Karnataka Rain: ಕರ್ನಾಟಕ; ಕರಾವಳಿ, ಮಲೆನಾಡಿನಲ್ಲಿ 2 ದಿನ ಮಳೆ
ಬೆಂಗಳೂರು, ಮಾರ್ಚ್ 30; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಗುಡುಗು, ಸಿಡಿಲು ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಬಿದ್ದು ರೈತರು ನಷ್ಟ ಅನುಭವಿಸುತ್ತಿದ್ದಾರೆ.
ಕರ್ನಾಟಕದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಾರ್ಚ್ 30 ಮತ್ತು 31ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಮಾರ್ಚ್ ತಿಂಗಳ ಬಿಸಿಲಿಗೆ ಜನರು ಹೈರಾಣಾಗಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಿನ ಬಿಸಿಲು ಸಹಿಸಿಕೊಳ್ಳುವುದು ಹೇಗೆ? ಎಂದು ಚಿಂತೆ ಮಾಡುತ್ತಿದ್ದಾರೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಾರ್ಚ್ 31ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಂಗಳವಾರ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕೆಲವು ಭಾಗಗಳಲ್ಲಿ ಗುಡುಗಿನ ಅಬ್ಬರ ಕಂಡುಬಂತು. ಆದರೆ ಮಳೆಯಾಗಲಿಲ್ಲ. ಕಳೆದ ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುತ್ತಲೇ ಇದೆ.
ಮಂಗಳವಾರ ಸಂಜೆ ಶಿವಮೊಗ್ಗ ನಗರ, ಶಿವಮೊಗ್ಗ ತಾಲೂಕಿನ ವಿವಿಧ ಕಡೆ ಆಲಿಕಲ್ಲು ಮಳೆಯಾಗಿದೆ. ಆಯನೂರು ಸುತ್ತಮುತ್ತ ಮಳೆಯ ಜೊತೆ ಆಲಿಕಲ್ಲು ಬಿದ್ದಿವೆ. ದೊಡ್ಡ ಗಾತ್ರದ ಆಲಿಕಲ್ಲುಗಳಿಂದಾಗಿ ಹೆಂಚುಗಳು, ಸೋಲರ್ ಪ್ಯಾನಲ್ ಒಡೆದಿವೆ. ಹಲವು ಬೆಳೆಗಳಿಗೆ ಸಹ ಹಾನಿಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಯಲ್ಲಾಪುರದಲ್ಲಿಯೂ ಭಾರೀ ಮಳೆ, ಗಾಳಿಯಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಉತ್ತರ ಕರ್ನಾಟಕದ ರಾಯೂಚೂರು, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆ ಬಿದ್ದಿದೆ.
ಕರ್ನಾಟಕ ಮಾತ್ರವಲ್ಲ ಅರುಣಾಚಲ ಪ್ರದೇಶ, ಕೇರಳದಲ್ಲಿಯೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳವಾರ ತಮಿಳುನಾಡು, ಲಕ್ಷದ್ವೀಪ, ಒಡಿಶಾ, ಉತ್ತರ ಪ್ರದೇಶ, ಛತ್ತೀಸ್ಗಢ, ಗುಜರಾತ್, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಬಿಸಿಗಾಳಿ ಬೀಸುವ ನಿರೀಕ್ಷೆ ಇದೆ.












Click it and Unblock the Notifications