Breaking; ದಿವ್ಯಾ ಹಾಗರಗಿ ಬಂಧನ; ಗೃಹ ಸಚಿವರ ಹೇಳಿಕೆ
ಬೆಂಗಳೂರು, ಏಪ್ರಿಲ್ 29 ; ಪಿಎಸ್ಐ ನೇಮಕಾತಿ ಹಗರಣದ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನವಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು 18 ದಿನಗಳಿಂದ ಹುಡುಕಾಟ ನಡೆಸುತ್ತಿದ್ದರು.
ಶುಕ್ರವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಕುರಿತು ಪ್ರತಿಕ್ರಿಯೆ ನೀಡಿದರು, "ಕರ್ನಾಟಕ ಸಿಐಡಿ ಪೊಲೀಸರು ದಿವ್ಯಾ ಹಾಗರಗಿ ಸೇರಿದಂತೆ 5 ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ" ಎಂದರು.
ಸಿಐಡಿ ಪೊಲೀಸರು ಕಲಬುರಗಿಗೆ ದಿವ್ಯಾ ಹಾಗರಗಿ ಸೇರಿದಂತೆ ಇತರ ಆರೋಪಿಗಳನ್ನು ಕರೆತರುತ್ತಿದ್ದಾರೆ. ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಗ್ಗೆ ರಾಜಕೀಯ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಪ್ರತಿಪಕ್ಷ ಕಾಂಗ್ರೆಸ್ ಆರೋಪಿಯನ್ನು ಏಕೆ ಬಂಧಿಸಿಲ್ಲ? ಎಂದು ಗೃಹ ಸಚಿವರನ್ನು ಪ್ರಶ್ನೆ ಮಾಡಿತ್ತು.
ಗುರುವಾರ ಕರ್ನಾಟಕ ಕಾಂಗ್ರೆಸ್ ದಿವ್ಯಾ ಹಾಗರಗಿ ನಿಮ್ಮ ಮನೆ ಮಗಳಲ್ಲವೇ? ಎಂದು ಬಿಜೆಪಿಯನ್ನು ಪ್ರಶ್ನೆ ಮಾಡಿತ್ತು. ದಿವ್ಯಾ ಸಂಕ್ಷಿಪ್ತ ಪರಿಚಯವನ್ನು ಬಿಡುಗಡೆ ಮಾಡಿತ್ತು.
ಆರೋಪಿ ಆಸ್ಪತ್ರೆಗೆ ದಾಖಲು; ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರನ್ನು ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆರ್. ಡಿ. ಪಾಟೀಲ್ ಸಿಐಡಿ ಪೊಲೀಸರ ವಶದಲ್ಲಿದ್ದು ಹೊಟ್ಟೆ ನೋವು, ವಾಂತಿ ಎಂದು ಆರೋಪಿ ಹೇಳಿದ್ದರಿಂದ ಜಿಲ್ಲಾ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದು, ಪರೀಕ್ಷೆ ಬಳಿಕ ದಾಖಲು ಮಾಡಿದ್ದಾರೆ.
ಆರೋಪಿಗೆ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಪರೀಕ್ಷೆ ಮಾಡಲಾಗಿದೆ. ಇಂದು ಮಧ್ಯಾಹ್ನ ವರದಿ ಪೊಲೀಸರ ಕೈ ಸೇರಲಿದೆ. ಬಳಿಕ ಸಿಐಡಿ ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಳ್ಳಲಿದ್ದಾರೆ.












Click it and Unblock the Notifications