'ಕಾಂಗ್ರೆಸ್ ಸರ್ಕಾರ ಕೇರಳಕ್ಕೆ ಉಪಕಾರಿ ಕರ್ನಾಟಕಕ್ಕೆ ಮಾರಿ'
ಬೆಂಗಳೂರು, ಡಿಸೆಂಬರ್ 11: ಕೇರಳದ ವಯನಾಡಿನಲ್ಲಿ ಜುಲೈ 30ರಂದು ಸಂಭವಿಸಿದ ಭೂಕುಸಿತ ಸಂಪೂರ್ಣ ದೇವರ ನಾಡನ್ನೇ ಅಲ್ಲೋಲ ಕಲ್ಲೋಲಗೊಳಿಸಿತ್ತು. ಇನ್ನೂರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ಮನೆಗಳು ಸಂಪೂರ್ಣ ನಾಶಗೊಂಡಿತ್ತು. ಹೀಗಾಗಿ ವಯನಾಡಿನಲ್ಲಿ ಪುನರ್ವಸತಿ ಸೌಲಭ್ಯ ನೀಡಲು ಸ್ಥಳೀಯ ಸರ್ಕಾರ ಮುಂದಾಗಿದ್ದು, ಈ ಕಾರ್ಯಕ್ಕೆ ಕರ್ನಾಟಕ ಸರ್ಕಾರ ಕೂಡ ಕೈ ಜೋಡಿಸಿತ್ತು.
ಭೂಕುಸಿತ ನಂತರ ವಯನಾಡು ಪುನರ್ವಸತಿ ಯೋಜನೆಯ ಭಾಗವಾಗಿ ನಿರ್ಮಿಸುತ್ತಿರುವ ಮನೆಗಳ ಪೈಕಿ 100 ಮನೆಗಳನ್ನು ಕಟ್ಟಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಈ ಹಿಂದೆ ಭರವಸೆ ನೀಡಿತ್ತು. ಆದರೆ ಕರ್ನಾಟಕ ಸರ್ಕಾರದ ಈ ಪ್ರಸ್ತಾವನೆಗೆ ಕೇರಳ ಸರ್ಕಾರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಮತ್ತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಗೆ ಪತ್ರ ಬರೆದಿದ್ದಾರೆ. ಇದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೇರಳದ ವಯನಾಡಿಗೆ ನೆರವಾಗಲು ಮುಂದಾಗುತ್ತಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರ ಕೇರಳಕ್ಕೆ ಉಪಕಾರಿ ಕರ್ನಾಟಕಕ್ಕೆ ಮಾರಿ ಎಂದು ಗುಡುಗಿದ್ದಾರೆ.
'ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ' ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

'ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ. ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ' ಎಂದು ವಾಗ್ದಾಳಿ ನಡೆಸಿದ್ದಾರೆ.
ರೈತರ ಸುಲಿಗೆ ಖಂಡಿಸಿದ ಆರ್.ಅಶೋಕ್
ಕಟಾವು ಯಂತ್ರಗಳ ಮಾಲೀಕರು ಬಾಡಿಗೆ ಹೆಸರಿನಲ್ಲಿ ರೈತರಿಂದ ಸುಲಿಗೆ ಮಾಡುತ್ತಿರುವುದನ್ನು ವಿಪಕ್ಷ ನಾಯಕ ಆರ್.ಅಶೋಕ್ ಖಂಡಿಸಿದ್ದಾರೆ. 'ಅಕಾಲಿಕ ಮಳೆಯಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿ ಭತ್ತ ಮತ್ತು ರಾಗಿ ಬೆಳೆ ನೆಲಕಚ್ಚಿ ಈಗಾಗಲೇ ಹೈರಾಣಾಗಿರುವ ರೈತರಿಗೆ, ಕಟಾವು ಯಂತ್ರ ಬಾಡಿಗೆ ಹೆಸರಿನಲ್ಲಿ ನಡೆಯುತ್ತಿರುವ ಸುಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ಅವರೇ, ಸ್ವಾಭಿಮಾನಿ ಸಮಾವೇಶ, ಜನಕಲ್ಯಾಣ ಸಮಾವೇಶದ ಸಂಭ್ರಮದಲ್ಲಿ ತಾವು ರಾಜ್ಯದ ಕೃಷಿ ಸಚಿವರು ಅನ್ನೋದನ್ನೇ ಮರೆತಿರುವಂತಿದೆ. ಕಟಾವು ಯಂತ್ರಗಳಿಗೆ ಜಿಲ್ಲಾಡಳಿತಗಳು ನಿಗದಿ ಪಡಿಸಿರುವ ದರವನ್ನ ಮೀರಿ ಹೆಚ್ಚು ದರ ವಸೂಲಿ ಮಾಡುವ ಮೂಲಕ ರೈತರನ್ನು ಸುಲಿಗೆ ಮಾಡಲಾಗುತ್ತಿದೆ.
ನಿರರ್ಥಕ ಸಮಾವೇಶಗಳಲ್ಲಿ ತಮ್ಮ ಸಮಯ ವ್ಯರ್ಥ ಮಾಡುವ ಬದಲು ರೈತರಿಗೆ ಉಪಯೋಗ ಆಗುವ ಕೆಲಸ ಮಾಡಿ ಪುಣ್ಯ ಕಟ್ಟಿಕೊಳ್ಳಿ. ಕಟಾವು ಯಂತ್ರಗಳು ಕೈಗೆಟಕುವ ದರದಲ್ಲಿ ರೈತರಿಗೆ ಸಿಗುವಂತೆ ಯಾವುದಾದರೂ ಪರಿಹಾರ ಕಂಡುಕೊಳ್ಳುವ ಮಾರ್ಗ ಹುಡುಕಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ' ಎಂದು ಒತ್ತಾಯಿಸಿದ್ದಾರೆ.












Click it and Unblock the Notifications