ಪಿಎಸ್ಐ ನೇಮಕಾತಿ ಹಗರಣ: ದಿವ್ಯಾ, ವೈಜನಾಥ್ ಜಾಮೀನು ಅರ್ಜಿ ಮತ್ತೆ ವಜಾ
ಬೆಂಗಳೂರು, ಡಿಸೆಂಬರ್ 07; ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಬಿಜೆಪಿಯ ನಾಯಕಿ ದಿವ್ಯಾ ಹಾಗರಗಿ ಮತ್ತು ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್ಆರ್ಪಿ) ಸಹಾಯಕ ಕಮಾಡೆಂಟ್ ವೈಜನಾಥ್ ಕಲ್ಯಾಣಿ ರೇವೂರ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ.
ಇದರಿಂದಾಗಿ ಅವರು ಸೆರೆವಾಸದಲ್ಲಿಯೇ ಮುಂದುವರಿಯಬೇಕಾಗಿದೆ. ದಿವ್ಯಾ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವುದು ಇದು ನಾಲ್ಕನೇಯ ಸಲ. ಅವರು ಜಾಮೀನು ಪಡೆಯಲು ಏನೆಲ್ಲಾ ಕಸರತ್ತು ನಡೆಸಿದರೂ ಕೋರ್ಟ್ ಅದಕ್ಕೆ ಸೊಪ್ಪು ಹಾಕುತ್ತಿಲ್ಲ.
ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ದಿವ್ಯಾ ಮತ್ತು ವೈಜನಾಥ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ. ಜಿ. ಉಮಾ ಏಕಸದಸ್ಯ ಪೀಠ ಆದೇಶಿಸಿದೆ.

ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಅಕ್ರಮ ಎಸಗಲು ನೆರವಾದ ಆರೋಪದ ಮೇಲೆ ದಿವ್ಯಾ ಹಾಗರಗಿ ಅವರನ್ನು ಏಪ್ರಿಲ್ 29ರಂದು ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದರು. ವೈಜನಾಥ್ ಅವರನ್ನು ಮೇ 6ರಂದು ಬಂಧಿಸಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ದಿವ್ಯಾ ಹಾಗರಗಿ ಪತಿ ರಾಜೇಶ್ ಅವರನ್ನು 2022ರ ಏಪ್ರಿಲ್ 7ರಂದು ಪೊಲೀಸರು ಬಂಧಿಸಿದ್ದರು. ಅವರಿಗೆ 2022ರ ಸೆಪ್ಟೆಂಬರ್ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು.
ಪಿಎಸ್ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಬಳಿಕ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದರು. 18 ದಿನಗಳ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದರು. ಅವರು ಹಗರಣದ ಪ್ರಮುಖ ಆರೋಪಿಯಾಗಿದ್ದಾರೆ.
ದಿವ್ಯಾ ಹಾಗರಗಿ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಶಾಲೆಯಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಈ ಕೇಂದ್ರದಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಅಕ್ರಮದಲ್ಲಿ ತೊಡಗಿದ್ದಾರೆ ಎಂಬುದು ಆರೋಪವಾಗಿದ್ದು, ತನಿಖೆ ನಡೆಯುತ್ತಿದೆ.












Click it and Unblock the Notifications