ಫೆ.15,16ರಂದು ಕರ್ನಾಟಕದಲ್ಲಿ ರಾಹುಲ್ ಪ್ರವಾಸ
ಬೆಂಗಳೂರು, ಫೆ.9 : ಲೋಕಸಭಾ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಯೋಜಿಸಿರುವ ವಿಭಾಗ ಮಟ್ಟದ ಸಮಾವೇಶದಲ್ಲಿ ಭಾಗವಹಿಸಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಫೆ.15 ಹಾಗೂ 16ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ.
ರಾಹುಲ್ ಗಾಂಧಿ ಭೇಟಿಯ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೆಪಿಸಿಸಿಯು ನಾಲ್ಕು ವಿಭಾಗ ಮಟ್ಟದ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿದ್ದು, ಈ ಪೈಕಿ ಗುಲ್ಬರ್ಗ ಮೊದಲ ಸಮಾವೇಶ ಇತ್ತೀಚೆಗೆ ನಡೆದಿದೆ. ಈ ಸಮಾವೇಶದಲ್ಲಿ ಸೋನಿಯಾ ಗಾಂಧಿ ಭಾಗವಹಿಸಿದ್ದರು ಎಂದು ಹೇಳಿದ್ದಾರೆ.

ಉಳಿದಂತೆ ಬೆಂಗಳೂರು, ಬೆಳಗಾವಿ ಹಾಗೂ ಮೈಸೂರಿನಲ್ಲಿ ಮೂರು ಸಮಾವೇಶ ನಡೆಯಲಿದ್ದು, ಇವುಗಳಲ್ಲಿ ಎರಡು ಸಮಾವೇಶಗಳನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ಪರಮೇಶ್ವರ್ ಹೇಳಿದರು. ಫೆ.15ರಂದು ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಅಂದು ರೈತರು, ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದರು. [ಸೋನಿಯಾ ಗುಲ್ಬರ್ಗ ಸಮಾವೇಶದಲ್ಲಿ ಹೇಳಿದ್ದೇನು]
ಫೆ.16ರಂದು ತುಮಕೂರಿನಲ್ಲಿ ಪಕ್ಷದ ಮಹಿಳಾ ಮೋರ್ಚಾ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ನಂತರ ಕುಣಿಗಲ್, ಮಂಡ್ಯ, ಮದ್ದೂರು, ಟಿ ನರಸೀಪುರದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದು, ನಂತರ ಮೈಸೂರಿನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.
ಫೆ.17ಕ್ಕೆ ಮೊದಲ ಪಟ್ಟಿ : ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಫೆ.17ರಂದು ಅಂತಿಮಗೊಳಿಸಲಾಗುವುದು ಎಂದು ಕೆಪಿಸಿಸಿ ಅದ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಫೆ.16ರಂದು ಮಧ್ಯಾಹ್ನ ಮೂರು ಗಂಟೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಚುನಾವಣಾ ಸಮತಿ ಸಭೆ ನಡೆಯಲಿದೆ. ಸಭೆಯಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದರು. [ಫೆ.17 ಕ್ಕೆ ಮೊದಲ ಪಟ್ಟಿ]












Click it and Unblock the Notifications