ಜನವರಿಯಲ್ಲಿ ರಾಜ್ಯಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ
ಬೆಂಗಳೂರು, ಡಿಸೆಂಬರ್ 29 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಪ್ರವಾಸದ ದಿನಾಂಕ ಅಂತಿಮವಾಗಿದೆ. ಜನವರಿಯಲ್ಲಿ ಮೂರು ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ.
ನವ ಕರ್ನಾಟಕ ನಿರ್ಮಾಣ ಯಾತ್ರೆಯ ಸಂದರ್ಭದಲ್ಲಿ ತುಮಕೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದರು.

ಪರಮೇಶ್ವರ ಅವರು ರಾಹುಲ್ ಗಾಂಧಿ ಜೊತೆ ಚರ್ಚಿಸಿ ದಿನಾಂಕ ನಿಗದಿ ಮಾಡಿದ್ದಾರೆ. ಜನವರಿ 20, 21 ಮತ್ತು 22ರಂದು ರಾಹುಲ್ ಗಾಂಧಿ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಅವರು ಆಗಮಿಸುತ್ತಿದ್ದಾರೆ. ಮುಂದಿನ ವರ್ಷ ರಾಜ್ಯದಲ್ಲಿ ಚುನಾವಣೆಯೂ ಇರುವುದರಿಂದ ರಾಹುಲ್ ಪ್ರವಾಸ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ.
ಜ.20ರಂದು ಬೆಳಗಾವಿಯಲ್ಲಿ ಮಹಿಳಾ ಜನಪ್ರತಿನಿಧಿಗಳು, ಮಹಿಳಾ ಪದಾಧಿಕಾರಿಗಳ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ಜ.21ರಂದು ಬಳ್ಳಾರಿಯಲ್ಲಿ ಎಸ್ಟಿ ಸಮುದಾಯದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜ.22ರಂದು ಸಮಾವೇಶ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಮೈಸೂರು ಅಥವ ಕರಾವಳಿ ಭಾಗದಲ್ಲಿ ಸಮಾವೇಶ ಆಯೋಜಿಸಲು ಕೆಪಿಸಿಸಿ ನಿರ್ಧರಿಸಿದೆ. ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.












Click it and Unblock the Notifications