PSI Recruitment Re Exam : ಪಿಎಸ್ಐ ನೇಮಕಾತಿ ಮರು ಪರೀಕ್ಷೆ, ಪ್ರವೀಣ್ ಸೂದ್ ಟ್ವೀಟ್
545 ಪಿಎಸ್ಐ ನೇಮಕಾತಿ ಹಗರಣದ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಕರ್ನಾಟಕದ ಡಿಜಿ & ಐಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ. ಆದರೆ ಈ ಕುರಿತು ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ಬಾಕಿ ಇದೆ.
ಬೆಂಗಳೂರು, ಜನವರಿ 29; ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ 545 ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮತ್ತೆ ಯಾವಾಗ ನಡೆಯಲಿದೆ? ಎಂಬುದು ಇನ್ನೂ ತಿಳಿದಿಲ್ಲ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ಪರೀಕ್ಷೆಯನ್ನು ನಡೆಸಲು ಇಲಾಖೆ ಸಿದ್ಧವಿದೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
"ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಈ ಪ್ರಕರಣ ಇತ್ಯರ್ಥವಾಗುವ ತನಕ ಪರೀಕ್ಷೆ ನಡೆಸದಂತೆ ನಮ್ಮನ್ನು ನಿರ್ಬಂಧಿಸಲಾಗಿದೆ. ನ್ಯಾಯಾಲಯದ ಅಂತಿಮ ಆದೇಶಕ್ಕೆ ಇಲಾಖೆ ಬದ್ಧವಿದೆ" ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರು ತಮ್ಮ ಟ್ವೀಟ್ನಲ್ಲಿ ಆರ್ಎಸ್ಐ (ಸಿಎಆರ್/ಡಿಎಆರ್), ವಿಶೇಷ ಆರ್ಎಸ್ಐ (ಕೆಎಸ್ಆರ್ಪಿ) ಹಾಗೂ ಪಿಎಸ್ಐ (ರಾಜ್ಯ ಕೈಗಾರಿಕಾ ಭದ್ರತಾ ಪಡೆ) ಪರೀಕ್ಷೆಗಳನ್ನು ನಾವು ನಡೆಸಿದ್ದೇವೆ" ಎಂದು ಟ್ವೀಟ್ ಮಾಡಿದ್ದಾರೆ.
ನೇಮಕಾತಿ ಹಗರಣ; 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬುದು ಆರೋಪ. ಕರ್ನಾಟಕ ಸರ್ಕಾರ ಈ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿದೆ ಮತ್ತು ಈ ಹಿಂದೆ ನಡೆದಿದ್ದ ಲಿಖಿತ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
We have conducted exams for RSI (CAR/ DAR), Spl RSI KSRP and PSI KSISF (tom). We are ready to conduct re-examine for 545 PSIs but waiting for court order which has restrained us from doing so till disposal of case. Will abide by court decision.
— DGP KARNATAKA (@DgpKarnataka) January 28, 2023
ಕೆಲವು ಅಭ್ಯರ್ಥಿಗಳು ಸರ್ಕಾರದ ತೀರ್ಮಾನ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್ ಮಧ್ಯಂತರ ಆದೇಶದ ಅನ್ವಯ ಈಗ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಅಲ್ಲದೇ ಕೋರ್ಟ್ ನೀಡುವ ಆದೇಶದ ಮೇಲೆ ಮುಂದಿನ ತೀರ್ಮಾನವನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕಿದೆ.
ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಬ್ಲೂಟುಥ್ ಡಿವೈಸ್ ಬಳಸಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಬರೆದ ಅಭ್ಯರ್ಥಿಗಳ ಒಎಂಆರ್ ಶೀಟ್ ತಿದ್ದಲಾಗಿದೆ ಎಂಬ ಆರೋಪವಿತ್ತು. ಆದ್ದರಿಂದ ಸರ್ಕಾರ ಸಂಪೂರ್ಣ ಪರೀಕ್ಷೆಯನ್ನು 2022ರ ಆಗಸ್ಟ್ನಲ್ಲಿ ರದ್ದುಗೊಳಿಸಿತ್ತು.
ಗೃಹ ಸಚಿವ ಆರಗ ಜ್ಞಾನೇಂದ್ರ ಈ ಕುರಿತು ಮಾಹಿತಿ ನೀಡಿದ್ದರು, "545 ಪಿಎಸ್ಐ ಹುದ್ದೆಗಳಿಗೆ ಕಳೆದ ವರ್ಷ ನಡೆಸಲಾದ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ ಮೊತ್ತೊಮ್ಮೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಹಿಂದೆ ನಡೆದಿದ್ದ ಪರೀಕ್ಷೆ ಫಲಿತಾಂಶವನ್ನು ರದ್ದು ಮಾಡಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲಾಗುತ್ತದೆ" ಎಂದು ಹೇಳಿದ್ದರು.












Click it and Unblock the Notifications