ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆ.21ರ ತನಕ ಮಳೆ
ಬೆಂಗಳೂರು, ಆಗಸ್ಟ್ 18 : ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಚುರುಕಾಗಿದೆ. ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರಿ ಮಳೆಯಾಗಲಿದೆ.
Recommended Video
ಹವಾಮಾನ ಇಲಾಖೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆಗಸ್ಟ್ 21ರ ತನಕ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.
ಬೆಳಗಾವಿಯಲ್ಲಿ ವ್ಯಾಪಕ ಮಳೆ: ನದಿತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ
ಇಂದು ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಕಲಬುರಗಿ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಮಳೆ ಆರ್ಭಟ ಮತ್ತೆ ಆರಂಭ, ಜಲಾಶಯ ನೀರಿನ ಮಟ್ಟ ಎಷ್ಟಿದೆ?
ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. 3.2 ಮೀಟರ್ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 21ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಳಗಾವಿ ಜಿಲ್ಲೆಯಾದ್ಯಂತ ಮುಂದುವರೆದ ಮಳೆ ಅಬ್ಬರ, ಜನಜೀವನ ಅಸ್ತವ್ಯಸ್ತ
ಎಲ್ಲಿ, ಎಷ್ಟು ಮಳೆಯಾಗಿದೆ?
ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಸೋಮವಾರ ಗರಿಷ್ಠ 23 ಸೆಂ. ಮೀ. ಮಳೆಯಾಗಿದೆ. ಕೊಲ್ಲೂರು 21, ಸಿದ್ದಾಪುರ 19, ಆಗುಂಬೆ 17, ಭಟ್ಕಳ 15, ಕುಂದಾಪುರ 12, ಅಂಕೋಲಾ 8, ಬೆಳಗಾವಿ ಮತ್ತು ಶೃಂಗೇರಿಯಲ್ಲಿ 7 ಸೆಂ. ಮೀ. ಮಳೆ ಸುರಿದಿದೆ.
ಮನೆಗಳಿಗೆ ಹಾನಿ
ಕರಾವಳಿ ಮತ್ತು ಮಲೆನಾಡಿನ ಭಾಗದಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಭದ್ರಾ ಮತ್ತು ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾರ್ಕಳದ ಬೆಳ್ಮಣ್ಣು ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಎನ್. ಆರ್. ಪುರ, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆಯಾಗಿದೆ. ಕೊಡಗು ಮತ್ತು ಹಾಸನದಲ್ಲೂ ಉತ್ತಮ ಮಳೆಯಾಗಿದೆ.
ಮಹಾರಾಷ್ಟ್ರದಲ್ಲಿ ಮಳೆ
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಯ್ನಾ ಜಲಾಶಯದಿಂದ 55,958 ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ.
ವಿವಿಧ ಗ್ರಾಮಗಳಲ್ಲಿ ಪ್ರವಾಹ ಭೀತಿ
ಬೆಳಗಾವಿಯ ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ 40 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಸವದತ್ತಿಯ ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 26 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ರಾಮದುರ್ಗ, ನರಗುಂದ, ರೋಣ ಮುಂತಾದ ಪ್ರದೇಶಗಳಲ್ಲಿ ಹಲವು ಗ್ರಾಮಗಳು ಜಲಾವೃತವಾಗುವ ಭೀತಿ ಎದುರಾಗಿದೆ. ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತವಾಗಿದೆ.