ಆರ್.ಶಂಕರ್ ಬೇಡಿಕೆ ತಿರಸ್ಕರಿಸಿದ ಸ್ಪೀಕರ್ ರಮೇಶ್ ಕುಮಾರ್!
ಬೆಂಗಳೂರು, ಜುಲೈ 17 : ರಾಣೆಬೆನ್ನೂರು ಕ್ಷೇತ್ರದ ಶಾಸಕ ಆರ್.ಶಂಕರ್ ಮಾಡಿದ್ದ ಮನವಿಯನ್ನು ಸ್ಪೀಕರ್ ರಮೇಶ್ ಕುಮಾರ್ ತಿರಸ್ಕರಿಸಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಂಕರ್ ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿದ್ದಾರೆ.
ವಿಧಾನಸಭೆಯಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಬೇಕು ಎಂದು ಆರ್. ಶಂಕರ್ ಸ್ಪೀಕರ್ಗೆ ಪತ್ರ ಬರೆದಿದ್ದರು. ಬುಧವಾರ ಪತ್ರಕ್ಕೆ ಉತ್ತರ ನೀಡಿರುವ ರಮೇಶ್ ಕುಮಾರ್ ಬೇಡಿಕೆಯನ್ನು ತಳ್ಳಿಹಾಕಿದರು.
ಸಚಿವ ಸ್ಥಾನಕ್ಕೆ ಆರ್.ಶಂಕರ್ ರಾಜೀನಾಮೆ, ಬಿಜೆಪಿಗೆ ಸೇರ್ತಾರಾ?
ಕರ್ನಾಟಕ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದಿದ್ದೇನೆ. ಆದ್ದರಿಂದ, ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಬೇಕು, ಆಸನ ವ್ಯವಸ್ಥೆ ಮಾಡಬೇಕು ಎಂದು ಶಂಕರ್ ಸ್ಪೀಕರ್ಗೆ ಪತ್ರವನ್ನು ಬರೆದಿದ್ದರು.
ಕೆಪಿಜೆಪಿ ಕಾಂಗ್ರೆಸ್ನಲ್ಲಿ ವಿಲೀನ, ಪುನಃ ಸಂಪುಟ ಸೇರಿದ ಆರ್.ಶಂಕರ್
2018ರ ಚುನಾವಣೆಯಲ್ಲಿ ಆರ್. ಶಂಕರ್ ಕೆಪಿಜೆಪಿ ಅಭ್ಯರ್ಥಿಯಾಗಿ ರಾಣೆಬೆನ್ನೂರು ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಪಕ್ಷವನ್ನು ಕಾಂಗ್ರೆಸ್ನಲ್ಲಿ ವಿಲೀನಗೊಳಿಸಿದ್ದ ಅವರು, ಎಚ್. ಡಿ. ಕುಮಾರಸ್ವಾಮಿ ಸಂಪುಟ ಸೇರಿದ್ದರು.
ರಾಣೆಬೆನ್ನೂರು ಶಾಸಕ ಆರ್.ಶಂಕರ್ ವಿರುದ್ಧ ಸ್ಫೀಕರ್ಗೆ ದೂರು
ಜುಲೈ 8ರಂದು ರಾಜೀನಾಮೆ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಪೌರಾಡಳಿತ ಸಚಿವರಾಗಿದ್ದ ರಾಣೆಬೆನ್ನೂರು ಶಾಸಕ ಆರ್.ಶಂಕರ್ ಜುಲೈ 8ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕರ್ನಾಟಕ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿರುವುದಾಗಿ ರಾಜ್ಯಪಾಲರಿಗೆ ಪತ್ರವನ್ನು ನೀಡಿ ಮುಂಬೈಗೆ ಹಾರಿದ್ದರು. ಮುಂಬೈನ ಹೋಟೆಲ್ನಲ್ಲಿ ಇತರ ಅತೃಪ್ತ ಶಾಸಕರ ಜೊತೆ ಅವರು ವಾಸ್ತವ್ಯ ಹೂಡಿದ್ದಾರೆ.
ಪ್ರತ್ಯೇಕ ಆಸನ ವ್ಯವಸ್ಥೆ ಮಾಡಿ
ಕರ್ನಾಟಕ ಸರ್ಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆದ ಹಿನ್ನಲೆಯಲ್ಲಿ ತಮಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಬೇಕು. ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಬೇಕು ಎಂದು ಸ್ಪೀಕರ್ ಕೆ. ಆರ್. ರಮೇಶ್ ಕುಮಾರ್ಗೆ ಪತ್ರ ಬರೆದಿದ್ದರು.
ಹಲವು ಬಾರಿ ಪಕ್ಷ ನಿಷ್ಠೆ ಬದಲು
ರಾಣೆಬೆನ್ನೂರು ಶಾಸಕ ಆರ್. ಶಂಕರ್ ಹಲವು ಬಾರಿ ಪಕ್ಷ ನಿಷ್ಠೆಯನ್ನು ಬದಲಾವಣೆ ಮಾಡಿದ್ದಾರೆ. 2018ರ ಚುನಾವಣೆ ಫಲಿತಾಂಶ ಬಂದಾಗ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ ಅವರು ಬಳಿಕ ಸರ್ಕಾರ ರಚನೆಗೆ ಬೆಂಬಲ ಕೊಟ್ಟು ಕುಮಾರಸ್ವಾಮಿ ಸಂಪುಟ ಸೇರಿದ್ದರು. ಸಚಿವ ಸ್ಥಾನ ಕಳೆದುಕೊಂಡ ಬಳಿಕ ಅತೃಪ್ತ ಶಾಸಕರ ಜೊತೆ ಗುರುತಿಸಿಕೊಂಡಿದ್ದರು. ಪುನಃ ಸರ್ಕಾರಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಸಂಪುಟ ಸೇರಿದ್ದರು.
ಕಾಂಗ್ರೆಸ್ ಜೊತೆ ವಿಲೀನ
2019ರ ಜೂನ್ 14ರಂದು ಕೆಪಿಜೆಪಿ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದ ಆರ್. ಶಂಕರ್ ಎಚ್. ಡಿ. ಕುಮಾರಸ್ವಾಮಿ ಸಂಪುಟ ಸೇರಿದ್ದರು. ಈಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತ ಶಾಸಕರ ಜೊತೆ ಗುರುತಿಸಿಕೊಂಡಿದ್ದು, ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದಾರೆ.