Karnataka Rain Alert: ಕರ್ನಾಟಕದ ಮೇಲೆ ವರುಣನ ಕೃಪೆ: ಇಂದು ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ
ಬೆಂಗಳೂರು, ಏಪ್ರಿಲ್ 13: ಬಿರು ಬಿಸಿಲಿನಿಂದ ತತ್ತರಿಸಿ ಹೋಗಿದ್ದ ಕರ್ನಾಟಕದ ಜನತೆಗೆ ವರುಣ ಕೃಪೆ ತೋರಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ. ಸದ್ಯ ಕರ್ನಾಟಕದ ಕೆಲವು ಭಾಗಗಳಲ್ಲಿ ತಂಪಾದ ವಾತಾವರಣವಿದ್ದು, ಇನ್ನೂ ಕೆಲವು ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣವಿದೆ.
ರಾಜ್ಯದ ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಶುಕ್ರವಾರ ಮಳೆ ಸುರಿದಿದ್ದು, ಬಿಸಿಲಿನ ಝಳಕ್ಕೆ ತತ್ತರಿಸಿದ್ದ ಜನರಿಗೆ ತುಸು ತಂಪೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಹಾಸನ, ಸಕಲೇಶಪುರ, ಹಾವೇರಿ, ಬೀದರ್, ಹುಣಸೂರು, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಮಡಿಕೇರಿಯಲ್ಲಿ ಮಳೆಯಾಗಿದ್ದು ಭೂಮಿ ತಂಪಾಗಿದೆ.

ಸದ್ಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ವಾರಾಂತ್ಯ ಅಂದರೆ ಇಂದು ಮತ್ತು ನಾಳೆ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಏಪ್ರಿಲ್ 13 ಮತ್ತು ಏಪ್ರಿಲ್ 14ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳ ಕೆಲವೆಡೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ನಿನ್ನೆ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ 1 ರಿಂದ 3 ಸೆಂ.ಮೀ. ಮಳೆಯಾಗಿದೆ. ಕೊಡಗು ಜಿಲ್ಲೆಯ ನಾಪೋಕ್ಲು ಪಟ್ಟಣ ಸೇರಿ ನಾನಾ ಕಡೆ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹ ರಾಜಪುರ, ಶೃಂಗೇರಿ ತಾಲೂಕುಗಳ ಬಹುಭಾಗದಲ್ಲಿ ಗಾಳಿ ಸಹಿತ 20 ನಿಮಿಷಕ್ಕೂ ಹೆಚ್ಚು ಮಳೆಯಾಗಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯಾದ್ಯಂತ ಅರ್ಧ ಗಂಟೆ ಮಳೆ ಆಗಿದ್ದು, ಕಾಫಿ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ.
ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆ
ಹವಾಮಾನ ವರದಿಯಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ವೇಳೆ ಭಾರೀ ಮಳೆಯಾಗಿದ್ದು, ಕಾದ ಕಾವಲಿಯಂತಾದ ಭೂಮಿ ತಂಪಾಗಿದೆ. ಕಳೆದೆರಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆಯಾಗಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆ ಆಗುತ್ತಿದೆ. ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರು, ಸೇರಿದಂತೆ ಚಿಕ್ಕಮಗಳೂರು ನಗರ, ಮಲ್ಲೇನಹಳ್ಳಿ, ಖಾಂಡ್ಯ, ಮುತ್ತೋಡಿ ಭಾಗದಲ್ಲಿ ಸುಮಾರು ಒಂದು ಗಂಟೆಗಳ ನಿರಂತರ ಕಾಲ ಮಳೆಯಾಗಿದೆ. ಇನ್ನು ಕೊಡಗು ಜಿಲ್ಲೆಯ ಮಡಿಕೇರಿ ಸುತ್ತಮುತ್ತ ವರ್ಷದ ಮೊದಲ ಮಳೆಯಾಗಿದ್ದು, ಜನ ಫುಲ್ ಖುಷಿಯಾಗಿದ್ದಾರೆ.












Click it and Unblock the Notifications