ಪಿಎಸ್ಐ ಅಕ್ರಮ: ಮರು ಪರೀಕ್ಷೆ ಸದ್ಯಕ್ಕಿಲ್ಲ, ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು ಅ.10. ನೇಮಕಲ್ಲಿ ಭಾರಿ ಅಕ್ರಮ ಹಿನ್ನೆಲೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ್ಐ) ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಅ.19ರವರೆಗೆ ವಿಸ್ತರಣೆ ಮಾಡಿದೆ. ಹಾಗಾಗಿ ಸದ್ಯಕ್ಕೆ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಇಲ್ಲ. ನೇಮಕ ಕುರಿತ ಅನಿಶ್ಚಿತತೆ ಮುಂದುವರಿಯಲಿದೆ.
ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ಕುರಿತು ವಿಚಾರಣೆ ನೆಡಸಿದ ನ್ಯಾಯಮೂರ್ತಿ ಜಿ. ನರೇಂದರ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ಈ ಆದೇಶ ಮಾಡಿತು.
ಅರ್ಜಿದಾರರ ಅಭ್ಯರ್ಥಿಗಳ ಪೈಕಿ ಓರ್ವ ವಕೀಲರು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಪೀಠ ವಿಚಾರಣೆಯನ್ನು ಅ.19 ಕ್ಕೆ ಮುಂದೂಡಿತು. ಜತೆಗೆ ನ್ಯಾಯಾಲಯದ ಮುಂದಿನ ಆದೇಶದವರೆಗೆ ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿ 2022ರ ಸೆ.28ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅ.19ರವರೆಗೂ ವಿಸ್ತರಣೆ ಮಾಡುವುದಾಗಿ ಆದೇಶಿಸಿತು.
ತಡೆ ನೀಡಿದ್ದ ಹೈಕೋರ್ಟ್:
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕದಲ್ಲಿ ಭಾಗಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರ ಕೈಗೊಂಡಿದ್ದ ತೀರ್ಮಾನಕ್ಕೆ ಹೈಕೋರ್ಟ್ ಸೆ.28ರಂದು ತಡೆಯೊಡ್ಡಿದೆ.
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಮರು ಪರೀಕ್ಷೆ ದಿನಾಂಕವನ್ನು ಪ್ರಕಟಿಸಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ವಾದವೇನು?
ಅರ್ಜಿದಾರರ ಪರ ವಕೀಲರು, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು 32 ಮಂದಿ ಕಳಂಕಿತರು ಎಂದು ಗುರುತಿಸಿ ಅವರ ವಿರುದ್ಧ ಆರೋಪಪಟ್ಟಯನ್ನೂ ಸಹ ದಾಖಲಿಸಲಾಗಿದೆ. ಹಾಗಾಗಿ ಕಳಂಕಿತರನ್ನು ಮತ್ತು ಕಳಂಕಿತರಲ್ಲದವರನ್ನು ಪ್ರತ್ಯೇಕಿಸಲು ಅವಕಾಶವಿರುವುದರಿಂದ ಮರು ಪರೀಕ್ಷೆ ನಡೆಸುವ ಅವಶ್ಯಕತೆ ಇಲ್ಲಎಂದು ಹೇಳಿದರು.
ಅಲ್ಲದೆ, ಈಗಾಗಲೇ ಆಯ್ಕೆಯಾಗಿರುವ ನೂರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗಲಿವೆ. ಜತೆಗೆ ಎಷ್ಟೊ ಅಭ್ಯರ್ಥಿಗಳಿಗೆ ವಯೋಮಿತಿ ಮೀರುತ್ತಿದ್ದು, ಅವರಿಗೆ ಉದ್ಯೋಗ ಲಭಿಸುವುದು ಕಷ್ಟಕರವಾಗಲಿದೆ ಎಂದರು.
ಕಳಂಕಿತರನ್ನು ಪ್ರತ್ಯೇಕಿಸಲಾಗದು:
ಅರ್ಜಿದಾರರ ವಾದಕ್ಕೆ ಪ್ರತ್ಯುತ್ತರ ನೀಡಿದ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಪ್ರಕರಣ ವ್ಯಾಪಕವಾಗಿ ಹರಡಿದ್ದು, ನೇಮಕಾತಿ ಪ್ರಾಧಿಕಾರದ ವಿರುದ್ಧವೇ ಅಕ್ರಮವೆಸಗಿರುವ ಆರೋಪವಿರುವ ಹಿನ್ನೆಲೆಯಲ್ಲಿಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಜತೆಗೆ ಹಲವು ಅಧಿಕಾರಿಗಳು, ಅಭ್ಯರ್ಥಿಗಳು, ಮಧ್ಯವರ್ತಿಗಳು ಭಾಗಿಯಾಗಿದ್ದಾರೆ. ಪರೀಕ್ಷೆಯಲ್ಲೇ ಅಕ್ರಮವಾಗಿರುವುದರಿಂದ ಸರಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮರುಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದರು.
ಸರಕಾರ ಏ.29ರಂದು ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿತ್ತು. ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ)ಜು.19ರಂದು ವಜಾಗೊಳಿಸಿತ್ತು. ಅದರ ವಿರುದ್ಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಮೇಲ್ಮನವಿ ಸಲ್ಲಿಸಿದ್ದಾರೆ.