ಪಿಎಸ್ಐ ನೇಮಕ ಅಕ್ರಮ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ
ಬೆಂಗಳೂರು, ಜು.25: ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅಕ್ರಮ ನೇಮಕ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ, ಮಾಜಿ ಎಡಿಜಿಪಿ ಅಮೃತ್ ಪೌಲ್ ಜಾಮೀನು ಅರ್ಜಿ ವಜಾಗೊಂಡಿದೆ. ಅವರಿಗೆ ಜಾಮೀನು ಮಂಜೂರು ಮಾಡಲು ಒಂದನೇ ಎಸಿಎಂಎಂ ನ್ಯಾಯಾಲಯ ಸೋಮವಾರ ನಿರಾಕರಿಸಿದೆ, ಹಾಗಾಗಿ ಅವರು ಇನ್ನೂ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ.
ಇದೀಗ ಅವರು ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಬೇಕಾಗುತ್ತದೆ. ಆದರೆ ಹೈಕೋರ್ಟ್ ಈಗಾಗಲೇ ಇತರೆ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಒಂದು ವೇಳೆ ಅಮೃತ್ ಪಾಲ್ ಜಾಮೀನು ಕೋರಿದರೂ ಸಹ ಅದನ್ನು ನ್ಯಾಯಾಲಯ ಪುರಸ್ಕರಿಸುವ ಸಾಧ್ಯತೆಗಳು ತೀರಾ ಕಡಿಮೆ ಎಂದು ವಿಶ್ಲೇಷಿಸಲಾಗಿದೆ.
ಪಿಎಸ್ಐ ಅಕ್ರಮ: ಒಎಂಆರ್ ಶೀಟ್ ತಿದ್ದುಪಡಿಯಲ್ಲಿ ಅಮೃತ್ ಪೌಲ್ ಕೈವಾಡ-ಸಿಐಡಿ
ಜಾಮೀನು ಕೋರಿ ಅಮೃತ್ ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಆನಂದ ಟಿ. ಚೌಹಾಣ್ ಸೋಮವಾರ ವಜಾಗೊಳಿಸಿದ್ದಾರೆ. 'ಗಂಭೀರ ಸ್ವರೂಪದ ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವಾಗ ಜಾಮೀನು ನೀಡುವುದು ಉಚಿತವಲ್ಲ' ಎಂಬ ಪ್ರಾಸಿಕ್ಯೂಷನ್ ವಾದವನ್ನು ಮನ್ನಿಸಿದ್ದಾರೆ.
ಪಿಎಸ್ಐ ನೇಮಕಾತಿ ವಿಭಾಗದ ಎಡಿಜಿಪಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಮೃತ್ ಪೌಲ್, ಹಗರಣದ 35ನೇ ಆರೋಪಿಯಾಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನಕುಮಾರ್, 'ಆರೋಪಿ ಪೌಲ್ ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯಾಗಿದ್ದು, ಪೊಲೀಸ್ ಇಲಾಖೆಯ ಘನತೆಗೆ ಕುಂದು ತರುವಂತಹ ಕೃತ್ಯ ಎಸಗಿರುವುದು ಮೇಲ್ನೋಟಕ್ಕೇ ಕಂಡು ಬರುತ್ತದೆ. ಇಂತಹವರು ಜಾಮೀನು ಪಡೆದು ಹೊರಗೆ ಹೋದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಆದ್ದರಿಂದ, ಜಾಮೀನು ನೀಡಬಾರದು' ಎಂದು ಬಲವಾದ ಆಕ್ಷೇಪಣೆ ಸಲ್ಲಿಸಿದ್ದರು.
ಪೌಲ್ ಕೈವಾಡ: ಆರೋಪಿ ಪೌಲ್ ತಮ್ಮ ಬಳಿಯಿದ್ದ ಪಿಎಸ್ಐ ನೇಮಕಾತಿಗೆ ಸಂಬಂಧಿಸಿದ ಒಎಂಆರ್ ಉತ್ತರ ಪತ್ರಿಕೆಗಳ ಕಿಟ್ ಬಾಕ್ಸ್ಗಳನ್ನು ಇಡಲಾಗಿದ್ದ ಅಲ್ಮೇರಾದ ಕೀಯನ್ನು ಒಎಂಆರ್ ಪತ್ರಿಕೆ ತಿದ್ದುಪಡಿ ಮಾಡಲು ಒಂದನೇ ಆರೋಪಿಗೆ ನೀಡಿದ್ದಾಗಿ 31ನೇ ಆರೋಪಿ ಹೇಳಿಕೆ ನೀಡಿರುತ್ತಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬೇಕಾಗಿದೆ.
ಪೌಲ್ ಅವರಿಂದ ವಶಪಡಿಸಿಕೊಂಡಿರುವ ಮೊಬೈಲ್ ಫೋನ್ಗಳನ್ನು ಎಫ್ಎಸ್ಎಲ್ ವಿಶ್ಲೇಷಣೆಗೆ ಕಳುಹಿಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ. ಆರೋಪಿತ ಅಧಿಕಾರಿಯೊಂದಿಗೆ ಪಿಎಸ್ಐಗೆ ಆಯ್ಕೆಯಾದ ಯಾರೆಲ್ಲಾ ಅಭ್ಯರ್ಥಿಗಳು, ಸಂಪರ್ಕ ಹೊಂದಿದ್ದರು ಎನ್ನುವ ಬಗ್ಗೆ ಸಾಕ್ಷ್ಯಾಧಾರ ಸಂಗ್ರಹಿಸಬೇಕಿದ್ದು, ಜಾಮೀನು ಅರ್ಜಿ ಪುರಸ್ಕರಿಸಬಾರದು' ಎಂದು ವಾದ ಮಂಡಿಸಿದ್ದರು.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿಗಳ ಪೈಕಿ ಐವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜುಲೈ 22ರಂದು ಹೈಕೋರ್ಟ್ ವಜಾಗೊಳಿಸಿತ್ತು.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಗಳು ಹೈಕೋರ್ಟ್ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಕಳೆದ ಶುಕ್ರವಾರ ಕೈಗೆತ್ತಿಕೊಂಡ ಹೈಕೋರ್ಟ್ನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ಪೀಠವು ವಜಾಗೊಳಿಸಿ ಆದೇಶಿಸಿದೆ.
ಪಿಎಸ್ಐ ನೇಮಕ ಅಕ್ರಮ: ತನಿಖೆಗೆ ಸಹಕರಿಸಿದ ಎಡಿಜಿಪಿ ಅಮೃತ್ ಪಾಲ್ಗೆ ಮಂಪರು ಪರೀಕ್ಷೆ
ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ಬಂಧಿತರಾಗಿದ್ದವರ ಪೈಕಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಸಿ.ಎನ್. ಶಶಿಧರ್, ದಿಲೀಪ್ ಕುಮಾರ್, ಸೂರ್ಯ ನಾರಾಯಣ, ರಘುವೀರ್, ನವೀನ್ ಪ್ರಸಾದ್ ಅವರ ಅರ್ಜಿ ವಜಾ ಮಾಡಿದೆ.
ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಆರೋಪಿಗಳಾದ ಸಿ.ಎನ್.ಶಶಿಧರ್, ಆರ್.ಶರತ್ ಕುಮಾರ್, ಎಚ್.ಯು. ರಘವೀರ್, ಕೆ.ಸಿ. ದಿಲೀಪ್ ಕುಮಾರ್, ಎಚ್.ಆರ್. ಪ್ರವೀಣ್ ಕುಮಾರ್, ಕೆ.ಸೂರಿ ನಾರಾಯಣ್ ಅವರು ಜಾಮೀನು ಕೋರಿ ಮತ್ತು ತಲೆಮರೆಸಿಕೊಂಡಿರುವ ಆರೋಪಿಯಾದ ಬ್ಯಾಡರಹಳ್ಳಿ ಠಾಣೆಯ ಸಬ್ ಇನ್ಸ್ಪೆಕ್ಟರ್ ನವೀನ್ ಪ್ರಸಾದ್ ನಿರೀಕ್ಷಣಾ ಜಾಮೀನುಗಾಗಿ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ಸಲ್ಲಿಸಿದ್ದಾರೆ.
''ಒಟ್ಟು 545 ಪಿಎಸ್ಐ ಹುದ್ದೆಗಳಿಗೆ 50 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಆದರೆ, ಅರ್ಜಿದಾರರು, ಕೆಲ ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಅಭ್ಯರ್ಥಿಗಳು ಅಕ್ರಮ ನಡೆಸಿ ಇಡೀ ನೇಮಕ ಪ್ರಕ್ರಿಯೆ ರದ್ದುಮಾಡುವ ಪರಿಸ್ಥಿತಿ ಸೃಷ್ಟಿಸಿದ್ದಾರೆ. ಅಭ್ಯರ್ಥಿಗಳ ಒಎಂಆರ್ ಶೀಟ್ಗಳನ್ನು ತಿದ್ದಲಾಗಿದೆ'' ಎಂದು ಆರೋಪಿಸಲಾಗಿದೆ.