ಮೇಲ್ಮೈ ಸುಳಿಗಾಳಿ: ರಾಜ್ಯದಲ್ಲಿ ಇಂದು ಮಳೆ ಸಾಧ್ಯತೆ
ಬೆಂಗಳೂರು, ಮೇ 17: ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಮೇ 17,20 ಹಾಗೂ 21ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಜೋರಾದ ಮಳೆ ಸುರಿಯಲಿದೆ.
ಮೇ ತಿಂಗಳಿನಲ್ಲಿ ಸೆಕೆ ಹೆಚ್ಚುವ ದಿನಗಳಿಗಿಂತ ಮಳೆಯ ದಿನಗಳೇ ಹೆಚ್ಚಾಗಿವೆ. ತಿಂಗಳ ಆರಂಭದಿಂದಲೂ ಮಳೆ ಸುರಿಯುತ್ತಿದ್ದು, ಇನ್ನೂ ಮೇ 21ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೋರಾದ ಗಾಳಿ ಸಹಿತ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 17ರಂದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಕರಾವಳಿಯಲ್ಲಿ ಮಳೆ ಬೀಳಲಿದೆ. ಮೇ 20 ಹಾಗೂ 21 ರಂದು ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿ ಸಮುದ್ರದ ನೈಋತ್ಯ ಭಾಗದಿಂದ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯವಾರದು ಎಂದು ಸೂಚನೆ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಕಿತ್ತೂರು ಭಾಗದಲ್ಲಿ ಬುಧವಾರ ಸಂಜೆ ಮಳೆಯಾಗಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.9 ಡಿಗ್ರಿ ಸೆಲ್ಸಿಯಸ್, ಕೆಐಎಎಲ್ನಲ್ಲಿ ಗರಿಷ್ಠ 32.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್, ಎಚ್ಎಎಲ್ನಲ್ಲಿ ಗರಿಷ್ಠ 31.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ 22.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಕೊಡಗಿನಲ್ಲಿ 4ಸೆಂ.ಮೀ, ಚಿಕ್ಕೋಡಿ, ಅಫ್ಜಲ್ಪುರ, ಸರಗೂರು, ಬೆಂಗಳೂರು ಗ್ರಾಮಾಂತರದ ಗೋಪಾಲನಗರ, ಸುಳ್ಯ, ಗೌರಿಬಿದನೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.












Click it and Unblock the Notifications