Karnataka Rains: ಕರಾವಳಿ ಕರ್ನಾಟಕ, ಕೊಡಗಿನಲ್ಲಿ ಯೆಲ್ಲೋ ಅಲರ್ಟ್- ಬೆಂಗಳೂರಿನಲ್ಲಿ ಲಘು ಮಳೆ ಸಾಧ್ಯತೆ
ಬೆಂಗಳೂರು, ಜುಲೈ 08: ಕರಾವಳಿ ಕರ್ನಾಟಕದಲ್ಲಿ ಭಾನುವಾರ ಬೆಳಗಿನ ಜಾವದವರೆಗೆ ಭಾರೀ ಮಳೆಯಾಗುವ (64.5 ಮಿ.ಮೀ ನಿಂದ 115.5 ಮಿ.ಮೀ) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಿದೆ. ಆದರೆ, ಕಡಲ ತೀರದ ಬಳಿ ಹೋಗದೇ ಇರುವಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ವಾರವೀಡಿ ಕರಾವಳಿ ಕರ್ನಾಟಕದಲ್ಲಿ ಮಳೆ ಸುರಿದಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು.

ಈ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಕನಿಷ್ಠ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಆದೇಶ ಹೊರಡಿಸಿತ್ತು.
'ಜುಲೈ 8 ಮತ್ತು 9 ರಂದು ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ' ಎಂದು ಹವಾಮಾನ ಇಲಾಕೆ ತಿಳಿಸಿದೆ.

ಜುಲೈ 9 ರಂದು ಕರ್ನಾಟಕ ಕರಾವಳಿಯಲ್ಲಿ 40-45 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿರುವ ಕೊಡಗಿಗೆ ( ಮಡಿಕೇರಿ ) ಶನಿವಾರ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಐಎಂಡಿ ತಿಳಿಸಿದೆ. ಕೊಡಗು ಜಿಲ್ಲೆಯ ಜನರು ಆದಷ್ಟು ಮನೆಯಲ್ಲಿಯೇ ಉಳಿದುಕೊಳ್ಳಬೇಕು. ಪ್ರವಾಸಿ ತಾಣಗಳಾದ ಗಿರಿ ಬೆಟ್ಟಗಳ ಸಮೀಪ ಸಂಚರಿಸುವುದನ್ನು ನಿಲ್ಲಿಸಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಹವಾಮಾನ ಸಂಸ್ಥೆ ಪ್ರಕಾರ, ಸೋಮವಾರದವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.
ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುತ್ತಿದ್ದರೂ ಹವಾಮಾನ ತಣ್ಣಗೇ ಇದೆ. ಮುಂದಿನ ಮೂರು ದಿನಗಳ ಕಾಲ ಇದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.
ಏತನ್ಮಧ್ಯೆ, ರಾಜ್ಯ ಸರ್ಕಾರದ ಕೆಲವು ಸಚಿವರು ಕರಾವಳಿ ಕರ್ನಾಟಕದ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರ ಕನ್ನಡ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶನಿವಾರ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದಾರೆ.
ದಕ್ಷಿಣ ಜಿಲ್ಲಾ ಉಸ್ತುವಾರಿಯಾಗಿರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದಕ್ಷಿಣ ಕನ್ನಡಕ್ಕೆ ಭೇಟಿ ನೀಡಲಿದ್ದಾರೆ. ಮಳೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ವರದಿಯಾಗಿದೆ.
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆ ಬೀಳದ ಕಾರಣ ರೈತರು ಕಂಗಾಲಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೆಲ ದಿನಗಳ ಕಾಲ ಮಳೆ ಬರದೇ ಹೋದರೆ, ಬರಗಾಲವೆಂದು ಘೋಷಿಸುವುದಾಗಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಹೇಳಿದ್ದಾರೆ.
ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.












Click it and Unblock the Notifications