ಪಿಎಸ್‌ಐ ಹಗರಣದ ಸಿಐಡಿ ತನಿಖೆ ಹಿಂದೆ ಹುನ್ನಾರ; ಭಾಸ್ಕರ್‌ ರಾವ್

ಬೆಂಗಳೂರು, ಮೇ 06; "ಪಿಎಸ್‌ಐ ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರವಿದೆ" ಎಂದು ನಿವೃತ್ತ ಐಪಿಎಸ್ ಅಧಿಕಾರಿ, ಆಮ್‌ ಆದ್ಮಿ ಪಕ್ಷದ ನಾಯಕ ಭಾಸ್ಕರ್‌ ರಾವ್‌ ದೂರಿದರು.

ಶುಕ್ರವಾರ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್‌ ರಾವ್‌, "ಬಿಜೆಪಿ ನಾಯಕರೇ ಆರೋಪಿಗಳಾಗಿರುವ ಹಗರಣವನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಐಡಿಯಿಂದಲೇ ತನಿಖೆ ಮಾಡಿಸುವುದು ಹಾಸ್ಯಾಸ್ಪದ. ಈ ತನಿಖೆಗೆ ಯಾವ ಬೆಲೆಯೂ ಇಲ್ಲ" ಎಂದರು.

"ಅನುಮಾನಾಸ್ಪದ ಅಭ್ಯರ್ಥಿಯ ತನಿಖೆ ವೇಳೆ ಬಿಜೆಪಿ ನಾಯಕರ ಹೆಸರು ಕೇಳಿಬಂದರೆ, ಆ ಅಭ್ಯರ್ಥಿಯ ವಿಚಾರಣೆಯನ್ನೇ ಕೈಬಿಡಲಾಗುತ್ತಿದೆ. ಇಡೀ ಹಗರಣವನ್ನು ಮುಚ್ಚಿ ಹಾಕಿ, ಬಿಜೆಪಿ ನಾಯಕರನ್ನು ಬಚಾವ್‌ ಮಾಡಲೆಂದೇ ಸಿಐಡಿ ಮೂಲಕ ತನಿಖೆ ನಡೆಸಲಾಗುತ್ತಿದೆ" ಎಂದು ಆರೋಪಿಸಿದರು.

"ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯವರ ಮೇಲ್ವಿಚಾರಣೆಯಲ್ಲಿ ಪಿಎಸ್‌ಐ ಹಗರಣದ ಸಮಗ್ರ ತನಿಖೆ ನಡೆಯಬೇಕು. ಆಗ ಮಾತ್ರ ನಿಷ್ಪಕ್ಷಪಾತ ತನಿಖೆ ನಡೆದು, ಸತ್ಯಾಂಶ ಹೊರಬರುತ್ತದೆ. ಆಗ ಅಕ್ರಮದಲ್ಲಿ ಭಾಗಿಯಾದ ಎಲ್ಲ ರಾಜಕಾರಣಿಗಳ ಮುಖವಾಡ ಕಳಚಿ ಬೀಳುತ್ತದೆ. ಇಲ್ಲದಿದ್ದರೆ, ಸಿಐಡಿ ತನಿಖೆಯ ಗಾಳಕ್ಕೆ ಕೇವಲ ಸಣ್ಣಪುಟ್ಟ ಮೀನುಗಳು ಬಲಿಯಾಗಿ, ದೊಡ್ಡ ತಿಮಿಂಗಿಲಗಳು ತಪ್ಪಿಸಿಕೊಂಡು ಬಿಡುತ್ತವೆ" ಎಂದು ಹೇಳಿದರು.

 ಸಾಕ್ಷಿ ಬಹಿರಂಗ ಪಡಿಸುತ್ತಿಲ್ಲ

ಸಾಕ್ಷಿ ಬಹಿರಂಗ ಪಡಿಸುತ್ತಿಲ್ಲ

"ಬಿಜೆಪಿ ಸರ್ಕಾರದ ಸಚಿವ ಡಾ. ಅಶ್ವಥ್ ನಾರಾಯಣ್‌ ಸಹೋದರನೇ ಹಗರಣದಲ್ಲಿ ಭಾಗಿಯಾಗಿರುವ ಆರೋಪವಿದೆ. ಸಚಿವರ ಸಹಕಾರವಿಲ್ಲದೇ ಅವರ ಸಹೋದರನಿಗೆ ಅಕ್ರಮವೆಸಗಲು ಸಾಧ್ಯವೇ?. ಬಹುತೇಕ ಬಿಡಿಎ ಕಾಮಗಾರಿಗಳನ್ನು ಅಶ್ವಥ್ ನಾರಾಯಣ್‌ ಸಹೋದರರ ಮಾಲೀಕತ್ವದ ಹೊಂಬಾಳೆ ಕನ್‌ಸ್ಟ್ರಕ್ಷನ್‌ ನಿರ್ವಹಿಸುತ್ತಿದ್ದು, ಪಿಎಸ್‌ಐ ನೇಮಕಾತಿಯಲ್ಲೂ ಅವರು ಮೂಗು ತೂರಿಸಿರುವುದು ಆತಂಕಕಾರಿ. ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆಯವರಿಗೆ ಸಿಐಡಿ ಮೂರು ನೋಟಿಸ್‌ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಒದಗಿಸಿಲ್ಲ. ಸತ್ಯ ಹೊರಬರುವುದು ಕಾಂಗ್ರೆಸ್‌ಗೂ ಇಷ್ಟವಿಲ್ಲ ಎನ್ನುವುದು ಇದರಿಂದಲೇ ಸ್ಪಷ್ಟವಾಗುತ್ತದೆ. ಅಶ್ವಥ್ ನಾರಾಯಣ್‌ ಈ ಹಿಂದೆಯೂ ನಕಲಿ ಸರ್ಟಿಫಿಕೇಟ್‌ ನೀಡಿದ್ದರೆಂದು ಜೆಡಿಎಸ್‌ನ ಎಚ್‌. ಡಿ. ಕುಮಾರಸ್ವಾಮಿ ಬಹಿರಂಗಪಡಿಸಿದ್ದು, ಅವರು ಕೂಡ ಸಾಕ್ಷಿ ಬಹಿರಂಗ ಪಡಿಸುತ್ತಿಲ್ಲ" ಎಂದು ಭಾಸ್ಕರರಾವ್ ಆರೋಪಿಸಿದರು.

 ವಕೀಲರ ನಿಯೋಗ ಸಿಐಡಿಗೆ ದೂರು ನೀಡಿದೆ

ವಕೀಲರ ನಿಯೋಗ ಸಿಐಡಿಗೆ ದೂರು ನೀಡಿದೆ

"ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನು ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ಮಾಡಿದ್ದಾರೆಂದು ವಕೀಲ ನಿಯೋಗವು ಸಿಐಡಿಗೆ ದೂರು ನೀಡಿದೆ. ಆ ಮುಖ್ಯಮಂತ್ರಿ ಹಾಗೂ ಅವರ ಮಗ ಯಾರೆಂದು ಬಹಿರಂಗವಾಗಬೇಕು. ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಕರ್ನಾಟಕ ಸ್ಟೇಟ್‌ ನರ್ಸಿಂಗ್‌ ಕೌನ್ಸಿಲ್‌ನಲ್ಲಿನ ಅಕ್ರಮದಲ್ಲೂ ಭಾಗಿಯಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ವೈದ್ಯಕೀಯ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಭಾವಿ ಸಚಿವರು ಕೂಡ ಅಕ್ರಮದ ಪಾಲುದಾರರಾಗಿರಬಹುದು. ಸೂಕ್ತ ತನಿಖೆ ನಡೆದರೆ ಸತ್ಯಾಂಶ ಹೊರಬರಲಿದೆ" ಎಂದು ಭಾಸ್ಕರರಾವ್ ಹೇಳಿದರು.

 ಬೆಂಗಳೂರಿನಲ್ಲಿಯೂ ಅಕ್ರಮ ನಡೆದಿದೆ

ಬೆಂಗಳೂರಿನಲ್ಲಿಯೂ ಅಕ್ರಮ ನಡೆದಿದೆ

"ಪಿಎಸ್‌ಐ ನೇಮಕಾತಿ ಪರೀಕ್ಷೆ ಮಾತ್ರವಲ್ಲದೇ ಇತರೆ ಹುದ್ದೆಗಳ ನೇಮಕಾತಿಯಲ್ಲೂ ಭಾರೀ ಆಕ್ರಮ ನಡೆದಿದೆ. ಕೆಪಿಎಸ್‌ಸಿ ಪರೀಕ್ಷೆ ಪಾಸ್‌ ಮಾಡಿಸುವುದಾಗಿ ಕಾಂಗ್ರೆಸ್‌ ಸಂಸದ ಡಿ. ಕೆ. ಸುರೇಶ್‌ ಲಂಚ ಪಡೆದು ವಂಚಿಸಿ, ನಂತರ ಹಣ ವಾಪಸ್‌ ಕೇಳಿದಾಗಿ ಅಭ್ಯರ್ಥಿ ಮೇಲೆ ಗೂಂಡಾಗಿರಿ ಮಾಡಿದ್ದಾರೆಂದು ಅಭ್ಯರ್ಥಿಯೇ ಆರೋಪ ಮಾಡಿದ್ದಾರೆ. ಸಹಾಯಕ ಉಪನ್ಯಾಸಕರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮವೂ ಬಯಲಾಗಿದೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮವಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ರವರೇ ಸರ್ಕಾರಕ್ಕೆ ಪತ್ರ ಬರೆದಿದ್ದರು. ಬೆಂಗಳೂರಿನ 20 ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿದೆ ಎಂದು ಸಿಐಡಿ ಅಧಿಕಾರಿಗಳು ಹೇಳುತ್ತಿದ್ದಾರೆ" ಎಂದರು.

 ಅದಾನಿ ಜೇಬು ತುಂಬಿಸಲು ಸಾಮಾನ್ಯರ ಲೂಟಿ

ಅದಾನಿ ಜೇಬು ತುಂಬಿಸಲು ಸಾಮಾನ್ಯರ ಲೂಟಿ

"ಜೀರೋ ಪರ್ಸೆಂಟ್‌ ಕಮಿಷನ್‌ ಆಡಳಿತ ನೀಡುವ ಆಮ್‌ ಆದ್ಮಿ ಪಾರ್ಟಿಯಿಂದ ಮಾತ್ರ ಕಡಿಮೆ ದರದಲ್ಲಿ ವಿದ್ಯುತ್‌ ಪೂರೈಸಲು ಸಾಧ್ಯವಾಗುತ್ತದೆ. 40 ಪರ್ಸೆಂಟ್‌ ಬಿಜೆಪಿ ಸರ್ಕಾರವು ಅದಾನಿ ಜೇಬು ತುಂಬಿಸಿ ಕಮಿಷನ್‌ ಪಡೆಯುವ ಬಿಜೆಪಿ ಸರ್ಕಾರದಿಂದ ಇದು ಸಾಧ್ಯವೇ ಇಲ್ಲ. ರಾಜ್ಯ ಸರ್ಕಾರವು ಕಲ್ಲಿದ್ದಲು ಗುತ್ತಿಗೆಯನ್ನು ಅದಾನಿ ಕಂಪನಿಗೆ ನೀಡಿ, ಅಧಿಕ ಬೆಲೆಗೆ ಅದರಿಂದ ವಿದ್ಯುತ್‌ ಖರೀದಿಸುತ್ತಿದೆ. ಇದರಿಂದ ಸರ್ಕಾರಕ್ಕಾಗುವ ನಷ್ಟವನ್ನು ಭರಿಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ" ಎಂದು ಭಾಸ್ಕರ್‌ ರಾವ್‌ ಆರೋಪ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+