ಮಹಿಳೆಯರು, ಮಕ್ಕಳಿಗೆ ಮೊದಲು ಜೀವದ ಗ್ಯಾರಂಟಿ ಕೊಡಿ
ಬಳ್ಳಾರಿಯಲ್ಲಿ ಕಳಪೆ ಔಷಧಿಯಿಂದ ಮತ್ತೊಬ್ಬ ಬಾಣಂತಿ, ಮಗುವಿನ ಸಾವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರದಿಂದ ಯಾವ ಪ್ರಯೋಜನವೂ ಆಗಿಲ್ಲ. ಇಷ್ಟಾದರೂ ತಾವಾಗಲಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗಲಿ ಬಳ್ಳಾರಿಗೆ ಭೇಟಿ ನೀಡಿಲ್ಲ. ನಿಮ್ಮನ್ನ ಕೊಲೆಗಡುಕ ಸರ್ಕಾರ ಅನ್ನದೆ ಇನ್ನೇನು ಅನ್ನಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಲೆಗಡುಕ ಕಾಂಗ್ರೆಸ್ ಸರ್ಕಾರದಿಂದ ಬಳ್ಳಾರಿಯಲ್ಲಿ ಮತ್ತೊಬ್ಬ ಬಾಣಂತಿ ಮಹಿಳೆ ಮಗು ಸಾವಾಗಿದೆ. ಸ್ವಾಮಿ ಸಿಎಂ ಸಿದ್ದರಾಮಯ್ಯ ಅವರೇ ನಿಮಗೆ ಮಾನವೀಯತೆ ಇದೆಯಾ? ನಿಮಗೆ ಮನುಷ್ಯತ್ವ ಇದೆಯಾ? ಎಂದು ಪ್ರಶ್ನೆ ಮಾಡಿದ್ದಾರೆ. ಬಡ ಕುಟುಂಬದ ಮಹಿಳೆಯರಿಗೆ, ಮಕ್ಕಳಿಗೆ ಮೊದಲು ಜೀವದ ಗ್ಯಾರಂಟಿ ಕೊಡಿ. ಬದುಕುವ ಭಾಗ್ಯ ಕೊಡಿ ಎಂದು ವ್ಯಂಗ್ಯವಾಡಿದ್ದಾರೆ.

ತಾವು ಬಳ್ಳಾರಿಗೆ ಭೇಟಿ ಕೊಡಲು ಇನ್ನೆಷ್ಟು ಮಹಿಳೆಯರು, ಹಸುಗೂಸುಗಳ ಹೆಣ ಬೀಳಬೇಕು? ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಕಿಡಿಕಾರಿದ್ದಾರೆ. 8 ತಿಂಗಳಲ್ಲಿ 28 ಬಾಣಂತಿ ಮಹಿಳೆಯರ ಸಾವಾಗಿದೆ. ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರ ಕಗ್ಗೊಲೆಯಾಗುತ್ತಿದೆ. ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ ಗರ್ಭಿಣಿ ಹಾಗು ಬಾಣಂತಿ ಮಹಿಳೆಯರ ಸಾವಾಗುತ್ತಿರುವುದಕ್ಕೆ ಕರ್ನಾಟಕ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರ ಮಹಿಳೆಯರ ಕಗ್ಗೊಲೆ ಮಾಡಿದೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯನವರೇ, ತಮ್ಮ ಕುರ್ಚಿ ಉಳಿಸಿಕೊಳ್ಳಲು ಸ್ವಾಭಿಮಾನಿ ಸಮಾವೇಶ, ಸಂಪುಟ ಪುನಾರಚನೆ ಎಂದು ರಾಜಕೀಯದಾಳ ಎಸೆಯುವಲ್ಲಿ ತಾವು ತೋರುತ್ತಿರುವ ಆಸಕ್ತಿಯಲ್ಲಿ ಸ್ವಲ್ಪವಾದರೂ ಆಡಳಿತದಲ್ಲಿ ತೋರಿಸಿ. ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ಕುಟುಂಬದ ಮಹಿಳೆಯರಿಗೆ ಜೀವಂತವಾಗಿ ಮನೆಗೆ ಹೋಗುವ ಗ್ಯಾರೆಂಟಿ ಕೊಡಿ. ತಾಯಿ-ಮಗೂ ಸುರಕ್ಷಿತವಾಗಿ ಮನೆ ಸೇರುವ ಗ್ಯಾರೆಂಟಿ ಕೊಡಿ ಎಂದು ಆಶೋಕ್ ಕೇಳಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನ ಕೂಡಲೇ ಸಂಪುಟದಿಂದ ವಜಾ ಮಾಡಬೇಕು. ಬಾಣಂತಿ ಮಹಿಳೆಯರ ಸರಣಿ ಸಾವಿನ ಬಗ್ಗೆ ತಜ್ಞ ವೈದ್ಯರ ತನಿಖಾ ತಂಡ ನೀಡಿರುವ ವರದಿಯನ್ನು ಬಹಿರಂಗಪಡಿಸಿ, ಈ ಪ್ರಕರಣವನ್ನ ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
ಅಧಿಕಾರಿ ಸಸ್ಪೆಂಡ್ ಮಾಡಿದ ಸರ್ಕಾರ!
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದಿದ್ದರು.
ಬಾಣಂತಿಯರ ಸಾವಿನ ಕುರಿತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ. ಬಾಣಂತಿಯರಿಗೆ ನೀಡಲಾಗಿರುವ ರಿಂಗರ್ ಲ್ಯಾಕ್ಟೇಟ್ ದ್ರಾವಣದ ಎಲ್ಲ ಬ್ಯಾಚ್ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದರು.












Click it and Unblock the Notifications