ಎಸ್.ಎಂ.ಕೃಷ್ಣ ಭೇಟಿಯಾದ ಆರ್.ಅಶೋಕ : ಪ್ರಚಾರ ನಡೆಸಲು ಕೃಷ್ಣ ಒಪ್ಪಿಗೆ
Recommended Video

ಬೆಂಗಳೂರು, ಮಾರ್ಚ್ 11 : ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಲೋಕಸಭಾ ಚುನಾವಣೆಗೆ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ.
ಸೋಮವಾರ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದರು. ಚುನಾವಣಾ ಸಿದ್ಧತೆಗಳ ಕುರಿತು ಮಾತುಕತೆ ನಡೆಸಿದ ಅವರು ಪ್ರಚಾರಕ್ಕೆ ಆಗಮಿಸುವಂತೆ ಮನವಿ ಮಾಡಿದರು.
ಆರ್.ಅಶೋಕ ಭೇಟಿ ಬಳಿಕ ಮಾತನಾಡಿದ ಎಸ್.ಎಂ.ಕೃಷ್ಣ ಅವರು, 'ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರು ಅಭಿವೃದ್ಧಿ ಮಾಡಿದ್ದನ್ನು ಜನರು ಇನ್ನೂ ಮರೆತಿಲ್ಲ. ಲೋಕಸಭಾ ಚುನಾವಣೆಯಲ್ಲಿ ನಾನು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇನೆ' ಎಂದು ಹೇಳಿದರು.
ಒಕ್ಕಲಿಗರ ಪ್ರಾಬಲ್ಯವಿರುವ ಬೆಂಗಳೂರು ನಗರ, ತುಮಕೂರು, ಮಂಡ್ಯ, ಮೈಸೂರಿನಲ್ಲಿ ಎಸ್.ಎಂ.ಕೃಷ್ಣ ಅವರು ಪ್ರಚಾರ ನಡೆಸುವ ಸಾಧ್ಯತೆ ಇದೆ. ಯಾವ-ಯಾವ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂಬುದನ್ನು ಬಿಜೆಪಿ ನಾಯಕರು ತೀರ್ಮಾನಿಸಲಿದ್ದಾರೆ.

ಬಿಜೆಪಿಗೆ ಭದ್ರ ನೆಲೆ ಇದೆ
ಆರ್.ಅಶೋಕ ಭೇಟಿ ಬಳಿಕ ಮಾತನಾಡಿದ ಎಸ್.ಎಂ.ಕೃಷ್ಣ ಅವರು, 'ಬೆಂಗಳೂರು ನಗರದಲ್ಲಿ ಬಿಜೆಪಿಗೆ ಭದ್ರ ನೆಲೆ ಇದೆ. ನಾನು ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇನೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು' ಎಂದು ಹೇಳಿದರು.

ಇಲ್ಲಿ ವ್ಯಕ್ತಿ ಮುಖ್ಯವಲ್ಲ
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪರ್ಧಿಸುವ ಕುರಿತು ಪ್ರತಿಕ್ರಿಯೆ ನೀಡಿದ ಎಸ್.ಎಂ.ಕೃಷ್ಣ ಅವರು, 'ಇಲ್ಲಿ ವ್ಯಕ್ತಿ ಮುಖ್ಯವಲ್ಲಿ ಸಿದ್ದಾಂತ ಮುಖ್ಯವಾಗಿದೆ. ನಾವು ಸಿದ್ಧಾಂತ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ' ಎಂದರು.

ಹೆಚ್ಚು ಅಭ್ಯರ್ಥಿಗಳು ಗೆಲ್ಲಬೇಕು
'ರಾಜ್ಯದಲ್ಲಿ ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ಆದ್ದರಿಂದ, ರಾಜ್ಯಾದ್ಯಂತ ಪ್ರಚಾರ ನಡೆಸುತ್ತೇನೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರು ಅಭಿವೃದ್ಧಿ ಮಾಡಿದ್ದನ್ನು ಜನರು ಮರೆತಿಲ್ಲ. ಬೆಂಗಳೂರು ನಗರದ 3 ಕ್ಷೇತ್ರಗಳಲ್ಲಿ ಬಿಜೆಪಿಗೆ ಭದ್ರ ನೆಲೆ ಇದೆ' ಎಂದು ಎಸ್.ಎಂ.ಕೃಷ್ಣ ಹೇಳಿದರು.

ಎಸ್.ಎಂ.ಕೃಷ್ಣ ಸ್ಪರ್ಧೆ?
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಎಸ್.ಎಂ.ಕೃಷ್ಣ ಅವರು ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಕೆಲವು ದಿನಗಳ ಹಿಂದೆ ಹಬ್ಬಿತ್ತು. ಎಚ್.ಡಿ.ದೇವೇಗೌಡ ಮತ್ತು ಎಸ್.ಎಂ.ಕೃಷ್ಣ ನಡುವಿನ ಹೋರಾಟಕ್ಕೆ ಬೆಂಗಳೂರು ಉತ್ತರ ಸಾಕ್ಷಿಯಾಗಲಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಎಸ್.ಎಂ.ಕೃಷ್ಣ ಅವರು, 'ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಸ್ಪಷ್ಟಪಡಿಸಿದರು.












Click it and Unblock the Notifications