ರಾಮನ ಭಂಟನ ಅವತಾರ ತಾಳುತ್ತೇವೆ; ಠಾಕ್ರೆಗೆ ಅಶೋಕ್ ಎಚ್ಚರಿಕೆ
ಬೆಂಗಳೂರು, ಜನವರಿ 18: ಬೆಳಗಾವಿ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಕಂದಾಯ ಸಚಿವ ಆರ್ ಅಶೋಕ್, "ಮಹಾರಾಷ್ಟ್ರ ಸಿಎಂ ಠಾಕ್ರೆ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಮಹಾರಾಷ್ಟ್ರ ಸರ್ಕಾರ ಜನರಿಂದ ಆಯ್ಕೆ ಆಗಿಲ್ಲ. ಠಾಕ್ರೆಗೆ ಅಲ್ಲಿ ಜನ ಬೆಂಬಲ ಇಲ್ಲ. ಜನ ಬೆಂಬಲವನ್ನು ಯಾವಾಗ ಕಳೆದುಕೊಳ್ಳುತ್ತಾರೋ ಆಗ ಈ ರೀತಿ ಸ್ಥಿಮಿತ ಕಳೆದುಕೊಂಡಂತೆ ಮಾತನಾಡುತ್ತಾರೆ" ಎಂದು ತಿರುಗೇಟು ನೀಡಿದ್ದಾರೆ.
ಅಂದು ಎಂಇಎಸ್ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ್ ಠಾಕ್ರೆ ಬಾಲ ಬಿಚ್ಚುತ್ತಿರಲಿಲ್ಲ
"ಪಾಕಿಸ್ತಾನದಲ್ಲಿ ಆಗುವುದು ಕೂಡ ಹೀಗೆಯೇ. ಅಲ್ಲಿ ಅತಂತ್ರ ಪರಿಸ್ಥಿತಿ ಉಂಟಾದಾಗ ಭಾರತದ ಬಗ್ಗೆ ಈ ರೀತಿ ಹೇಳಿಕೆ ಕೊಡುತ್ತಾರೆ. ಅದೇ ರೀತಿ ಠಾಕ್ರೆ ಕೂಡ ಕುಚೇಷ್ಟೆ ಮಾಡಿದ್ದಾರೆ. ನಮ್ಮ ತಂಟೆಗೆ ಬಂದರೆ ರಾಮನ ಭಂಟನ ಅವತಾರ ತಾಳಬೇಕಾಗುತ್ತದೆ" ಎಂದು ಎಚ್ಚರಿಕೆಯನ್ನೂ ಅಶೋಕ್ ನೀಡಿದ್ದಾರೆ.
Recommended Video
ಜನವರಿ 17ರ ಭಾನುವಾರ ಟ್ವೀಟ್ ಮಾಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಮರಾಠಾ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿ ಹಾಗೂ ಇತರ ಪ್ರದೇಶಗಳು ಮತ್ತೆ ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕು. ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕರ್ನಾಟಕಕ್ಕೆ ಸೇರ್ಪಡೆಯಾಗಿರುವ ಪ್ರದೇಶಗಳನ್ನು ಮರಳಿ ಪಡೆಯುವುದೇ ಮರಾಠಾ ಹುತಾತ್ಮರಿಗೆ ನಾವು ಸಲ್ಲಿಸುವ ಗೌರವ. ಈ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಈ ಪ್ರದೇಶಗಳನ್ನು ಕರ್ನಾಟಕ ಆಕ್ರಮಿತ ಪ್ರದೇಶವೆಂದು ಘೋಷಿಸುತ್ತೇವೆ ಎಂದು ಟ್ವೀಟ್ ಮಾಡಿದ್ದರು.
ಈ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕರ್ನಾಟಕ ಸಿಎಂ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂತಾದ ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.