ಮಾ.9ರಂದು ಕರ್ನಾಟಕದಲ್ಲಿ ಪ್ರಚಾರ ಆರಂಭಿಸಲಿದ್ದಾರೆ ರಾಹುಲ್
ಬೆಂಗಳೂರು, ಫೆಬ್ರವರಿ 22 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 9ರಂದು ಹಾವೇರಿಯಲ್ಲಿ ಅವರು ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಈ ಕುರಿತು ಮಾಹಿತಿ ನೀಡಿದರು. 'ಮಾರ್ಚ್ 9ರಂದು ಹಾವೇರಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ' ಎಂದರು.
ದೇವೇಗೌಡ-ದಿನೇಶ್ ಗುಂಡೂರಾವ್ ಭೇಟಿ: ಸೀಟು ಹಂಚಿಕೆ ಮಾತುಕತೆ
'ಹಾವೇರಿ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಕೆಪಿಸಿಸಿ ಕಾರ್ಯದರ್ಶಿ, ಸಹ ಸಂಯೋಜಕರಿಗೆ ರಾಹುಲ್ ಗಾಂಧಿ ಸೂಚಿಸಿದ್ದಾರೆ. ಲಕ್ಷಾಂತರ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಲೋಕಸಭಾ ಚುನಾವಣೆ ಮೈತ್ರಿ, ಮೌನ ಮುರಿದ ಸಿದ್ದರಾಮಯ್ಯ
'ರಾಯಚೂರಿನಲ್ಲಿ ಶನಿವಾರ ಕಾಂಗ್ರೆಸ್ ಸಮಾವೇಶ ಆಯೋಜನೆ ಮಾಡಲಾಗಿದೆ. ನಂತರ ವಿಜಯಪುರದಲ್ಲಿ ಸಭೆ ನಡೆಯಲಿದೆ. ಫೆಬ್ರವರಿ 28ರಂದು ಅಹಮದಾಬಾದ್ನಲ್ಲಿ ಪಕ್ಷದ ಕಾರ್ಯಕಾರಣಿ ನಡೆಯಲಿದೆ' ಎಂದು ವಿವರಣೆ ನೀಡಿದರು.
ಲೋಕಸಭಾ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಪಟ್ಟಿಯಲ್ಲಿ ಅಚ್ಚರಿಯ ಹೆಸರುಗಳು
ಬಿಜೆಪಿಯ ಶಕ್ತಿ ಕೇಂದ್ರ ಹಾವೇರಿ
'ಹಾವೇರಿ ಬಿಜೆಪಿಯ ಶಕ್ತಿ ಕೇಂದ್ರ ಎಂಬ ಕಾರಣಕ್ಕೆ ಅಲ್ಲಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದೇವೆ. ಮಾ.9ರಂದು ಹಾವೇರಿಯಲ್ಲಿ ಪ್ರಚಾರ ಆರಂಭಿಸಿದ ಬಳಿಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವರು ಸಮಾವೇಶಗಳನ್ನು ನಡೆಸಲಿದ್ದಾರೆ' ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಮೋದಿ ಪ್ರಚಾರ ಆರಂಭಿಸಿದ್ದಾರೆ
ದಕ್ಷಿಣ ಭಾರತದ ಪ್ರಮುಖ ರಾಜ್ಯವಾದ ಕರ್ನಾಟಕದ ಮೇಲೆ ಎರಡೂ ರಾಷ್ಟ್ರೀಯ ಪಕ್ಷಗಳ ಕಣ್ಣಿದೆ. ಫೆ.10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಎರಡೂ ಪಕ್ಷಗಳು ರಾಜ್ಯದಲ್ಲಿ ಅತಿ ಹೆಚ್ಚು ಸೀಟುಗಳಿಸಬೇಕೆಂಬ ಉತ್ಸಾಹದಲ್ಲಿವೆ.
ಜೆಡಿಎಸ್ ಜೊತೆ ಮೈತ್ರಿ
ಕರ್ನಾಟಕದಲ್ಲಿ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಕಾಂಗ್ರೆಸ್-ಜೆಡಿಎಸ್ ಎಷ್ಟು ಸ್ಥಾನಗಳನ್ನು ಹಂಚಿಕೆ ಮಾಡಿಕೊಳ್ಳಲಿವೆ ಎಂಬುದು ಇನ್ನೂ ಅಂತಿಮವಾಗಿಲ್ಲ.
ಚುನಾವಣಾ ಸಮಿತಿ ಸಭೆ
ಕರ್ನಾಟಕ ಕಾಂಗ್ರೆಸ್ ಚುನಾವಣಾ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಿದೆ. ಚುನಾವಣಾ ಸಮಿತಿ ಮೊದಲ ಸಭೆಯನ್ನು ಮಾಡಿ ಕಾರ್ಯತಂತ್ರಗಳ ಕುರಿತು ಚರ್ಚೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ನಾಯಕರನ್ನು ಒಟ್ಟಾಗಿ ಕರೆದುಕೊಂಡು ಚುನಾವಣೆಯನ್ನು ಎದುರಿಸಲಿದ್ದಾರೆ.