ಪಿಎಸ್ಐ ಹಗರಣ: ಇನ್ಸ್ಪೆಕ್ಟರ್ ಹರೀಶ್ಗೆ ಜಾಮೀನು ನೀಡದ ಹೈಕೋರ್ಟ್
ಬೆಂಗಳೂರು, ಜನವರಿ 19; ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿಯಲ್ಲಿ ಅಕ್ರಮವೆಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ. ಹರೀಶ್ಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಪ್ರಕರಣದಲ್ಲಿ 34ನೇ ಆರೋಪಿಯಾಗಿರುವ ಕೆ. ಹರೀಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಜಿ. ಉಮಾ ಅವರಿದ್ದ ಪೀಠ, ಆರೋಪಿಗೆ ಜಾಮೀನು ಅರ್ಜಿ ವಜಾಗೊಳಿಸಿದೆ.
ಸಿಐಡಿ ಪರ ವಾದ ಮಂಡಿಸಿದ ವಕೀಲರ ವಾದವನ್ನು ಮಾನ್ಯ ಮಾಡಿದ ನ್ಯಾಯಪೀಠ, ಜಾಮೀನು ನೀಡಿದರೆ ಪ್ರಕರಣದ ತನಿಖೆ ಮೇಲೆ ಪರಿಣಾಮ ಬೀರಲಿರುವುದರಿಂದ ಜಾಮೀನು ನೀಡಲಾಗದು ಎಂದು ಹೇಳಿದೆ.

ವ್ಯಾಪಂಗಿಂತ ದೊಡ್ಡ ಹಗರಣ: ಸಿಐಡಿ ಪರ ವಕೀಲರು, ಈ ಪ್ರಕರಣವು ಮಧ್ಯಪ್ರದೇಶದ ವ್ಯಾಪಂ ಮಾದರಿಯ ಹಗರಣವಾಗಿದ್ದು. ಪ್ರಕರಣದಲ್ಲಿಅತ್ಯಂತ ಪ್ರಭಾವಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಸ್ಟ್ರಾಂಗ್ ರೂಂನಲ್ಲಿದ್ದ ಸೇಫ್ಟಿ ಲಾಕರ್ಗಳನ್ನೇ ತೆರೆದು, ಉತ್ತರ ಪತ್ರಿಕೆಗಳನ್ನು ತಿದ್ದುವ ಮಟ್ಟಕ್ಕೆ ಹೋಗಿದ್ದಾರೆ. ಆರೋಪಿಗಳಿಗೆ ಜಾಮೀನು ಸಿಕ್ಕರೆ ತನಿಖೆಯಲ್ಲೂ ಹಸ್ತಕ್ಷೇಪ ಮಾಡುವ ಸಾಧ್ಯತೆ ತಳ್ಳಿಹಾಕುವಂತಿಲ್ಲ ಎಂದು ತಿಳಿಸಿದ್ದರು.
ಅನರ್ಹ ಅಭ್ಯರ್ಥಿಗಳು ಅಕ್ರಮ ನಡೆಸಿ ಮುಖ್ಯವಾಹಿನಿಗೆ ಬಂದರೆ, ಅದು ಸಮಾಜಕ್ಕೆ ಮಾರಕವಾಗಲಿದೆ. ಆದ್ದರಿಂದ, ಇಂಥ ಪ್ರಕರಣಗಳಲ್ಲಿನ್ಯಾಯಾಲಯಗಳು ಕಠಿಣ ನಿಲುವು ತಾಳಬೇಕಾಗುತ್ತದೆ ಎಂದು ವ್ಯಾಪಂ ಹಗರಣದಲ್ಲಿಸುಪ್ರೀಂಕೋರ್ಟ್ ಹೇಳಿದೆ. ಈ ಹಗರಣದಲ್ಲಿಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ, ಇನ್ಸ್ಪೆಕ್ಟರ್ಗಳು ಸೇರಿ ಹಲವು ಪ್ರಭಾವಿಗಳು ಶಾಮೀಲಾಗಿದ್ದಾರೆ.
ಪೊಲೀಸ್ ಅಧಿಕಾರಿಯಾಗಿರುವ ಅರ್ಜಿದಾರರೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಪ್ರಕರಣದ ತನಿಖೆ ಇನ್ನೂ ಬಾಕಿ ಇದ್ದು, ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಆದ್ದರಿಂದ, ಜಾಮೀನು ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.
ಪರೀಕ್ಷೆಯಲ್ಲಿ ಸಹಾಯಕ್ಕೆ ಲಂಚ : ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಸ್ಐ ಆಗಿದ್ದ ಹರೀಶ್ ಪ್ರಕರಣದ 14ನೇ ಆರೋಪಿ ಆರ್. ಮಧು ಹಾಗೂ 16ನೇ ಆರೋಪಿ ದಿಲೀಪ್ ಕುಮಾರ್ಗೆ ಪರೀಕ್ಷೆಯಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು. ಅದಕ್ಕಾಗಿ 33ನೇ ಆರೋಪಿ ಮೀಸಲು ಪೊಲೀಸ್ ಇನ್ಸ್ಪೆಕ್ಟರ್ ಮಧು ಜತೆ ಒಳಸಂಚು ರೂಪಿಸಿದ್ದ ಹರೀಶ್, ಇಬ್ಬರು ಅಭ್ಯರ್ಥಿಗಳಿಂದಲೂ ತಲಾ 30 ಲಕ್ಷ ರೂ. ಗಳಂತೆ ಒಟ್ಟು 60 ಲಕ್ಷ ರೂ. ಗಳನ್ನು ಸ್ವೀಕರಿಸಿದ್ದರು.
ಬಳಿಕ 33ನೇ ಆರೋಪಿಯ ಮೂಲಕ 29ನೇ ಆರೋಪಿಯಾದ ನೇಮಕಾತಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಡಿ. ಹರ್ಷನಿಗೆ ಹಣ ಹಾಗೂ ಕಾರ್ಬನ್ ಒಎಂಆರ್ ಶೀಟ್ಗಳನ್ನು ತಲುಪಿಸಿದ್ದರು. ಎಫ್ಎಸ್ಎಲ್ ವರದಿಯಲ್ಲೂ14 ಹಾಗೂ 16ನೇ ಆರೋಪಿಗಳ ಒಎಂಆರ್ ಶೀಟ್ ತಿದ್ದಿರುವುದು ಸಾಬೀತಾಗಿದೆ ಎಂದು ಸಿಐಡಿಯ ಆರೋಪಪಟ್ಟಿಯಲ್ಲಿ ಹೇಳಿದೆ.












Click it and Unblock the Notifications