Karnataka Rains: ಏಪ್ರಿಲ್ 18 ರಿಂದ 26 ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
ಬೆಂಗಳೂರು, ಏಪ್ರಿಲ್ 11 : ರಾಜ್ಯದಲ್ಲಿ ಬಿಸಿಲಿನ ಝಳ ಶುರುವಾಗಿದೆ. ಆದರೆ, ಕಳೆದೊಂದು ವಾರದಿಂದ ಹವಾಮಾನ ವೈಪರೀತ್ಯದಿಂದ ತಣ್ಣನೆಯ ಗಾಳಿ ಬೀಸುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಮಳೆ ಹನಿಗಳು ಬೀಳುತ್ತಿವೆ. ಒಮ್ಮೆ ಬಿಸಿಲು ಹೆಚ್ಚಾಗಿದ್ದರೇ ಅದೇ ಕೆಲವು ಕ್ಷಣಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಎಲ್ಲಾ ರೀತಿಯ ವಾತಾವರಣ ಕಂಡುಬರುತ್ತಿದೆ.
ಇನ್ನು ಕೆಲವು ಜಿಲ್ಲೆಗಳಲ್ಲಿ ಇತ್ತಿಚೇಗೆ ಭಾರೀ ಮಳೆಯಾಗಿದೆ. ಅದರಲ್ಲೂ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮಂಡ್ಯ, ಮೈಸೂರು, ಹಾಸನ, ಚಾಮರಾಜ ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿದ್ದರೇ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಇ್ತತೀಚೆಗೆ ಸುರಿದ ಭಾರೀ ಮಳೆಗೆ ನಗರದ ಜನರು ತತ್ತರಿಸಿದ್ದರು.

ಏಪ್ರಿಲ್ 10 ರಂದು ಪ್ರಕಟಣೆ ಹೊರಡಿಸಿರುವ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಏಪ್ರಿಲ್ 18 ರಿಂದ 26ರ ವರೆಗೆ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯನ್ನು ಬಹಿರಂಗಪಡಿಸಿದೆ. ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಮಾಹಿತಿ ನೀಡಿದೆ. ಮುಂದಿನ ಒಂದೆರಡು ದಿನಗಳಲ್ಲಿ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿರುವ ಪ್ರಕಟಣೆಯಲ್ಲಿ, ಮಳೆ ಮುನ್ಸೂಚನೆ ಆಧರಿಸಿ ಕರ್ನಾಟಕದ ನಕ್ಷೆಯನ್ನು ಬಿಡುಗಡೆ ಮಾಡಲಾಗಿದೆ. ಹೆಚ್ಚು ಮಳೆಯಾಗುವ ಪ್ರದೇಶಗಳನ್ನು ತಿಳಿ ಹಸಿರು ಬಣ್ಣದಿಂದ ಮತ್ತು ಸಾಧಾರಣ ಮಳೆಯಾಗುವ ಪ್ರದೇಶಗಳನ್ನು ಕಡು ಹಸಿರು ಬಣ್ಣದಿಂದ ಗುರುತಿಸಲಾಗಿದೆ. ಕಡಿಮೆ ಮಳೆ ಬೀಳುವ ಪ್ರದೇಶಗಳನ್ನು ಕಡು ನೀಲಿ ಬಣ್ಣದಲ್ಲಿ ಗುರುತಿಸಲಾಗಿದೆ. ಇದರ ಜೊತೆಗೆ ತುಂತುರು ಮಳೆಯ ಪ್ರದೇಶಗಳನ್ನು ತಿಳಿ ನೀಲಿ ಬಣ್ಣದಲ್ಲಿ ಗುರುತಿಸಲಾಗಿದೆ.

ಕೆಎಸ್ಎನ್ಡಿಎಂಸಿ ಪ್ರಕಟಣೆ ಪ್ರಕಾರ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಏಪ್ರಿಲ್ 18 ರಿಂದ 26 ರವರೆಗೆ ಕೆಲವೆಡೆ 20 ರಿಂದ 25 ಮಿ.ಮೀ ವರೆಗೆ 30 ರಿಂದ 35 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು ತಾಲೂಕು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ನರಸಿಂಹರಾಜಪುರ, ಮೂಡಿಗೆರೆಯಲ್ಲಿ ಭಾರೀ ಮಳೆಯಾಗಲಿದೆ. ಇನ್ನು ಹಾಸನ ಜಿಲ್ಲೆಯ ಆಲೂರು, ಬೇಲೂರು, ಹಳೇಬೀಡು, ಹೊಳೆ ನರಸೀಪುರ, ಅರಕಲಗೂಡು ತಾಲೂಕುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಮೈಸೂರು ಗಡಿಭಾಗದ ಹಾಸನ ಜಿಲ್ಲೆಗೆ ಸೇರಿದ ಕೆಲವು ಭಾಗಗಳಲ್ಲಿ ಕಡಿಮೆ ಮಳೆಯಾಗಬಹುದು. ಆದರೆ, ಕೆಲವು ಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗಲಿದೆ ಎಂದು ಹೇಳಲಾಗಿದೆ.
ಇನ್ನು, ಏಪ್ರಿಲ್ 15ರಿಂದ ಮೂರು ದಿನ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಭಾಗದಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಬರಲಿದೆ. ಅದೇ ರೀತಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಗದಗ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಜೋರು ಮಳೆ ಆಗಲಿದೆ.
ಇನ್ನೂ ದಕ್ಷಿಣ ಒಳನಾಡಿನ ಭಾಗದ ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗದಲ್ಲಿ ಅಧಿಕ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಒಟ್ಟು ಏಪ್ರಿಲ್ 15ರಿಂದ ಸುಮಾರು ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಕಂಡು ಬರಲಿದೆ.












Click it and Unblock the Notifications