ನಿಜವಾದ ಮತಗಳ್ಳತನ ಕಾಂಗ್ರೆಸ್ ಪಕ್ಷದವರಿಂದ: ಅಶೋಕ್ ಗಂಭೀರ ತಿರುಗೇಟು
ರಾಹುಲ್ ಗಾಂಧಿ ಅವರು ವೋಟ್ ಚೋರಿ ಅಭಿಯಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯ ಮಾಡಿದ್ದಾರೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನ ಮುಖಭಂಗ ಗ್ಯಾರೆಂಟಿ ಆಗುತ್ತಿದ್ದಂತೆ ರಾಹುಲ್ ಗಾಂಧಿ ಅವರು ಬಲವಂತವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈಯಲ್ಲಿ ಸುದ್ದಿಗೋಷ್ಠಿ ಮಾಡಿಸಿ "ವೋಟ್ ಚೋರಿ" ಮೆಗಾ ಧಾರಾವಾಹಿಯ ಮತ್ತೊಂದು ಸಂಚಿಕೆ ಬಿಡುಗಡೆ ಮಾಡಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಆಟಂ ಬಾಂಬ್, ಹೈಡ್ರೋಜನ್ ಬಾಂಬ್ ಎಂದು ಪದೇ ಪದೇ ಹೇಳಿದ ಸುಳ್ಳನ್ನೇ ಹೇಳಿ ಜನರ ಮುಂದೆ ಈಗಾಗಲೇ ನಗೆಪಾಟಲಿಗೀಡಾಗಿರುವ ರಾಹುಲ್ ಗಾಂಧಿ ಅವರನ್ನು ಬೆಂಬಲಿಸುವ ಮನಸ್ಸಿಲ್ಲದಿದ್ದರೂ ಕುರ್ಚಿ ಉಳಿಸಿಕೊಳ್ಳಲು, ಕುರ್ಚಿ ಗಿಟ್ಟಿಸಿಕೊಳ್ಳಲು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಒಲ್ಲದ ಮನಸ್ಸಿನಿಂದ ನಾಮಕಾವಸ್ತೆ ಸುದ್ದಿಗೋಷ್ಠಿ ಮಾಡಿದ್ದಾರೆ ಎಂದಿದ್ದಾರೆ.

ರಾಹುಲ್ ಗಾಂಧಿ ಅವರು ತಮ್ಮ ಆರೋಪದಲ್ಲಿ ಹುರುಳಿದ್ದರೆ ಚುನಾವಣಾ ಆಯೋಗ ಕೇಳಿದಂತೆ ಅಫಿಡವಿಟ್ ಯಾಕೆ ಸಲ್ಲಿಸುತ್ತಿಲ್ಲ? ನ್ಯಾಯಾಲಯದಲ್ಲಿ ಯಾಕೆ ಮೊಕದ್ದಮೆ ದಾಖಲಿಸುತ್ತಿಲ್ಲ? ರಾಹುಲ್ ಗಾಂಧಿ ಅವರು ಮಾಡಿದ ಪ್ರತಿಯೊಂದು ಆರೋಪಕ್ಕೂ ಚುನಾವಣಾ ಆಯೋಗ ಸೂಕ್ತ ಪ್ರತ್ಯುತ್ತರ ನೀಡಿದೆ. ಮಾಧ್ಯಮಗಳು ರಾಹುಲ್ ಗಾಂಧಿ ಅವರು ಹೇಳಿದ್ದೆಲ್ಲ ಹಸಿ ಸುಳ್ಳು, ಕಟ್ಟು ಕಥೆ ಎಂದು ಸಾಬೀತು ಮಾಡಿವೆ. ಇಷ್ಟಾದರೂ ಪದೇ ಪದೇ ಅದೇ ಸುಳ್ಳನ್ನು ಹೇಳುತ್ತಿರುವ ರಾಹುಲ್ ಗಾಂಧಿ ಅವರ ಭಂಡತನವನ್ನ ನಿಜಕ್ಕೂ ಮೆಚ್ಚಲೇಬೇಕು ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇಷ್ಟಕ್ಕೂ ನಿಜವಾದ ಮತಗಳ್ಳತನ ಮಾಡುತ್ತಿರುವವರು ಕಾಂಗ್ರೆಸ್ ಪಕ್ಷದವರು. ಕರ್ನಾಟಕದಲ್ಲಿರುವ ಲಕ್ಷಾಂತರ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡದೇ ರಕ್ಷಣೆ ಕೊಡುತ್ತಿರುವ ಕಾಂಗ್ರೆಸ್ ಸರ್ಕಾರದ ಜಾಣ ಕುರುಡುತನದ ಹಿಂದಿರುವ ನಿಜವಾದ ಉದ್ದೇಶವೇ ಅಕ್ರಮ ಬಾಂಗ್ಲಾ ವಲಸಿಗರ ಕೈಯಲ್ಲಿ ಅಕ್ರಮ ಮತದಾನ ಮಾಡಿಸಿ ಆ ಮೂಲಕ ಚುನಾವಣೆ ಗೆಲ್ಲುವುದು. ಕಾಂಗ್ರೆಸ್ ಪಕ್ಷಕ್ಕೆ ಮತಗಳ್ಳತನದ ಬಗ್ಗೆ ನಿಜವಾದ ಬದ್ಧತೆ ಇದ್ದರೆ, ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಕೂಡಲೇ ಕ್ರಮ ಕೈಗೊಂಡು ಗಡೀಪಾರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಕ್ಯಾಬಿನೆಟ್ ಪೂರ್ತಿ ಗುಂಡಿಗಳ ಕ್ಯಾಬಿನೆಟ್
ರಾಜ್ಯದಲ್ಲಿರುವುದು ಗುಂಡಿಗಳ ಸರ್ಕಾರ. ಕ್ಯಾಬಿನೆಟ್ ಪೂರ್ತಿ ಗುಂಡಿಗಳ ಕ್ಯಾಬಿನೆಟ್. ಕಳೆದ ಎರಡೂವರೆ ವರ್ಷದಲ್ಲಿ ಬೆಂಗಳೂರಿನಲ್ಲಿ ಯಾವುದೇ ಅಭಿವೃದ್ಧಿ ಮಾಡಲಿಲ್ಲ, ಯಾವುದೇ ಅನುದಾನವನ್ನೂ ಬಿಡುಗಡೆ ಮಾಡಿಲ್ಲ. ಈಗ ಕಾಂಗ್ರೆಸ್ ಸರ್ಕಾರದ ಬಳಿ ಗುಂಡಿ ಮುಚ್ಚೋಕೂ ಹಣವಿಲ್ಲ. ಈ ಬೇಜವಾಬ್ದಾರಿ ಸರ್ಕಾರ ರಾಜ್ಯದ ಜನರ ಪಾಲಿಗೆ ಶಾಪವಾಗಿದೆ ಎಂದಿದ್ದಾರೆ.












Click it and Unblock the Notifications