ಪಿಎಸ್ಐ ನೇಮಕಾತಿ ಅಕ್ರಮ: ಕಲಬುರಗಿ ಕೇಸಲ್ಲಿ 34 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
ಬೆಂಗಳೂರು, ಜು. 05: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಪೊಲೀಸರು 34 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಬಿಜೆಪಿ ಮುಖಂಡರಾದ ದಿವ್ಯಾ ಹಾಗರಗಿ ಅವರ ಒಡೆತನದ ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ನಡೆದ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಪ್ರಕರಣ ದಾಖಲಿಸಿದ 88 ದಿನಗಳ ಬಳಿಕ ತನಿಖಾಧಿಕಾರಿ ಪ್ರಕಾಶ್ ರಾಥೋಡ್ ನೇತೃತ್ವದ ತನಿಖಾ ತಂಡ ಎರಡು ಸಾವಿರ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ, ಅವರ ಪತಿ, ಕಿಂಗ್ ಪಿನ್ ಆರ್.ಡಿ. ಪಾಟೀಲ್, ಆರ್. ಡಿ ಪಾಟೀಲ್ ಸಹೋದರ, ಮಂಜುನಾಥ್ ಮೇಳಕುಂದಿ ಪ್ರಮುಖ ಆರೋಪಿಗಳಾಗಿದ್ದು, ಇವರೊಂದಿಗೆ ಅಕ್ರಮ ಎಸಗಿದ ಅಭ್ಯರ್ಥಿಗಳು ಹಾಗೂ ಅಕ್ರಮಕ್ಕೆ ಸಹಕರಿಸಿದವರನ್ನು ಸಿಐಡಿ ಪೊಲೀಸರು ಆರೋಪಿಗಳನ್ನಾಗಿ ಮಾಡಿದ್ದಾರೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹೋರಾಟ ನಡೆಸಿದ್ದರು. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ತನಿಖೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ, ಅಫಜಲಪುರದ ಆರ್.ಡಿ. ಪಾಟೀಲ್ ಸಹೋದರರು ಬಂಧನಕ್ಕೆ ಒಳಗಾಗಿದ್ದರು. ಪಿಎಸ್ಐ ಅಭ್ಯರ್ಥಿಗಳು ಕೂಡ ಬಂಧನಕ್ಕೆ ಒಳಗಾಗಿದ್ದರು. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಎಸಗಿರುವುದು ಅಲ್ಲದೇ, ಬ್ಲೂಟೂತ್ ಕೊಟ್ಟು ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು. ಈ ಜಾಲ ಬೆಂಗಳೂರಿನ ನೇಮಕಾತಿ ವಿಭಾಗದ ಕಚೇರಿಯೊಂದಿಗಿನ ಸಂಪರ್ಕ ಬಯಲಾಗಿತ್ತು.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಅಮೃತ್ ಪೌಲ್ ಬಂಧನಕ್ಕೆ ಒಳಗಾದ ಮರುದಿನವೇ ಇದೀಗ ಕಲಬುರಗಿ ಪ್ರಕರಣದಲ್ಲಿ ಸಿಐಡಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
Recommended Video