ಕರ್ನಾಟಕದ ಕರಾವಳಿಯಲ್ಲಿ ಆ.2ರವರೆಗೂ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು, ಜುಲೈ 29: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆ.2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Recommended Video
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 29ರಿಂದ ಆಗಸ್ಟ್ 2ರವರೆಗೂ 115.5 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. 31 ರಂದು 115.6 ಮಿ.ಮೀಗಿಂತಲೂ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ.
ಕರ್ನಾಟಕ,ಕೇರಳ ಸೇರಿ ದೇಶದ ವಿವಿಧೆಡೆ 5 ದಿನ ಧಾರಾಕಾರ ಮಳೆ
ಅರಬ್ಬಿ ಸಮುದ್ರದಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಕರಾವಳಿ ಜಿಲ್ಲೆಯ ಮೀನುಗಾರರು ಜು.29ರಿಂದ ಐದು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜುಲೈ 30 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮತ್ತು ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂಗಾರು ಕರ್ನಾಟಕದ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ.
ಭಟ್ಕಳ, ಕೋಟಾ, ಕಾರವಾರ, ಪಣಂಬೂರು, ಹೊನ್ನಾವರ, ಶಿರಾಲಿ, ಅಂಕೋಲಾ, ಬೆಳ್ತಂಗಡಿ, ಸಿದ್ದಾಪುರ, ಕೊಪ್ಪಳ, ಸುಬ್ರಹ್ಮಣ್ಯ, ಮುಲ್ಕಿ, ಗೋಕರ್ಣ, ಪುತ್ತೂರು, ಹಾವೇರಿ, ಹಿರೇಕೆರೂರು, ಮುನಿರಾಬಾದ್, ಆಗುಂಬೆ, ಬನವಾಸಿ, ಲೋಂಡಾ, ದಾವಣಗೆರೆಯಲ್ಲಿ ಮಳೆಯಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಹಾಸನ, ರಾಮನಗರ, ಶಿವಮೊಗ್ಗದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.
ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.