ಮುಂದಿನ 48 ಗಂಟೆ ಮಲೆನಾಡು ಭಾಗದಲ್ಲಿ ಭರ್ಜರಿ ಮಳೆ ಎಚ್ಚರಿಕೆ!
ಮಳೆ.. ಮಳೆ.. ಮಳೆ.. ಮತ್ತೆ ಮಳೆಯ ಅಬ್ಬರ ಬಲು ಜೋರಾಗಿದೆ. ಮಳೆರಾಯನಿಗೆ ಮುನಿಸು ಕಡಿಮೆ ಆಗಿ ಮತ್ತೊಮ್ಮೆ ಕನ್ನಡಿಗರ ಮೇಲೆ ಕರುಣೆ ತೋರಿಸಿದ್ದಾನೆ. ಹೀಗಾಗಿ ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಸೇರಿದಂತೆ ಬೆಂಗಳೂರಲ್ಲೂ ಭರ್ಜರಿ ಮಳೆ ಬೀಳುತ್ತಿದೆ. ಅದ್ರಲ್ಲೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಹಳ್ಳಕೊಳ್ಳ & ನದಿಗಳು ಮೈದುಂಬಿ ಹರಿಯುತ್ತಿವೆ.
ಕರ್ನಾಟಕದ ಬಹುತೇಕ ನದಿಗಳು ಹುಟ್ಟುವ ಮಲೆನಾಡು ಪ್ರದೇಶದಲ್ಲಿ ಮಳೆರಾಯ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಅದ್ರಲ್ಲೂ ಪಶ್ಚಿಮ ಘಟ್ಟಗಳ ತವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮತ್ತಷ್ಟು ಹೆಚ್ಚಿಸಿದ್ದಾನೆ. ಹೀಗಾಗಿ ನದಿಗಳು & ಹಳ್ಳಗಳಿಗೆ ಭಾರಿ ನೀರು ಹರಿದು ಬರುತ್ತಿದೆ. ಇಂದು ಬೆಳಗ್ಗೆಯಿಂದಲೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಎನ್ಆರ್ ಪುರ, ಮೂಡಿಗೆರೆ, ಕಳಸ ಭಾಗದಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಈ ಹಿನ್ನೆಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ & ಚಾರ್ಮಾಡಿ ಘಾಟ್ ಸುತ್ತಮುತ್ತ ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯ ಜೊತೆಗೆ ಭಾರಿ ಗಾಳಿ ಕೂಡ ತಲ್ಲಣ ಸೃಷ್ಟಿಸಿದೆ.

ಈ ಜಿಲ್ಲೆಗಳಲ್ಲಿ ರಜೆ ಘೋಷಣೆ!
ಅಂದಹಾಗೆ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 24 ಗಂಟೆ ಕಾಲ ಭರ್ಜರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ. ಗುಡುಗು & ಸಿಡಿಲು ಸಹಿತ ಮಳೆ ಬೀಳಲಿದ್ದು ಭಾರಿ ಮುನ್ನೆಚ್ಚರಿಕೆ ವಹಿಸಲಾಗಿದೆ. ನಿರಂತರ ಮಳೆ ಸುರಿಯುವ ಸೂಚನೆ ಕಾರಣ ಈಗ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 27ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶವನ್ನು ಹೊರಡಿಸಿದ್ದಾರೆ. ಅಂಗನವಾಡಿಗಳಿಗೆ ಕೂಡ ರಜೆ ಘೋಷಣೆ ಮಾಡಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯಬಾರದು
ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹಾಗೇ ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿ ಕಾವೇರಿ ಉಗಮವಾಗುವ ಕೊಡಗು ಜಿಲ್ಲೆಯಲ್ಲೂ ಮಳೆಯ ಆರ್ಭಟ ಹೆಚ್ಚಾಗಲಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 28 ರವರೆಗೆ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications