ಪಿಎಸ್ಐ ನೇಮಕ ಹಗರಣ; ಎಫ್ ಐಆರ್ ರದ್ದು ಕೋರಿದ ಆರೋಪಿಗಳು
ಬೆಂಗಳೂರು, ಮೇ 05; ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಹಲವಾರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಜಾಗೃತ್ ಮತ್ತು ರಚನಾ ಹನುಮಂತ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದಲ್ಲಿ 17ನೇ ಆರೋಪಿ ರಚನಾ ಮತ್ತು ಮೊದಲನೇ ಆರೋಪಿ ಎಸ್. ಜಾಗೃತ್ ಹೈಕೋರ್ಟ್ಗೆ ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಗಳು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ರಜಾಕಾಲದ ಏಕ ಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದವು. ಕೆಲಕಾಲ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಮೇ 19ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ಅರ್ಜಿದಾರರ ವಾದವೇನು?; ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿತ್ತು. ಮೇಲ್ವಿಚಾರಕರು ಮತ್ತು ವಿಚಕ್ಷಣಾ ಸ್ಕ್ವಾಡ್ ಪರೀಕ್ಷಾ ಕೇಂದ್ರದ ಮೇಲೆ ನಿಗಾಯಿಟ್ಟಿದ್ದರು. ಇಂತಹ ಸಂದರ್ಭದಲ್ಲಿ ಪರಿಕ್ಷಾ ಕೇಂದ್ರದಲ್ಲಿ ಯಾವುದೇ ರೀತಿ ನಕಲು ಹಾಗೂ ಅಕ್ರಮ ನಡೆಯಲು ಸಾಧ್ಯವಿಲ್ಲ. ಪರೀಕ್ಷೆ ನಡೆದು ಬಹುತೇಕ ಒಂದು ವರ್ಷ ಕಳೆದಿದೆ. ಫಲಿತಾಂಶ ಪ್ರಕಟಗೊಂಡ ನಂತರ ಎಫ್ಐಆರ್ ದಾಖಲಿಸಲಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಅಲ್ಲದೆ, ಈ ಅರ್ಜಿ ನ್ಯಾಯಾಲಯದಿಂದ ಇತ್ಯರ್ಥಪಡಿಸುವರೆಗೂ ಪ್ರಕರಣ ಕುರಿತ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ. ಸಿಐಡಿ ಪೊಲೀಸ್ ಅಧಿಕಾರಿ ನರಸಿಂಹ ಮೂರ್ತಿ ಪ್ರಕರಣ ಸಂಬಂಧ ದೂರು ದಾಖಲಿಸಿದ್ದಾರೆ. ಅವರೇ ತನಿಖಾ ತಂಡದಲ್ಲಿ ಸಹಕಾಯಕ ತನಿಖಾಧಿಕಾರಿಯಾಗಿದ್ದಾರೆ.
ಈವರೆಗೂ ನಡೆದಿರುವ ಸಿಐಡಿ ತನಿಖೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ವಿರುದ್ಧ ಯಾವುದೇ ಆರೋಪ ಕೇಳಿಬಂದಿಲ್ಲ ಮತ್ತು ಸಾಕ್ಷ್ಯಾಧಾರಗಳೂ ಇಲ್ಲ. ಆದರೂ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸುವ ಉದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಆದ್ದರಿಂದ ತಮ್ಮ ವಿರುದ್ಧದ ಎಫ್ಐಆರ್ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ; 545 ಪಿಎಸ್ಐ ಹುದ್ದೆಗಳ ನೇಮಕ ಅಕ್ರಮ ಹಗರಣದಲ್ಲಿ ಪಾಲ್ಗೊಂಡ ಆರೋಪ ಸಂಬಂಧ ಸಿಐಡಿ ಪೊಲೀಸ್ ಅಧಿಕಾರಿ ಪಿ. ನರಸಿಂಹಮೂರ್ತಿ ಎಂಬುವರ ನೀಡಿದ ದೂರು ಆಧರಿಸಿ ಹೈಗ್ರೌಂಡ್ಸ್ ಠಾಣಾ ಪೊಲೀಸರು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಜಾಗೃತ್ ವಿರುದ್ಧ 2022ರ ಏ. 9ರಂದು ಎಫ್ಐಆರ್ ದಾಖಲಿಸಿದ್ದರು. ಅಂತೆಯೇ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನಪಡೆದಿರುವ ರಚನಾ ಹನುಮಂತ ವಿರುದ್ಧ ಏ.30ರಂದು ಎಫ್ಐಆರ್ ದಾಖಲಿಸಿದ್ದರು.












Click it and Unblock the Notifications