ಶನಿವಾರ ರಾಯಚೂರಿಗೆ ರಾಹುಲ್ ಗಾಂಧಿ ಭೇಟಿ
ರಾಯಚೂರು, ಅ.11 : ಕರ್ನಾಟಕ ಕಾಂಗ್ರೆಸ್ ರಾಯಚೂರಿನಲ್ಲಿ ಶನಿವಾರ ಬೃಹತ್ ಸಮಾವೇಶ ಆಯೋಜಿಸಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಈ ಕುರಿತು ಮಾಹಿತಿ ನೀಡಿದ್ದಾರೆ. 'ಹೈದರಾಬಾದ್ ಕರ್ನಾಟಕ ಕಾರ್ಯಕರ್ತರ ಸಮಾವೇಶವನ್ನು ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣದ ಆವರಣದಲ್ಲಿ ಆಯೋಜಿಸಲಾಗಿದೆ' ಎಂದು ಹೇಳಿದರು.

'ಹೈದರಾಬಾದ್ ಕರ್ನಾಟಕದ ಅಭಿವೃದ್ಧಿ ಬಗ್ಗೆ ರಾಹುಲ್ ಗಾಂಧಿ ಅವರು ವಿಶೇಷ ಕಾಳಜಿ ಇಟ್ಟುಕೊಂಡಿದ್ದಾರೆ. 371-ಜೆ ಜಾರಿಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಅವರಿಗೆ ಈ ಭಾಗದ ಜನರು ಅಭಿನಂದನೆ ಸಲ್ಲಿಸುವರು. ಸಮಾವೇಶ ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ' ಎಂದು ಸಚಿವರು ವಿವರಣೆ ನೀಡಿದರು.
ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಂಸದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.
ರಾಯಚೂರು ನಗರದ ತುಂಬಾ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವ ಫ್ಲೆಕ್ಸ್, ಬ್ಯಾನರ್ ರಾರಾಜಿಸುತ್ತಿವೆ. ಭದ್ರತೆಗಾಗಿ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.












Click it and Unblock the Notifications