ಸರ್ಕಾರ: 'ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ': ಆರ್ ಅಶೋಕ್ ಹೀಗಂದಿದ್ದೇಕೆ?
ಬೆಂಗಳೂರು, ಜನವರಿ 11: ಲೋಕಸಭಾ ಚುನಾವಣೆ ಎದುರಿಸಲು ನಾನಾ ತಂತ್ರಗಾರಿಕೆ ಹೆಣೆಯುತ್ತಿರುವ ಕರ್ನಾಟಕ ಕಾಂಗ್ರೆಸ್ ತನ್ನ ಯೋಜನೆಗಳ ಮೂಲಕವೇ ಚುನಾವಣೆಗೆ ಧುಮಕಲು ಸಿದ್ಧತೆ ನಡೆಸಿದೆ. ಹೀಗಾಗಿ ಕೆಲವು ಯೋಜನೆ ರೂಪಿಸಿರುವ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ ಕುರಿತು ಬಿಜೆಪಿ ಆರ್. ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ.
ಸರ್ಕಾರದ ವಿರುದ್ಧ ಗುರುವಾರ ಟ್ವೀಟ್ ಮಾಡಿರುವ ಅವರು, ''ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವವನೊಬ್ಬ" ಎಂಬ ಗಾದೆ ಮಾತಿನಂತೆ ಈಗಾಗಲೇ ಅವೈಜ್ಞಾನಿಕ ಗ್ಯಾರೆಂಟಿಗಳ ಭಾರವನ್ನ ಹೊರಲಾಗದೆ ಸರ್ಕಾರಕ್ಕೆ ಬೆನ್ನು ಮೂಳೆ ಮುರಿದಂತಾಗಿಗದೆ ಎಂದು ಲೇವಡಿ ಮಾಡಿದ್ದಾರೆ.

ಗ್ಯಾರೆಂಟಿ ಭಾರದಿಂದ ಬೆನ್ನು ಮೂಳೆ ಮುರಿದಿರುವ ಸರ್ಕಾರಕ್ಕೆ, ಗ್ಯಾರೆಂಟಿ ಜಾರಿ ಸಮತಿ ಎಂಬ ಮತ್ತೊಂದು ಹೊರೆ ಹೊರಿಸಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರವನ್ನು ಅವರು ಟೀಕಿಸಿದ್ದಾರೆ.
ಸರ್ಕಾರಕ್ಕೆ 16 ಕೋಟಿ ರೂ. ಹೊರೆ
ಗ್ಯಾರೆಂಟಿ ಜಾರಿಗೆ ಮುಖ್ಯಮಂತ್ರಿ ಆದಿಯಾಗಿ, 34 ಕ್ಯಾಬಿನೆಟ್ ಸಚಿವರು, ಆರ್ಥಿಕ,ರಾಜಕೀಯ, ಮಾಧ್ಯಮ ಸಲಹೆಗಾರರು, ಜಿಲ್ಲಾಡಳಿತಗಳು ಸೇರಿದಂತೆ ಇಡೀ ಆಡಳಿತ ಯಂತ್ರವೇ ಇರುವಾಗ ಪ್ರತ್ಯೇಕ ಸಮಿತಿಯ ಅಗತ್ಯ ಏನಿದೆ?. ಸಂಪುಟ ದರ್ಜೆ ಸ್ಥಾನಮಾನದ ಅಧ್ಯಕ್ಷರು, ರಾಜ್ಯ ಸಚಿವ ಸ್ಥಾನಮಾನದ ಐವರು ಉಪಾಧ್ಯಕ್ಷರು ಸೇರಿದಂತೆ 31 ಸದಸ್ಯರ ಸಮಿತಿಯ ಸಂಬಳ ಸಾರಿಗೆ ಖರ್ಚಿನಿಂದ ರಾಜ್ಯ ಸರ್ಕಾರಕ್ಕೆ 16 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಅವರು ವಿವರಿಸಿದರು.

ತಮ್ಮ ಪಕ್ಷದ ಅತೃಪ್ತ ಶಾಸಕರನ್ನ, ಪ್ರಮುಖ ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕೆಲಸಕ್ಕೆ ಬಳಸಿಕೊಳ್ಳಲು ರಾಜ್ಯದ ಸಾರ್ವಜನಿಕ ಹಣ ಏಕೆ ದುರ್ಬಳಕೆ ಮಾಡುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಭೋಕ್ಕಸ ಬರಿದು ಮಾಡಡಬೇಡಿ: ಆರ್.ಅಶೋಕ್
ಗ್ಯಾರೆಂಟಿ ಜಾರಿಯೇ ಹೊರೆಯಾಗಿ ಅಭಿವೃದ್ಧಿಗೆ ಹಣ ಇಲ್ಲದಿರುವಾಗ ಕಂಡ ಕಂಡವರಿಗೆ ಗೂಟದ ಕಾರು ಕೊಡಲು ರಾಜ್ಯದ ಖಜಾನೆ ಏನು ಕಾಂಗ್ರೆಸ್ ಪಕ್ಷದ ಆಸ್ತಿ ಎಂದುಕೊಂಡಿದ್ದೀರಾ?. ಸಚಿವರು, ಆಡಳಿತ ಯಂತ್ರದ ಮೂಲಕ ಗ್ಯಾರೆಂಟಿ ಜಾರಿ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಸುಮ್ಮನೆ ರಾಜ್ಯದ ಬೊಕ್ಕಸವನ್ನ ಪೋಲು ಮಾಡಬೇಡಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೂಲಕವೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಲು ಸಿದ್ಧತೆ ನಡೆಸಿದ್ದಾರೆ. ಚುನಾವಣೆ ಸಿದ್ಧತೆ ಭಾಗವಾಗಿ ಜಾರಿ ಮಾಡಿರುವ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠನ ಮೇಲ್ವಿಚಾರಣೆಗೆ ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯ, ಜಿಲ್ಲಾವಾರು, ಕ್ಷೇತ್ರ ಮಟ್ಟದಲ್ಲಿ ಸಮಿತಿ ರಚಿಸಿ, ಜನರಿಗೆ ಯೋಜನೆ ಮಾಹಿತಿ ತಿಳಿಸಲಿದೆ. ಇದೀಗ ಈ ವಿಚಾರಕ್ಕೆ ಬಿಜೆಪಿಯು ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ, ನಿಮ್ಮ ಈ ನಿರ್ಧಾರಗಳಿಂದ ರಾಜ್ಯದ ಭೊಕ್ಕಸ ಬರಿದಾಗಿದೆ ಎಂದು ದೂರಿದೆ.












Click it and Unblock the Notifications