ಲವ್ ಜಿಹಾದ್ ಲಿಂಕಿರುವ ಅತ್ಯಾಚಾರ ಕೇಸ್ ಹೆಚ್ಚಳ, ಮುಸ್ಲಿಂ ರಾಷ್ಟ್ರ ಮಾಡುವ ದುರುದ್ದೇಶ: ಆರ್.ಅಶೋಕ್
ಬೆಂಗಳೂರು, ಆಗಸ್ಟ್ 26: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಲವ್ ಜಿಹಾದ್ ಲಿಂಕ್ ಇರುವ ಅತ್ಯಾಚಾರ ಪ್ರಕರಣಗಳು ಏರಿಕೆ ಆಗಿವೆ. ಸರ್ಕಾರದ ಕುಮ್ಮಕ್ಕಿನಿಂದಲೇ ಇದೆಲ್ಲ ನಡೆಯುತ್ತಿದೆ. 2047 ರೊಳಗೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂಬ ಕರಪತ್ರಗಳು ಕೂಡ ಹರಿದಾಡಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಗಂಭೀರ ಆರೋಪ ಮಾಡಿದರು.
ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉಡುಪಿಯಲ್ಲಿ ಲವ್ ಜಿಹಾದ್ ಲಿಂಕ್ ಇರುವ ಅತ್ಯಾಚಾರ ಪ್ರಕರಣ ಜರುಗಿದೆ. ಈ ಹಿಂದೆ ಹುಬ್ಬಳ್ಳಿ ಹಾಗೂ ಹಾವೇರಿಯಲ್ಲಿ ನಡೆದಿದ್ದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ. ಇದು ಪೂರ್ವ ನಿಯೋಜಿತವಾಗಿ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಈ ಪ್ರಕರಣ ಹೆಚ್ಚಾಗಿವೆ ಎಂದರು.

ಅಧಿಕಾರದಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಎಂಬ ನಂಬಿಕೆ ಈ ಕೃತ್ಯ ಎಸಗುತ್ತಿರುವವರಲ್ಲಿ ಬಂದು ಬಿಟ್ಟಿದೆ. ಮುಖ್ಯವಗಿ ಕೇರಳದಲ್ಲಿ ಲವ್ ಜಿಹಾದ್ ಕೇಂದ್ರವೂ ಇದ್ದು, ಅಲ್ಲಿ ಯುವಕರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಅವರು ಆಪಾದಿಸಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ಫೋಟೋ ವೈರಲ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಫೋಟೋ ತೆಗೆಯಲು ಜೈಲಿನ ಒಳಗೆ ಮೊಬೈಲ್ ಎಲ್ಲಿಂದ ಬಂತು? ಜೈಲಿನಲ್ಲಿ ರಾಜಾರೋಷವಾಗಿ ಸಿಗರೇಟು, ಕಾಫಿ, ಮಾದಕ ವಸ್ತು ನೀಡಲಾಗುತ್ತಿದೆ.
ಈಗಾಗಲೇ ಕಾನೂನು ಸುವ್ಯವಸ್ಥೆ ಕುಸಿದುಹೋಗಿದೆ. ಅತ್ಯಾಚಾರ, ಕೊಲೆ ಹೆಚ್ಚಿದೆ. ಸರ್ಕಾರ ಉಳಿಯುತ್ತೋ, ಇರುತ್ತೋ ಎಂದೇ ಶಾಸಕರು, ಸಚಿವರು ಚಿಂತೆ ಮಾಡುತ್ತಿದ್ದಾರೆ. ಜೈಲಿನಲ್ಲಿ ನಡೆದ ಈ ಘಟನೆಗಳಿಗೆ ರಾಜ್ಯ ಸರ್ಕಾರವೇ ಉತ್ತರಿಸಬೇಕು. ಕೇವಲ ತನಿಖೆ ಮಾಡುತ್ತೇವೆ ಎಂದು ಹೇಳಿದರೆ ಪ್ರಯೋಜನವಿಲ್ಲ ಎಂದು ಕಿಡಿ ಕಾರಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆ ಅನುಮತಿ ನೀಡಲಾಗಿದೆ. ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ನಿಂದ ಕಾನೂನು ಹೋರಾಟಕ್ಕೆ ಚರ್ಚಿಸಲಾಗಿದೆ. ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದರು.

ಸರ್ಕಾರ ಪತನಕ್ಕೆ ಮುಂದಾಗಿಲ್ಲ: ಆಫರ್ ಕೊಟ್ಟವರ ಬಗ್ಗೆ ತಿಳಿಸಲಿ?
ಕಾಂಗ್ರೆಸ್ ಸರ್ಕಾರ ಮುಡಾ ಹಗರಣ, ವಾಲ್ಮೀಕಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡುತ್ತಿದ್ದಾರೆ. ಜನರನ್ನು ಬೇರೆಡೆ ಸೆಳೆಯುವ ಕಾಂಗ್ರೆಸ್ ಕುತಂತ್ರ ಮಾಡಿದ್ದಾರೆ. ಬಿಜೆಪಿಯು ರಾಝ್ಯ ಸರ್ಕಾರ ಬೀಳಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಈ ಬಗ್ಗೆ ಸ್ಪಷ್ಟನೆ ಸಹ ನೀಡಿದ್ದೇವೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು. ಒಂದು ವೇಳೆ ಆಫರ್ ನೀಡಿದ್ದರೆ, ಆಫರ್ ಈಡಿದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಅವರು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ತೆಗೆದು ಹಾಕಬೇಕೆಂದು ಅವರ ಪಕ್ಷದ ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಬಸ್ ಟಿಕೆಟ್ ದರ ಮತ್ತು ನೀರಿನ ದರ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಪೆಟ್ರೋಲ್, ಮಾರ್ಗಸೂಚಿ ದರ ಹೆಚ್ಚಾಗಿದೆ. ಉಸಿರಾಡುವ ಗಾಳಿಗೂ ತೆರಿಗೆ ಹಾಕುತ್ತಾರೆ ಎಂದು ಅವರು ಸರ್ಕಾರದ ನಿರ್ಧಾರಗಳಿಗೆ ವ್ಯಂಗ್ಯವಾಡಿದರು.
ಸರ್ಕಾರ ಗ್ಯಾರಂಟಿಗೆ ಹಣ ಮೀಸಲಿಡುವಲ್ಲಿ ವಿಫಲವಾಗಿದೆ, ದಿವಾಳಿಯಾಗಿದೆ. ಹೀಗಿದ್ದರೂ ಕಾಂಗ್ರೆಸ್ ನಾಯಕರು ಏಣಿ ಹತ್ತಿಸಿದ ಮತದಾರರ ಬಗ್ಗೆ ಬಹಳ ಕೀಳಾಗಿ ಮಾತಾಡುತ್ತಿದ್ದಾರೆ. ಮುಂದೆ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿರುವುದರಿಂದ ಆದಷ್ಟು ಲೂಟಿ ಮಾಡಲು ನೋಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ಇದೇ ಅವಧಿಯಲ್ಲಿಏ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಕುರ್ಚಿಗಾಗಿ ತಂತ್ರ ಹೆಣೆದಿದ್ದಾರೆ ಎಂದು ಅವರು ಹೇಳಿದರು.












Click it and Unblock the Notifications