ರೇಸ್ ಕೋರ್ಸ್ ಜಂಕ್ಷನ್ ಮರು ಅಭಿವೃದ್ಧಿ; ಯೋಜನೆ ವಿವರಗಳು
ಬೆಂಗಳೂರು, ಮಾರ್ಚ್ 05: ಬೆಂಗಳೂರು ನಗರದ ರೇಸ್ಕೋರ್ಸ್ ವೃತ್ತದ ಜಂಕ್ಷನ್ ಅನ್ನು (ಟ್ರಿಲೈಟ್) ಮರು ಅಭಿವೃದ್ಧಿ ಮಾಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಬಿಬಿಎಂಪಿ ಮುಖ್ಯ ಇಂಜಿನಿಯರ್ ಎಂ. ಲೋಕೇಶ್ ಈ ಸಂಬಂಧ ಪ್ರಮಾಣಪತ್ರ ಸಲ್ಲಿಸಿದ್ದು, ಅದರಲ್ಲಿ ಇದರಿಂದ ವಾಹನ ಸಂಚಾರ ಸುಗಮವಾಗಿದೆ. ಜತೆಗೆ ಅಪಘಾತ ತಪ್ಪಿಸುವ ಉದ್ದೇಶದಿಂದ ಹಾಗೂ ಪಾದಚಾರಿಗಳ ಸುರಕ್ಷತೆ ಗಮನದಲ್ಲಿರಿಸಿಕೊಂಡು ಈ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಬಳ್ಳಾರಿ ರಸ್ತೆ ಅಗಲೀಕರಣ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮರ್ಪಣ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಪಾಲಿಕೆ ಈ ವಿಷಯ ತಿಳಿಸಿದೆ.
ಟ್ರಿಲೈಟ್ ಜಂಕ್ಷನ್ ಅಲ್ಲಿ ಶಿವಾನಂದ ಮೇಲ್ಸೇತುವೆ ಕಡೆಗೆ ಹೋಗುವ ರಸ್ತೆ ತೀವ್ರ ತಿರುವಿನಿಂದ (ಕರ್ವ್) ಕೂಡಿದ್ದು, ಅಪಘಾತಗಳು ಸಂಭಿಸುವ ಹಾಗೂ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ.
ಜಂಕ್ಷನ್ ಕೇಂದ್ರ ಭಾಗದಲ್ಲಿರುವ ಪ್ರತಿಮೆಗಳಿರುವ ತೆರವುಗೊಳಿಸಬೇಕು ಹಾಗೂ ಅಲ್ಲಿನ ಐಲ್ಯಾಂಡ್ ಅನ್ನು ಸರಿಪಡಿಸಬೇಕು ಎಂದು ತಿಳಿಸಿ 2023ರ ಜ.4ರಂದು ನಗರ ಸಂಚಾರ ಪೊಲೀಸ್ (ಪೂರ್ವ) ವಿಭಾಗದ ಉಪ ಪೊಲೀಸ್ ಆಯುಕ್ತರು ಬಿಬಿಎಂಪಿಗೆ ಪತ್ರ ಬರೆದಿದ್ದರು ಎಂದು ಹೇಳಿದ್ದಾರೆ.
ಕುದುರೆ ಪ್ರತಿಮೆಗಳ ತೆರವು: ಆ ಪತ್ರವನ್ನು ಪರಿಗಣಿಸಿ ಕುದುರೆ ಪ್ರತಿಮೆಗಳನ್ನು ತೆರವುಗೊಳಿಸಲಾಗಿದೆ. ಜಂಕ್ಷನ್ ಅನ್ನು ಮರು ವಿನ್ಯಾಸಗೊಳಿಸಲಾಗಿದ್ದು, ಇಂಡಿಯನ್ ರೋಡ್ ಕಾಂಗ್ರೆಸ್ (ಐಆರ್ಸಿ) ಮಾರ್ಗಸೂಚಿಗಳ ಅನ್ವಯ ಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.
ಅಲ್ಲದೆ, ಜಂಕ್ಷನ್ ಮರು ವಿನ್ಯಾಸದ ಬಳಿಕ ಖಾಲಿ ಪ್ರದೇಶವನ್ನು ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ ನವೀನ ಪರಿಕಲ್ಪನೆಯಲ್ಲಿ ಅಭವೃದ್ಧಿ ಪಡಿಸಲಾಗುತ್ತಿದೆ. ಜಂಕ್ಷನ್ ಅಲ್ಲಿ ಸಾರ್ವಜನಿಕ ಜಾಗ ಕಲ್ಪಿಸಲಾಗಿದೆ. ಪಾದಚಾರಿಗಳು ಸುರಕ್ಷತೆಯಿಂದ ಜಂಕ್ಷನ್ ದಾಟಲು ಅನುವು ಮಾಡಿಕೊಡಲಾಗಿದೆ. ಮರು ಅಭಿವೃದ್ಧಿಯಿಂದ ವಾಹನಗಳ ಸಂಚಾರ ಸುಗಮವಾಗಿದೆ. ಪಾದಚಾರಿಗಳು ಸರಕ್ಷಿತವಾಗಿ ರಸ್ತೆ ದಾಟುವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.
ಈ ಪ್ರಮಾಣ ಪತ್ರ ದಾಖಲಿಸಿಕೊಂಡ ಹೈಕೋರ್ಟ್, ಪಕ್ಷಗಾರರು ಪ್ರಕರಣ ಕುರಿತ ಮಾಹಿತಿಯನ್ನು ಪರಸ್ಪರ ವಿಮಯ ಮಾಡಿಕೊಳ್ಳುವಂತೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಮಾ.7ಕ್ಕೆ ಮುಂದೂಡಿತು.
ಹಿಂದಿನ ಆದೇಶವೇನು?: ಪ್ರಕರಣದ ಹಿಂದಿನ ವಿಚಾರಣೆ ವೇಳೆ ಅರ್ಜಿದಾರರು ಮಧ್ಯಂತರ ಅರ್ಜಿ ಸಲ್ಲಿಸಿ, ಟ್ರಿಲೈಟ್ ಜಂಕ್ಷನ್ ಅನ್ನು ಹೊಸದಾಗಿ ಅಭಿವೃದ್ಧಿ ಮಾಡುತ್ತಿರುವುದರಿಂದ ರಸ್ತೆಯ ಅಗಲ ಕಡಿಮೆಯಾಗಿದೆ. ಪಾದಚಾರಿಗಳು ಸುರಕ್ಷತೆಯಿಂದ ಓಡಾಡಲು ಆಗುತ್ತಿಲ್ಲ. ಸಂಚಾರ ದಟ್ಟಣೆ ಹೆಚ್ಚಾಗಿದೆ ಎಂದು ಆಕ್ಷೇಪಿಸಿದ್ದರು. ಅದನ್ನು ಪರಿಗಣಿಸಿದ್ದ ಹೈಕೋರ್ಟ್, ಅರ್ಜಿದಾರರ ಆಕ್ಷೇಪಣೆಗೆ ಉತ್ತರಿಸುವಂತೆ ಬಿಬಿಎಂಪಿಗೆ ನಿರ್ದೇಶಿಸಿತ್ತು.












Click it and Unblock the Notifications