ನಾಯಕತ್ವ ತ್ಯಜಿಸುವ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ
ಬೆಂಗಳೂರು, ಅಕ್ಟೋಬರ್ 18 : ಸ್ವಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಎಚ್. ಡಿ. ಕುಮಾರಸ್ವಾಮಿ ನಾಯಕತ್ವ ತ್ಯಜಿಸುವ ಮಾತನಾಡಿದ್ದಾರೆ. "ಅವರಿಗೆ ಬೇಕಾದ ನಾಯಕರನ್ನು ಆಯ್ಕೆ ಮಾಡಿಕೊಳ್ಳಲಿ" ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, "ಹಿರಿಯ ನಾಯಕ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ನಾಯಕರಿಗೆ ನನ್ನ ನಾಯಕತ್ವದಲ್ಲಿ ವಿಶ್ವಾಸ ಇಲ್ಲದಿದ್ದರೆ ನಾನು ಶಾಸಕಾಂಗ ನಾಯಕತ್ವ ತ್ಯಜಿಸಲು ಸಿದ್ಧ" ಎಂದರು.
"ಅಸಮಾಧಾನವಿದ್ದವರು ದೇವೇಗೌಡರ ಜೊತೆ ಮಾತನಾಡಲಿ. ಹೊಸ ನಾಯಕತ್ವ ಹುಡುಕಿಕೊಳ್ಳಲಿ. ಅದಕ್ಕೆ ನನ್ನ ಯಾವುದೇ ವಿರೋಧವಿಲ್ಲ. ಎಲ್ಲರ ಜೊತೆ ನಾನು ಗೌರವಯುತವಾಗಿ ನಡೆದುಕೊಂಡಿದ್ದೇನೆ. ಯಾರಿಂದಲೂ ಆ ವಿಚಾರವಾಗಿ ನಾನು ಸರ್ಟಿಫಿಕೇಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ" ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರನ್ನು ಎಚ್. ಡಿ. ಕುಮಾರಸ್ವಾಮಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ಪರಿಷತ್ ಸದಸ್ಯರಿಗೆ ಸರಿಯಾದ ಸ್ಥಾನಮಾನ ನೀಡಿಲ್ಲ ಎಂಬ ವಿಚಾರದಲ್ಲಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದರು.
"ಜೆಡಿಎಸ್ ವರಿಷ್ಠರು ನಮ್ಮ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿರುವುದರಿಂದ ಬೇಸರಗೊಂಡ ಹಲವು ಶಾಸಕರು ಸಭೆ ಮಾಡಿದ್ದೇವೆ. ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಹಾಗೆಂದು ಸದ್ಯಕ್ಕೆ ಪಕ್ಷ ತೊರೆಯುವ ಯಾವುದೇ ಆಲೋಚನೆ ಇಲ್ಲ" ಎಂದು ಬಸವರಾಜ ಹೊರಟ್ಟಿ ಹೇಳಿದ್ದರು.
ಬಸವರಾಜ ಹೊರಟ್ಟಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಹಿರಿಯ ವಿಧಾನ ಪರಿಷತ್ ಸದಸ್ಯರಾದ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ. ಅಂದಿನಿಂದಲೂ ಅವರು ಪಕ್ಷದ ನಾಯಕತ್ವದ ಬಗ್ಗೆ ಬೇಸರ ವ್ಯಕ್ತಪಡಿಸುತ್ತಲೇ ಇದ್ದಾರೆ.











Click it and Unblock the Notifications