ಚಿಕ್ಕಬಳ್ಳಾಪುರದಲ್ಲಿ ರಾಹುಲ್, ಎಚ್ಡಿಕೆ ಮುಖಾಮುಖಿ?
ಬೆಂಗಳೂರು, ಮಾ.13 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ? ಎಚ್.ಡಿ.ಕುಮಾರಸ್ವಾಮಿ ಅವರ ಪ್ರಕಾರ ಹೌದು. ಕುಮಾರಸ್ವಾಮಿ ಮತ್ತು ರಾಹುಲ್ ಗಾಂಧಿ ಚಿಕ್ಕಬಳ್ಳಾಪುರದಲ್ಲಿ ಮುಖಾಮುಖಿಯಾಗಲಿದ್ದಾರೆ.
ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಹಿರಿಯ ಕಾಂಗ್ರೆಸ್ ಮುಖಂಡರಿಂದ ಕುಮಾರಸ್ವಾಮಿ ಅವರಿಗೆ ಮಾಹಿತಿ ತಿಳಿದಿದೆಯಂತೆ. ಆದ್ದರಿಂದ ವೀರಪ್ಪ ಮೊಯ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ ಎಂದು ಎಚ್ಡಿಕೆ ವಿಶ್ಲೇಷಿಸಿದ್ದಾರೆ.

ಒಂದು ವೇಳೆ ಕುಮಾರಸ್ವಾಮಿ ಅವರಿಗೆ ಬಂದಿರುವ ಮಾಹಿತಿ ನಿಜವಾಗಿ ರಾಹುಲ್ ಗಾಂಧಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ಮುಂದಾದದರೆ, ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಲಿದ್ದಾರಂತೆ. ಈ ಕುರಿತು ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ರಾಹುಲ್ ಸ್ಪರ್ಧಿಸಿದರೆ, ಅವರ ವಿರುದ್ಧ ಸ್ಪರ್ಧಿಸುತ್ತೇನೆ ಎಂದು ಎಚ್ಡಿಕೆ ಘೋಷಿಸಿದ್ದಾರೆ. [ಕರ್ನಾಟಕದಿಂದ ರಾಹುಲ್ ಸ್ಪರ್ಧೆ]
ಹಿಂದೆಯೂ ಸುದ್ದಿ ಹಬ್ಬಿತ್ತು : ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲು ಇಚ್ಛಿಸಿದ್ದಾರೆ ಎಂಬ ಸುದ್ದಿ ಹಿಂದೆಯೂ ಹಬ್ಬಿತ್ತು. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾತಿತ್ತು. ಹಲವು ಕಾಂಗ್ರೆಸ್ ನಾಯಕರು ಸಹ ರಾಹುಲ್ ಅವರಿಗೆ ರಾಜ್ಯದಿಂದ ಸ್ಪರ್ಧಿಸುವಂತೆ ಮನವಿ ಮಾಡಿರುವುದಾಗಿ ಹೇಳಿದ್ದರು. [ವೀರಪ್ಪ ಮೊಯ್ಲಿಗೆ ಟಿಕೆಟ್ ಖಚಿತ]
ಆದರೆ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸ ಸುದ್ದಿಯನ್ನು ನೀಡಿದ್ದು, ಚಿಕ್ಕಬಳ್ಳಾಪುರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಅವರ ವಿರುದ್ಧ ತಾವು ಸ್ಪರ್ಧಿಸುವುದಾಗಿ ಹೇಳಿ ಕುತೂಹಲ ಮೂಡಿಸಿದ್ದಾರೆ. ಹಾಲಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದರು. ಆದರೆ, ಅವರ ಹೆಸರನ್ನು ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಘೋಷಿಸಿಲ್ಲ.
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಹಲವಾರು ನಾಯಕರು ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವುದು ಖಚಿತ. ಪಕ್ಷದ ಎರಡನೇ ಪಟ್ಟಿಯಲ್ಲಿ ಅವರ ಹೆಸರು ಘೋಷಿಸಲಾಗುತ್ತದೆ ಎಂದು ಹೇಳಿದ್ದಾರೆ. ಅಂದಹಾಗೆ ಕಾಂಗ್ರೆಸ್ ಎರಡನೇ ಪಟ್ಟಿ ಗುರುವಾರ ಸಂಜೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿ ಮಾಜಿ ಸಚಿವ ಬಿಎನ್ ಬಚ್ಚೇಗೌಡ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.












Click it and Unblock the Notifications