ಮತ್ತೆ ವಾಯುಭಾರ ಕುಸಿತ; ಕರ್ನಾಟಕದಲ್ಲಿ ಮಳೆ
ಬೆಂಗಳೂರು, ಅಕ್ಟೋಬರ್ 18: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜನರು ಸುಧಾರಿಸಿಕೊಳ್ಳುವ ಮೊದಲೇ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸೋಮವಾರ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೂರು ದಿನ ಮಳೆಯಾಗಲಿದೆ.
ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ವಾಯುಭಾರ ಕುಸಿತದ ಪರಿಣಾಮ ಉತ್ತರ ಕರ್ನಾಟಕದಲ್ಲಿಯೂ ಮತ್ತೆ ಮಳೆಯಾಗಲಿದೆ. ಭಾರಿ ಮಳೆಯ ಮುನ್ಸೂಚನೆ ಇಲ್ಲವಾದರೂ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಭೀಮಾ ನದಿಗೆ ಬಿಟ್ಟಿರುವುದರಿಂದ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ, ಪ್ರವಾಹದಿಂದಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲಬುರಗಿ ಜಿಲ್ಲೆಗೆ ರಕ್ಷಣಾ ಕಾರ್ಯಕ್ಕಾಗಿ ಸೇನೆಯನ್ನು ನಿಯೋಜನೆ ಮಾಡಲಾಗಿದೆ.
ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಬಗ್ಗೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಕ್ಟೋಬರ್ 21ನೇ ಬುಧವಾರ ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಲಿದ್ದಾರೆ.












Click it and Unblock the Notifications