ಪಿಎಸ್ಐ ನೇಮಕ ಹಗರಣ: ಅಮೃತ್ ಪೌಲ್ ಪಾತ್ರ ಬಿಡಿಸಿಟ್ಟ ಪ್ರಾಸಿಕ್ಯೂಷನ್
ಬೆಂಗಳೂರು, ಜುಲೈ 11; ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿರುವ ಪಿಎಸ್ಐ ನೇಮಕಾತಿ ಹಗರಣದ 35ನೇ ಆರೋಪಿ ಐಪಿಎಸ್ಅಧಿಕಾರಿ ಅಮೃತ್ ಪೌಲ್ ತಮ್ಮ ವಶದಲ್ಲಿದ್ದ ಉತ್ತರ ಪತ್ರಿಕೆಗಳನ್ನು ತಿದ್ದಲು ಹೇಗೆ ಕಾರಣವಾಗಿದ್ದಾರೆ? ಎಂಬ ಕುರಿತು ಪ್ರಾಸಿಕ್ಯೂಷನ್ ಹೈಕೋರ್ಟ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದೆ.
ಅಮೃತ್ ಪೌಲ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ವಿವರಣೆ ನೀಡಿದ್ದು, ಇದರಿಂದಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮೇಲ್ನೋಟಕ್ಕೆ ಅಮೃತ್ ಪಾಲ್ ಶಾಮೀಲಾಗಿರುವುದು ಬಹುತೇಕ ದೃಢಪಟ್ಟಿದೆ.

ಪ್ರಾಸಿಕ್ಯೂಷನ್ ಪರ ವಕೀಲರು, ಹಗರಣದ ನಡೆದ ವೇಳೆ ಅಮೃತ್ ಪೌಲ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು ಮತ್ತು ಆ ಸಮಯದಲ್ಲಿ ಅವರು ಸುಳ್ಳು ದಾಖಲೆಗಳ ಮೂಲಕ ಕಚೇರಿಗೆ ವೈದ್ಯಕೀಯ ರಜೆ ಹಾಕಿ ಸಂಚು ಸಾಕಾರಗೊಳ್ಳಲು ಕಾರಣವಾಗಿದ್ದು, ಯಾರಿಂದ ಹೇಗೆ ಹಣ ಪಡೆದು ಅಭ್ಯರ್ಥಿಗಳಿಗೆ ಸಹಾಯ ಮಾಡಿದರು ಎಂಬುದನ್ನು ಸವಿವರವಾಗಿ ಬಿಡಿಸಿಟ್ಟರು.
ಕೋರ್ಟ್ಗೆ ನೀಡಿದ ವಿವರಣೆ; ಉತ್ತರ ಪತ್ರಿಕೆಗಳನ್ನು ತಿದ್ದಿದ 2021ರ ಅಕ್ಟೋಬರ್ 7, 8 ಮತ್ತು 16ರಂದು ಆರೋಪಿಯು ವೈದ್ಯಕೀಯ ರಜೆಯಲ್ಲಿ ಇದ್ದುದಾಗಿ ಹೇಳಿ ಪ್ರಮಾಣ ಪತ್ರ ನೀಡಿದ್ದಾರೆ. ಆದರೆ, ಅವರು ಆ ದಿನಗಳಂದು ತಮ್ಮ ಪ್ರಮಾಣ ಪತ್ರದಲ್ಲಿ ಹೇಳಿರುವ ಯಲಹಂಕ ನ್ಯೂ ಟೌನ್ನಲ್ಲಿರುವ ನವಚೇತನ ಆಸ್ಪತ್ರೆಯಲ್ಲಿ ಯಾವುದೇ ಚಿಕಿತ್ಸೆ ಪಡೆದಿಲ್ಲ. ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಇದು ತಿಳಿದು ಬಂದಿದೆ. ಅಂತೆಯೇ, ಆ ದಿನಗಳಲ್ಲಿ ಸ್ಟ್ರಾಂಗ್ ರೂಮಿನ ಕೀಗಳನ್ನು ತಮ್ಮ ವೈಯಕ್ತಿಕ ಛೇಂಬರ್ನಲ್ಲಿರುವ ಅಲ್ಮೇರಾದಲ್ಲಿ ಇರಿಸಿಕೊಂಡಿದ್ದು ಅವುಗಳನ್ನು ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ವಿವರಿಸಿದರು.
ಕೋರ್ಟ್ ಕಲಾಪದ ಅವಧಿ ಮೀರಿದ ಕಾರಣ ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿತು. ಅಮೃತ್ ಪೌಲ್ 2022ರ ಜುಲೈ 4ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ
ವಿಚಾರಣೆ ಜು.12ಕ್ಕೆ ಮುಂದೂಡಿಕೆ: ಪಿಎಸ್ಐ ನೇಮಕಾತಿ ಹಗರಣ ಹಿನ್ನೆಲೆಯಲ್ಲಿ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ನಿಕಪೂಟರ್ವ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜು.12ಕ್ಕೆ ಮುಂದೂಡಿದೆ.
ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳು ನ್ಯಾಯಮೂರ್ತಿ ಜಿ. ನರೇಂದರ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.
ಹೆಚ್ಚುವರಿ ಅಡ್ವೊಕೇಟ್ ಜನರಲ್ ರೊಬೆನ್ ಜಾಕಬ್ ಹಾಜರಾಗಿ, ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಯಾವುದೇ ಆರೋಪಕ್ಕೆ ಗುರಿಯಾಗದ ಅಭ್ಯರ್ಥಿಗಳಿಗೆ ಮತ್ತೊಂದು ಪರೀಕ್ಷೆ ನಡೆಸದಿರಲು ಕೈಗೊಂಡಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಪೂರಕವಾಗಿ ಕಾರಣಗಳನ್ನು ವಿವರಿಸಿ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲರು, ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಕಕ್ಷಿದಾರರ ವಿರುದ್ಧ ರಾಜ್ಯದ ಯಾವುದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿಲ್ಲ. ಆರೋಪಿಗಳ ವಿರುದ್ಧ ಯಾವೆಲ್ಲಾ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಅವುಗಳ ಸ್ಥಿತಿಗತಿ ಕುರಿತ ಮಾಹಿತಿ ಒಳಗೊಂಡ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು
ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಉಭಯ ಪಕ್ಷಕಾರರರು ಸಲ್ಲಿಸಿರುವ ದಾಖಲೆಗಳನ್ನು ಪರಸ್ಪರ ಹಂಚಿಕೊಳ್ಳಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಜು.12ಕ್ಕೆ ಮುಂದೂಡಿತು.












Click it and Unblock the Notifications