ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕಡ್ಡಾಯ ಪರೀಕ್ಷೆ: ಸಾರ್ವಜನಿಕರ ಆಕ್ರೋಶ
ಬೆಂಗಳೂರು, ಜೂ.07: ಕೊರೊನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವ ಶಿಕ್ಷಣ ಇಲಾಖೆ ಪಿಯುಸಿ ಪುನರಾವರ್ತಿತ ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮೂಹೂರ್ತ ನಿಗದಿಮಾಡಿದೆ. ಆದರೆ ಶಿಕ್ಷಣ ಇಲಾಖೆಯ ಈ ಅವೈಜ್ಞಾನಿಕ ತೀರ್ಮಾನದ ವಿರುದ್ಧ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳು ತಿರುಗಿ ಬಿದ್ದಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವೈಜ್ಞಾನಿಕ ತೀರ್ಮಾನದ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಕಾನೂನು ಸಮರಕ್ಕೆ ಸಿದ್ಧತೆ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಸಿಬಿಎಸ್ಇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ರದ್ದು ಮಾಡುವ ನಿರ್ಧಾರ ಪ್ರಕಟಿಸಿದರು. ಇನ್ನು ಪರೀಕ್ಷೆ ಬರೆಯುವ ಆಸಕ್ತಿ ಉಳ್ಳವರಿಗೆ ಅವಕಾಶವನ್ನು ಕೂಡ ನೀಡಿದ್ದರು. ಆದರೆ, ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸುವುದಾಗಿ ತಿಳಿಸಿದ್ದರು. ಪಿಯುಸಿ ಮಕ್ಕಳಿಗೆ ಕೊರೊನಾ ಬರುತ್ತದೆ, ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕೊರೊನಾ ಬರುವುದಿಲ್ಲವೇ ಎಂದು ಎಸ್ಎಸ್ಎಲ್ ಸಿ ವಿದ್ಯಾರ್ಥಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿವಾದದ ಬಿಸಿ ತಾರಕಕ್ಕೇರುತ್ತಿದೆ. ಇದರ ನಡುವೆ ಪಿಯುಸಿ ಪುನರಾವರ್ತಿತ ಅಭ್ಯರ್ಥಿಗಳು ಕೂಡ ತಿರುಗಿ ಬಿದ್ದಿದ್ದಾರೆ.
ರಾಜ್ಯದಲ್ಲಿ 76,387 ಪುನರಾವರ್ತಿತ ಪಿಯುಸಿ ವಿದ್ಯಾರ್ಥಿಗಳು ಈ ಭಾರಿಯ ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. ಇನ್ನು 17,477 ವಿದ್ಯಾರ್ಥಿಗಳು ಖಾಸಗಿಯಾಗಿ ನೋಂದಣಿ ಮಾಡಿದ್ದಾರೆ. ಇವರು ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳ ಮಾದರಿಯಲ್ಲಿಯೇ ಪಿಯಸಿ ಪರೀಕ್ಷೆ ಎದುರಿಸಬೇಕಾಗಿದೆ. ಇದರು ಇದೀಗ ಬಾರೀ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಫ್ರೆಶರ್ಸ್ ವಿದ್ಯಾರ್ಥಿಗಳಿಗೆ ಮಾತ್ರ ಕೊರೊನಾ ಸೋಂಕು ಬರುತ್ತದೆ. ಆದರೆ ನಮಗೆ ಬರುವುದಿಲ್ಲವೇ ? ಅವರಿಗೊಂದು ನ್ಯಾಯ, ನಮಗೊಂದು ನ್ಯಾಯ. ಯಾವು ಪರೀಕ್ಷೆ ಬರೆಯುವುದಿಲ್ಲ. ನಮ್ಮನ್ನು ಉತ್ತೀರ್ಣ ಮಾಡಲಿ. ಇಲ್ಲವೇ ಎಲ್ಲರ ಕೈಯಲ್ಲೂ ಪರೀಕ್ಷೆ ಬರೆಸಲಿ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Recommended Video
ಮೂರನೇ ಅಲೆಗೆ ಟಾರ್ಗೆಟ್: ಇನ್ನು ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡುತ್ತಿರುವ ಶಿಕ್ಷಣ ಸಚಿವರ ತೀರ್ಮಾನದ ವಿರುದ್ಧ ಇಡೀ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಶಿಕ್ಷಣ ಇಲಾಖೆಯ ಅವೈಜ್ಞಾನಿಕ ತೀರ್ಮಾನದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಕಿಡಿ ಕಾರಿದ್ದರು. ರಾಜ್ಯದಲ್ಲಿ ಈಗಾಗಲೇ 2 ಲಕ್ಷ ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಇಷ್ಟಾಗಿಯೂ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿನ ಬಗ್ಗೆ ಸಮರ್ಥ ದಾಖಲೆಗಳನ್ನು ಆರೋಗ್ಯ ಇಲಾಖೆ ನಿರ್ವಹಣೆ ಮಾಡುತ್ತಿಲ್ಲ. ಇಂಥ ಸಂಕಷ್ಟ ಸ್ಥಿತಿಯಲ್ಲಿ ಮೂರನೇ ಅಲೆ ಭೀತಿ ಎದುರಾಗಿದೆ. ಹೀಗಾಗಿ ಎಲ್ಲರಿಗೂ ಸಮಾನವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪರೀಕ್ಷೆ ರದ್ದು ಮಾಡಬೇಕು ಎಂಬ ಕೂಗು ಕೇಳಿಬರುತ್ತಿದೆ. ನಾನಿರುವುದೇ ತಪ್ಪು ಮಾಡಲಿಕ್ಕೆ ಎಂಬಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಲಾದರೂ ಎಲ್ಲ ವಿದ್ಯಾರ್ಥಿಗಳನ್ನು ಸಮಾನವಾಗಿ ಸ್ವೀಕರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.