ಸೆಪ್ಟೆಂಬರ್ 8 ರ ನಂತರ ಮಳೆ: ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಮುಂಗಾರು ಕೊರತೆ- ವರದಿ, ವಿವರ
ಬೆಂಗಳೂರು, ಆಗಸ್ಟ್ 30: ರಾಜ್ಯದಲ್ಲಿ ಶೇ.21ರಷ್ಟು ಮಳೆ ಕೊರತೆ ದಾಖಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.35ರಷ್ಟು ಕೊರತೆಯಿದೆ. ಈ ವಿಚಾರವಾಗಿ 'ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್'ಗೆ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 8 ರ ವರೆಗೆ ತಾಪಮಾನ ಏರಿಕೆ ಮುಂದುವರಿಯಲಿದೆ. ನಂತರ ರಾಜ್ಯದಲ್ಲಿ ಹದಿನೈದು ದಿನಗಳ ಕಾಲ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಐಎಂಡಿ ದಾಖಲೆಗಳ ಪ್ರಕಾರ, ಸೆಪ್ಟೆಂಬರ್ನಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಮಳೆಯು 16 ಸೆಂ.ಮೀ ದಾಖಲಾಗುತ್ತಿತ್ತು. ಆಗಸ್ಟ್ ತಿಂಗಳಲ್ಲಿ ಸಾಮಾನ್ಯ ಮಳೆ 21.7 ಸೆಂ.ಮೀ ಆಗುತ್ತಿತ್ತು. ಆದರೆ, ರಾಜ್ಯದಲ್ಲಿ ಆಗಸ್ಟ್ 29, 2023 ರ ವರೆಗೆ ಕೇವಲ 5.2 ಸೆಂ.ಮೀ ಆಗಿದೆ.
ನೈಋತ್ಯ ಮಾನ್ಸೂನ್ ಹಿಮಾಲಯದತ್ತ ಸಾಗಿದೆ ಎಂದು ಐಎಂಡಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದ್ದರಿಂದ, ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಮಾನ್ಸೂನ್ ದುರ್ಬಲವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ತಮಿಳುನಾಡಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಆದರೆ ಕಾವೇರಿ ಜಲಾನಯನ ಪ್ರದೇಶ ಮತ್ತು ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದೆ.

ಮುಂದಿನ 48 ಗಂಟೆಗಳಲ್ಲಿ ತಮಿಳುನಾಡಿನಲ್ಲಿ ಭಾರೀ ಮಳೆ (7 ಸೆಂ.ಮೀ.ಗಿಂತ ಹೆಚ್ಚು) ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಪಶ್ಚಿಮ ಘಟ್ಟ, ನೀಲಗಿರಿ ಮತ್ತು ಕೊಯಮತ್ತೂರು ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
'ಮೆಟ್ಟೂರು ಅಣೆಕಟ್ಟು ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ (ಕರ್ನಾಟಕ ಮತ್ತು ತಮಿಳುನಾಡಿನಲ್ಲಿ) ಸೆಪ್ಟೆಂಬರ್ 8 ರಿಂದ ಮಳೆಯಾಗುತ್ತದೆ. ಆದರೆ ಸೆಪ್ಟೆಂಬರ್ನಲ್ಲಿ ಸಾಮಾನ್ಯ ಮಳೆಯ ಪ್ರಮಾಣ ಹೆಚ್ಚಾಗುವುದಿಲ್ಲ. ಮುನ್ಸೂಚನೆಯ ಪ್ರಕಾರ, ಮುಂಗಾರು ದುರ್ಬಲವಾಗಿರುತ್ತದೆ' ಎಂದು ಅಧಿಕಾರಿ ಹೇಳಿದ್ದಾರೆ.
ಸೆಪ್ಟೆಂಬರ್ನಲ್ಲಿ ಮಳೆಯ ಮುನ್ಸೂಚನೆ ಸಾಮಾನ್ಯಕ್ಕಿಂತ ಹೆಚ್ಚಿದ್ದರೂ ಕೊರತೆಯನ್ನು ನೀಗಿಸುವುದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಬರಪೀಡಿತ ತಾಲೂಕು ಘೋಷಣೆಗೆ ಸಿದ್ದತೆ
ಕರ್ನಾಟಕದಲ್ಲಿ ಮಳೆ ಅಭಾವವಿರುವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ಸರ್ಕಾರ ಮುಂದಾಗಿದೆ. ಬೆಳೆ ಸಮೀಕ್ಷೆ ನಡೆಸಿ 10 ದಿನದೊಳಗೆ ವರದಿಯನ್ನು ರಾಜ್ಯ ಸರಕಾರಕ್ಕೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸಚಿವ ಸಂಪುಟ ಉಪಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, 'ಕರ್ನಾಟಕದ ಕೆಲವು ಭಾಗಗಳಲ್ಲಿ ಬೆಳೆದು ನಿಂತಿರುವ ಬೆಳೆಗಳು ಒಣಗುವ ಅಪಾಯವನ್ನು ಎದುರಿಸುತ್ತಿವೆ. ಆಗಸ್ಟ್ ಕೊನೆಯ ವಾರದ ಮಳೆಯ ಮುನ್ಸೂಚನೆಯು ಆಶಾದಾಯಕವಾಗಿಲ್ಲ' ಎಂದು ಹೇಳಿದ್ದಾರೆ.
'ಕೇಂದ್ರ ಸರ್ಕಾರವು ಬರ ಘೋಷಣೆಗೆ ಮಾನದಂಡಗಳನ್ನು ನಿಗದಿಪಡಿಸಿದೆ. ಕರ್ನಾಟಕದ ಸುಮಾರು 120 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದೆ. ಆದರೆ ಬರ ಘೋಷಣೆ ಮಾಡುವ ಮುನ್ನ ಕೇಂದ್ರದ ಸೂಚನೆಯಂತೆ ಬೆಳೆ ಸಮೀಕ್ಷೆ ಮಾಡಬೇಕು' ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.












Click it and Unblock the Notifications