ್ದರಿಂದ ಪ್ರಕರಣದ ಆರೋಪಿಗಳು ಮತ್ತು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ಎಲ್ಲಾ ಜಿಲ್ಲಾಧಿಕಾರಿಗಳು ಮಾ.16ರಂದು ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.












Click it and Unblock the Notifications