ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಡಿ ಕೆ ಸುರೇಶ್
ಬೆಂಗಳೂರು, ಫೆಬ್ರವರಿ 14: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವಕ್ಕಾಗಿ ಜಟಾಪಟಿ ನಡೆಯುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ದೀರ್ಘಾವದಿ ಮುಖ್ಯಮಂತ್ರಿ ದಾಖಲೆ ಬರೆಯುವ ಉತ್ಸಾಹದಲ್ಲಿದ್ದಾರೆ. ಸದ್ಯಕ್ಕೆ ಚುನಾವಣೆ ರಾಜಕೀಯಕ್ಕೆ ನಿವೃತ್ತಿಯ ನಿರ್ಧಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಈ ಕುರಿತು ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಶಾಸಕಾಂಗದ ನಾಯಕರು. ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯಿಲ್ಲ. ಆದರೆ ಬೇರೆಯವರು ಬೇರೆ ಬೇರೆ ರೀತಿ ವ್ಯಾಖ್ಯಾನಗಳನ್ನು ಮಾಡುತ್ತಿದ್ದಾರೆ. ಇದರ ಬಗ್ಗೆ ಯಾವುದೇ ಚರ್ಚೆಯಿಲ್ಲದೇ ಇರುವ ಕಾರಣ ಇದು ಅಪ್ರಸ್ತುತ ವಿಚಾರ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಬಿಜೆಪಿಯವರು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟನೆ ನಾಟಕ ಮಾಡುವ ಬದಲು ಕರ್ನಾಟಕದ ಪಾಲಿನ ತೆರಿಗೆ ಹಣ ಕೊಡಿಸಲಿ. ಒಳ್ಳೆಯ ಕೆಲಸ ಮಾಡದೇ ಇದ್ದರೂ ಕೆಟ್ಟ ಕೆಲಸ ಮಾಡುವುದರಲ್ಲಿ ಬಿಜೆಪಿಯವರು ಎತ್ತಿದ ಕೈ. ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರವೇ ಅಡ್ಡಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕಿಡಿಕಾರಿದರು.
ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳುವುದು ಸಣ್ಣತನ ಎನ್ನುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆ ಬಗ್ಗೆ ಮಾತನಾಡಿ, ರಾಜ್ಯಗಳ ಸಣ್ಣತನ ಎನ್ನುವುದಕ್ಕಿಂತ ರಾಜ್ಯಗಳ ಆರ್ಥಿಕ ಸ್ಥಿತಿಯನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ. ಇತರೇ ರಾಜ್ಯಗಳಲ್ಲಿ ನಮ್ಮ ತೆರಿಗೆ ಹಣವನ್ನು ಕೇಂದ್ರ ಬಿಜೆಪಿ ಸರ್ಕಾರ ವೃಥಾ ವ್ಯಯ ಮಾಡುತ್ತಿದೆ. ದಕ್ಷಿಣ ಭಾರತದಲ್ಲಿ ಎಲ್ಲವೂ ಬಿಜೆಪಿಯೇತರ ಸರ್ಕಾರಗಳೇ ಇವೆ. ದಕ್ಷಿಣ ಭಾರತಕ್ಕೆ ಸದಾ ಅನ್ಯಾಯ ಮಾಡಲಾಗುತ್ತಿದೆ. ಜನ ಎಚ್ಚೆತ್ತುಕೊಳ್ಳಬೇಕಾಗಿದೆ. ಅಭಿವೃದ್ದಿಗೆ ಹಣ ನೀಡದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವ ಬೆಂಗಳೂರಿಗೆ ಕೆಟ್ಟ ಹೆಸರು ತರಬೇಕು ಎನ್ನುವುದು ಬಿಜೆಪಿಯ ಹುನ್ನಾರ ಎಂದರು.
ಮೆಟ್ರೋ ದರ ಏರಿಕೆ ಕಾಂಗ್ರೆಸ್ ಸರ್ಕಾರದ ವಿಚಾರ ಎನ್ನುವ ಬಿಜೆಪಿ ಆರೋಪದ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 10: 10 ಅನುಪಾತದಲ್ಲಿ ಅನುದಾನ ನೀಡಿವೆ. ಶೇ 80 ರಷ್ಟು ಅನುದಾನವನ್ನು ಕೇಂದ್ರ ಸರ್ಕಾರದ ಭದ್ರತೆ ಮೇಲೆ ಸಾಲ ನೀಡಲಾಗಿದೆ. ಇದರ ಭಾರವನ್ನು ರಾಜ್ಯ ಸರ್ಕಾರವೇ ಹೊರಬೇಕು. ಆದರೆ ಮೆಟ್ರೋ ನಿರ್ವಹಣೆ ಕೇಂದ್ರ ಸರ್ಕಾರ ಮಾಡುತ್ತದೆ ಎಂದು ಡಿ ಕೆ ಸುರೇಶ್ ತಿಳಿಸಿದರು.
ಬೆಲೆ ಏರಿಕೆಯಲ್ಲಿ ರಾಜ್ಯ ಸರ್ಕಾರದ ಯಾವುದೇ ಕೈವಾಡವಿಲ್ಲ. ಕರ್ನಾಟಕದ ಮೇಲೆ ಪ್ರೀತಿ ಇದೆ ಎಂದಾದರೇ ಹೆಚ್ಚಿನ ಅನುದಾನ ನೀಡಿ ಕನ್ನಡಿಗರ ಮೇಲಿನ ಹೊರೆಯನ್ನು ಕಡಿಮೆ ಮಾಡಲಿ. ಶೇ10 ರಷ್ಟು ಅನುಪಾತದ ಬದಲು ಶೇ 40 ರಷ್ಟು ನೀಡಲಿ. ಅದರ ಬದಲು ಬಡ್ಡಿದರ ಕಟ್ಟಬೇಕು ಎಂದರೆ ಹೇಗೆ? ಇದನ್ನು ಎಲ್ಲಾ ನಿಗದಿ ಮಾಡಿರುವುದೇ ಕೇಂದ್ರ ಸರ್ಕಾರ. ಇದರ ಬಗ್ಗೆ ವಿರೋಧ ಮಾಡುತ್ತಿರುವ ಒಂದಷ್ಟು ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮುಂದೆ ಮಾತನಾಡಿ ಅನುದಾನ ಹೆಚ್ಚಿಸಲಿ ಎಂದರು.
ರಾಜ್ಯ ಸರ್ಕಾರ ಪ್ರಧಾನಿಯವರಿಗೆ ಪತ್ರ ಬರೆದರೆ ಮೆಟ್ರೋ ದರ ಕಡಿಮೆಯಾಗುತ್ತದೆ ಎನ್ನುವ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ರಾಜ್ಯ ಸರ್ಕಾರ ಪತ್ರ ಏಕೆ ಬರೆಯಬೇಕು?. ನಮ್ಮ ಪಾಲಿನ ತೆರಿಗೆ ಹಣ ಕೇಳಿದ್ದೇವೆ ಅದನ್ನು ಕೊಡಿಸಲಿ. ಅವರ ನೈಪುಣ್ಯತೆ, ಬದ್ಧತೆಯನ್ನು ಈ ವಿಚಾರದಲ್ಲಿ ತೋರಿಸಲಿ ಎಂದು ತಿರುಗೇಟು ನೀಡಿದರು.












Click it and Unblock the Notifications