ಭೂಮಿ ಅರಿಶಿನ-ಕುಂಕುಮದಿಂದ ಬಂದಿಲ್ಲ: ನಾನೂ ರಾಜೀನಾಮೆ ಕೊಡಲು ರೆಡಿ, ಸಿಎಂ ರೆಡಿನಾ: ಆರ್.ಅಶೋಕ್ ಸವಾಲು
ಬೆಂಗಳೂರು, ಅಕ್ಟೋಬರ್ 03: ನನ್ನ ಪ್ರಕರಣಕ್ಕೂ ಸಿಎಂ ಸಿದ್ದರಾಮಯ್ಯನವರ ಮುಡಾ ಹಗರಣಕ್ಕೂ ಹೋಲಿಕೆ ಬೇಡ. ಇದು ನಾನು ಹಣ ಕೊಟ್ಟು ಖರೀದಿಸಿದ ಭೂಮಿ, ಅರಿಶಿನ-ಕುಂಕುಮದಿಂದ ಬಂದಿಲ್ಲ. ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್ನ ಸಚಿವರು ಪ್ರಶ್ನೆ ಎತ್ತಿದ್ದಾರೆ. ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್ ಕೋರ್ಟ್ಗಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ಕೊಡಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಗುಡುಗಿದ್ದಾರೆ.
ಗುರುವಾರ ಕಾಂಗ್ರೆಸ್ ಸಚಿವರು ಮಾಡಿದ ಭೂ ಕಬಳಿಕೆದಾರ ಮೇಲಿನ ಆರೋಪ ಕುರಿತು ಆರ್.ಅಶೋಕ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು. ಕಾಂಗ್ರೆಸ್ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ.

ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್ನ ಕೇಂದ್ರ ಸರ್ಕಾರವೇ ನೇಮಿಸಿದ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಇದ್ದರು. ಅವರೆಲ್ಲರಿಂದಲೇ ನಾನು ತಪ್ಪಿತಸ್ಥನಲ್ಲ ಎಂಬ ಅಭಿಪ್ರಾಯ ಬಂದಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರ ಮೇಲಿನ ಮುಡಾ ಪ್ರಕರಣದಲ್ಲಿ ಹಾಗೆ ಆಗಿಲ್ಲ ಎಂದು ವಿವರಿಸಿದರು.
ಸಿಎಂ ಸಿದ್ದರಾಮಯ್ಯ ಆರೋಪ ಮುಕ್ತವಾಗಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣ ತನಿಖೆಗೆ ಒಳಪಡಿಸಬೇಕಾದ ಪ್ರಕರಣ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪು ಬಂದ ಬಳಿಕ ಮುಖ್ಯಮಂತ್ರಿಯವರು ಭಯಗೊಂಡು ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಆದರ ನಾನು ಕೋರ್ಟ್ ಆದೇಶ ಬರುವ ಮುನ್ನವೇ ನಿವೇಶನ ಹಿಂದಿರುಗಿಸಿದ್ದೆ.
ಕೋರ್ಟ್ನಲ್ಲಿ ನಾನು ಆಪಾದಿತ ಎಂದು ಹೇಳಿರಲಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕೂಡ ನನ್ನನ್ನು ಆರೋಪ ಮುಕ್ತ ಮಾಡಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಇನ್ನೂ ಆರೋಪ ಮುಕ್ತವಾಗಿಲ್ಲ. ಈ ದೇಶದಲ್ಲಿ ಕೋರ್ಟ್ ದೊಡ್ಡದೋ, ಕಾಂಗ್ರೆಸ್ ದೊಡ್ಡದೋ ಎಂದು ಪ್ರಶ್ನೆ ಮಾಡಿದರು.

ರಾಜೀನಾಮೆಗೆ ನಾನು ರೆಡಿ ಸಿಎಂ ರೆಡಿ ಇದ್ದಾರಾ?
ನಾನು ರಾಜೀನಾಮೆ ನೀಡಲು ಸಿದ್ಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಡೀ ಸಚಿವ ಸಂಪುಟ ರಾಜೀನಾಮೆ ನೀಡುತ್ತದೆಯೇ? ಎಂದು ಅವರು ಸವಾಲು ಹಾಕಿದರು. ಮುಂದಿನ 24 ಗಂಟೆಯಲ್ಲಿ ನೈತಿಕತೆಯ ಆಧಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಸಚಿವ ಸಂಪುಟದ ಎಲ್ಲ ಸಚಿವರು ಮುಖ್ಯಮಂತ್ರಿಗಾಗಿ ಪ್ರಾಣಕ್ಕೆ ಪ್ರಾಣ ಕೊಡುತ್ತೇವೆ, ಬಂಡೆಯಂತೆ ನಿಂತಿದ್ದೇವೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯರನ್ನು ಬೆಂಬಲಿಸುವ ಸಚಿವರು ಎಲ್ಲರು ಅವರಿಗಾಗಿ ರಾಜೀನಾಮೆ ಕೊಡುವ ಅವಕಾಶವಿದೆ. ಮೊದಲು ಈ ನಾಲ್ಕು ಸಚಿವರು ಸಿದ್ದರಾಮಯ್ಯನವರಿಗಾಗಿ ರಾಜೀನಾಮೆ ನೀಡಲಿ. ಈ ಮೂಲಕ ಅವರ ಎದೆಯಲ್ಲಿ ಸಿದ್ದರಾಮಯ್ಯ ಇದ್ದಾರೆಯೇ? ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಇದ್ದಾರೆಯೇ ಎಂದು ಗೊತ್ತಾಗಲಿ ಎಂದು ಅವರು ಸವಾಲು ಹಾಕಿದರು.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬಗ್ಗೆ ಚರ್ಚೆ ಶುರುವಾಗಿದೆ. ಇದರ ಬೆನ್ನಲ್ಲೆ ಎಚ್ಡಿ ಕುಮಾರಸ್ವಾಮಿ ಅವರು ನಾನೂ ರಾಜೀನಾಮೆ ಕೊಟ್ಟರು ಅಡ್ಡಿಯಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಕೋರ್ಟ್ಗಿಂತ ಕಾಂಗ್ರೆಸ್ ದೊಡ್ಡದಲ್ಲ
ಕಾಂಗ್ರೆಸ್ ಪಕ್ಷ ಕೋರ್ಟ್ಗಿಂತ ದೊಡ್ಡದೇನಲ್ಲ. ಕಂದಾಯ ಸಚಿವರಾದ ಕೃಷ್ಣ ಭೈರೇಗೌಡರ ಕೋಲಾರದ ಆಸ್ತಿಗಳೆಲ್ಲವೂ ಕುಟುಂಬದಿಂದ ಅವರಿಗೆ ಬಂದಿದೆ. ಅದೇ ರೀತಿ ಮುನಿವೆಂಕಟಪ್ಪ ಅವರು ವಿಲ್ ತಯಾರಿಸಿ ಅವರ ಮಕ್ಕಳಿಗೆ ಆಸ್ತಿ ಕೊಟ್ಟಿದ್ದಾರೆ. ಆ ಕುಟುಂಬದಲ್ಲಿ ಸುಮಾರು 20 ಜನರಿದ್ದು, ನನ್ನ ಹೆಸರಿಗೆ ನೋಂದಣಿ ಮಾಡಿಕೊಂಡಾಗ ಕುಟುಂಬದ ಎಲ್ಲರು ಸಹಿ ಹಾಕಿದ್ದಾರೆ. ಇದೇಗೆ ಭೂಮಿ ಬೇನಾಮಿಯಾಗುತ್ತದೆ? ಎಂದು ತೀಕ್ಷ್ಣವಾಗಿ ಅವರು ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.
ನನ್ನು ಪ್ರಕರಣದಲ್ಲಿ ಎಲ್ಲವೂ ಕಾನೂನು ಪ್ರಕಾರವೇ ನಡೆದಿದೆ. ನನ್ನ ವಿರುದ್ಧ ತನಿಖೆ ನಡೆಸಲು ಅನುಮತಿ ಕೊಡುವಂತೆ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರಧ್ವಾಜ್ ಅವರನ್ನು ಕೋರಲಾಗಿತ್ತು. ಆದರೆ ರಾಜ್ಯಪಾಲರು ಕೂಡ ನನ್ನ ವಿರುದ್ಧ ತನಿಖೆಗೆ ಅವಕಾಶ ನೀಡಲಿಲ್ಲ. ಹೀಗಿದ್ದರೂ ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಹೇಳಿದರು.












Click it and Unblock the Notifications