Bengaluru Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯ ಮುನ್ಸೂಚನೆ
ಬೆಂಗಳೂರು, ಮಾರ್ಚ್ 18: ಒಂದೆಡೆ ಬಿಸಿಲಿನ ಝಳ, ಮತ್ತೊಂದೆಡೆ ನೀರಿನ ಕೊರತೆಯಿಂದ ರಾಜ್ಯದ ಜನ ಹೈರಾಣಾಗಿ ಹೋಗಿದ್ದಾರೆ. ಈ ಬಾರಿಯ ಬಿರು ಬೇಸಿಗೆಗೆ ಜನ ಕಂಗಾಲಾಗಿ ಹೋಗಿದ್ದು, ಯಾವಾಗ ವರುಣ ದೇವ ಕೃಪೆ ತೋರಿ ಧರೆಗಿಳಿಯುತ್ತಾನೆ ಎಂದು ಆಕಾಶದತ್ತ ನೋಡುತ್ತಿದ್ದಾರೆ.
ಈ ಬಾರಿ ನಿರೀಕ್ಷೆಗೂ ಮೊದಲೇ ನೀರಿನ ಬಿಕ್ಕಟ್ಟು ಆರಂಭವಾಗಿದ್ದು, ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ನೀರಿಗೆ ಹಾಹಾಕಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜನ ಮಳೆಗಾಗಿ ಕಾಯುತ್ತಿದ್ದಾರೆ. ಬಿಸಿಲಿನ ಧಗೆ ಕಡಿಮೆಯಾಗಲು ಹಾಗೂ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳದಿರಲಿ ಎಂದು ಜನ ಪ್ರಾರ್ಥಿಸುತ್ತಿದ್ದಾರೆ. ಈ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಜನರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ವರದಿಯಾಗಿದೆ. ಬಿಸಿಲಿ ಝಳಕ್ಕೆ ಕಾದಿದ್ದ ಭೂಮಿಗೆ ವರುಣ ಸದ್ಯದಲ್ಲೇ ತಂಪೆರೆಯಲಿದ್ದಾನೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದ್ದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಒಣ ಹವೆ ಮುಂದುವರೆಯಲಿದ್ದು, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಳಗಾವಿ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಮುಂದುವರೆಯಲಿದೆ.












Click it and Unblock the Notifications